ಯಕ್ಷಗಾನ ಲೋಕ ಕಂಡ ಶ್ರೇಷ್ಠ ಭಾಗವತರಲ್ಲೊಬ್ಬರಾದ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ನಿಧನರಾಗಿದ್ದಾರೆ. ತಮ್ಮ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಆಗಲಿ ಅವರು ಇಹಲೋಕವನ್ನು ತ್ಯಜಿಸಿದ್ದಾರೆ. ಇತ್ತೀಚಿಗೆ ಕೆಲವು ತಿಂಗಳುಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರು ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಯಕ್ಷಗಾನ ಲೋಕ ಕಂಡ ಸಮರ್ಥ ಭಾಗವತ, ನಿರ್ದೇಶಕ. ಪ್ರಸಂಗಕರ್ತ ಹೀಗೆ ಯಕ್ಷಗಾನದ ಹಲವಂಗಗಳಲ್ಲಿ ವಿದ್ವಾಂಸರಾಗಿದ್ದ ಅವರ ಅಗಲಿಕೆ ಈ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ ಎಂಬುದರಲ್ಲಿ ಸಂಶಯವಿಲ್ಲ. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಯಕ್ಷರಂಗದಲ್ಲಿ ನಡೆದು ಬಂದ ಹಾದಿಯ ಸಣ್ಣ ಪರಿಚಯ ಇಲ್ಲಿದೆ.
ಮಂಗಳೂರು ತಾಲೂಕಿನ ಮಂಜನಾಡಿ ಎಂಬ ಪುಟ್ಟ ಗ್ರಾಮ. ಆ ಊರಿನ ಯುವಕನೊಬ್ಬ ಕಣ್ಣುಗಳ ತುಂಬ ಕನಸುಗಳನ್ನು ಹೊತ್ತು ಮುಂಬೈ ಮಹಾನಗರದತ್ತ ಪ್ರಯಾಣ ಬೆಳೆಸಿದ. ತನ್ನ ಕಲ್ಪನೆಯ ಮಹಾನಗರದಲ್ಲಿ ಕೊನೆಗೂ ಕೆಲಸವನ್ನು ಗಿಟ್ಟಿಸಿದ. ಉದ್ಯೋಗದೊಂದಿಗೇ ತನ್ನ ವಿದ್ಯಾರ್ಥಿ ದೆಸೆಯಿಂದಲೇ ಅಂಟಿಸಿಕೊಂಡಿದ್ದ ಗೀಳು ಯಕ್ಷಗಾನವನ್ನು ಮರೆಯಲಿಲ್ಲ. ಕೆಲಸದ ಜೊತೆಗೆ ಹವ್ಯಾಸೀ ಕಲಾಸೇವೆಯ ನಂಟು ಬೆಳೆಯುತ್ತಾ ಹೋಯಿತು. ಕೆಲಸ ಮಾಡುತ್ತಿರುವ ಸಂಸ್ಥೆಯ ಮುಖ್ಯಸ್ಥರೊಂದಿಗಿನ ವೈಯಕ್ತಿಕ ಭಿನ್ನಾಭಿಪ್ರಾಯವು ಅವನನ್ನು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಮಾಡಿತು. ಅವರೇ ಬೊಟ್ಟಿಕೆರೆ ಪುರುಷೋತ್ತಮ ಪೂಂಜ.
ಮಂಗಳೂರು ತಾಲೂಕು ಮಂಜನಾಡಿ ಗ್ರಾಮದ ಬೊಟ್ಟಿಕೆರೆ ಎಂಬಲ್ಲಿ ಶ್ರೀ ತ್ಯಾಂಪಣ್ಣ ಪೂಂಜ. ಶ್ರೀಮತಿ ಜಲಜಾ ದಂಪತಿಗಳ ಸುಪುತ್ರನಾಗಿ ಜನಿಸಿದ ಪುರುಷೋತ್ತಮ ಪೂಂಜರ ಯಕ್ಷಗುರುಗಳು ಆನೆಗುಂಡಿ ಗಣಪತಿ ಭಟ್ಟರು. ಪೂಂಜರು ಐದನೇ ತರಗತಿಯ ವರೆಗೆ ಅಸೈಗೋಳಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಾಲೆಯ ಶಿಕ್ಷಕರಿಗೆ ಯಕ್ಷಗಾನದ ಬಗ್ಗೆ ವಿಶೇಷ ಒಲವಿತ್ತು. ಪೂಂಜರಿಗೂ ಅದರ ಬಗ್ಗೆ ಕುತೂಹಲವಿತ್ತು. ನಂತರ ಕೈರಂಗಳ ಸಮೀಪದ ಶಾಲೆಯಲ್ಲಿ ಕಲಿಯುತ್ತಿರುವಾಗ ಅಲ್ಲಿ ಯಕ್ಷಗಾನ ಸಂಘವೇ ಇತ್ತು. ಇವರ ಅಣ್ಣ ಶ್ರೀ ಸೀತಾರಾಮ ಪೂಂಜರು ಅಲ್ಲೇ ಶಿಕ್ಷಕರಾಗಿದ್ದರು. ಅವರು ಯಕ್ಷಗಾನದ ಭಾಗವತಿಕೆ ಅಭ್ಯಾಸ ಮಾಡುತ್ತಿದ್ದರು. ಬಾಲ್ಯ ಸಹಜ ಕುತೂಹಲದಿಂದ ಪುರುಷೋತ್ತಮ ಪೂಂಜರು ಅವರು ಅಭ್ಯಾಸ ಮಾಡುತ್ತಿದ್ದ ಪುಸ್ತಕಗಳನ್ನು ಬಿಡಿಸಿ ನೋಡುತ್ತಿದ್ದರು.
ಶಾಲೆಯ ವಾರ್ಷಿಕೋತ್ಸವದ ದಿನ ಪೆರ್ಲ ಕೃಷ್ಣ ಭಟ್ಟರು ಬರೆದ “ತಾಳ ಮದ್ದಳೆ” ಎಂಬ ಪ್ರಹಸನವನ್ನು ಶಿಕ್ಷಕರಿಗೋಸ್ಕರ ಏರ್ಪಡಿಸಿದರು. ಅದರಲ್ಲಿ ಭಾಗವತರ ಪಾತ್ರವನ್ನು ಮಾಡಲು ಶಿಕ್ಷಕರಲ್ಲಿ ಯಾರೂ ಸಿಕ್ಕದ ಕಾರಣ ಭಜನೆ ಹಾಡಿ ಅಭ್ಯಾಸವಿದ್ದ ಬೊಟ್ಟಿಕೆರೆಯವರನ್ನು ಆಯ್ಕೆ ಮಾಡಿದರು. ಆ ಪಾತ್ರವು ಮೂರು ನಾಲ್ಕು ಪದ್ಯ ಹಾಡಬೇಕಾಗಿತ್ತು. ಅದಕ್ಕೆ ಬೇಕಾದ ತಾಳ, ಮಟ್ಟುಗಳನ್ನು ಅವರಿಗೆ ಕಲಿಸಲಾಯಿತು. ಅವರು ಆ ಪಾತ್ರವನ್ನು ನಿರ್ವಹಿಸಿದರು. ಹಾಗೆ ಹುಟ್ಟಿದ ಯಕ್ಷಗಾನದ ನಂಟು ಕೊನೆಯ ವರೆಗೆ ಬಿಡಲಿಲ್ಲ.
ಮುಮ್ಮೇಳದಲ್ಲಿ ಕಲಾವಿದನಾಗಿ ಕೂಡಾ ನಿರ್ವಹಿಸುತ್ತಿದ್ದ ಪೂಂಜರು ಹೆಚ್ಚಾಗಿ ಕೃಷ್ಣ, ರಾಮ ಹಾಗೂ ಇದೇ ತರಹದ ಪಾತ್ರಗಳನ್ನು ಮಾಡುತ್ತಿದ್ದರು. ಕೀರೀಟ ವೇಷಗಳಾದ ಕರ್ಣ, ಕೌರವ, ಅತಿಕಾಯ ಇತ್ಯಾದಿಗಳನ್ನು ಕೂಡಾ ನಿರ್ವಹಿಸಿದ್ದರು. ಯಕ್ಷಗಾನದಲ್ಲಿ ಚಿಕ್ಕಂದಿನಲ್ಲೇ ಆಸಕ್ತಿ ಇದ್ದುದರಿಂದ ಅವಕಾಶ ಸಿಕ್ಕಾಗಲೆಲ್ಲಾ ಆ ಕಲೆಯ ಒಂದೊಂದೇ ಅಂಗಗಳನ್ನೇ ಕಲಿಯುತ್ತಾ ಬಂದರು. ಸಿಕ್ಕ ಅವಕಾಶಗಳನ್ನೆಲ್ಲಾ ಉಪಯೋಗಿಸಿಕೊಂಡರು. ಯಕ್ಷಗಾನದ ಎಲ್ಲಾ ಅಂಗಗಳಲ್ಲೂ ಪರಿಪೂರ್ಣ ಅಲ್ಲದಿದ್ದರೂ ಒಂದಷ್ಟು ತಿಳುವಳಿಕೆ ಪಡೆಯುತ್ತಾ ಬಂದರು. ಆ ನಂತರ ಯಕ್ಷಗಾನದ ಆಕರ್ಷಣೆ ದೂರವಾಗಲಿಲ್ಲ.
ಕಾಲೇಜು ಕಲಿಯುವ ದಿನಗಳಲ್ಲಿ ಹವ್ಯಾಸಿ ಕಲಾವಿದನಾಗಿ ಕೈರಂಗಳ ಗೋಪಾಲಕೃಷ್ಣ ಯಕ್ಷಗಾನ ಸಂಘದ ಕಾರ್ಯಕ್ರಮದಲ್ಲಿ ಪಾಲುಗೊಳ್ಳುತ್ತಿದ್ದರು. ಈ ಸಂಘದ ವೇಷ ಭೂಷಣಗಳನ್ನು ಯಕ್ಷಗಾನ ನಡೆಯುವಲ್ಲಿಗೆ ಕೊಂಡು ಹೋಗಬೇಕಿತ್ತು. ಜೊತೆಗೆ ಪೂಂಜರೂ ಹೋಗುತ್ತಿದ್ದರು. ಮೇಕಪ್ ಕೂಡಾ ಮಾಡುತ್ತಿದ್ದರು. ಅಲ್ಲಿ ಹೋದ ನಂತರ ಅವಕಾಶ ಸಿಕ್ಕಿದಾಗ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರು. ಹಿಮ್ಮೇಳ ಅಥವಾ ವೇಷಧಾರಿಯಾಗಿ ಪರಿಪೂರ್ಣ ಅಲ್ಲದಿದ್ದರೂ ಯಕ್ಷಗಾನದ ಎಲ್ಲ ಅಂಗಗಳಲ್ಲಿಯೂ ಕೈಯಾಡಿಸುವ ಅವಕಾಶ ಲಭ್ಯವಾಯಿತು.
ಪದವಿ ಶಿಕ್ಷಣ ಪಡೆಯುತ್ತಿರುವಾಗ ಕಾಲೇಜಿನ ಯಕ್ಷಗಾನ ಕಾರ್ಯಕ್ರಮಗಳಲ್ಲಿ ಹಾಗೂ ಹವ್ಯಾಸಿ ಸಂಘಗಳಲ್ಲಿ ಒಬ್ಬ ಕಲಾವಿದನಾಗಿ ರೂಪುಗೊಂಡ ಪೂಂಜರು ಆಗ ಹೆಚ್ಚಾಗಿ ವೇಷಧಾರಿಯಾಗಿದ್ದರೂ ಪರಿಸ್ಥಿತಿ ಬಂದೊದಗಿದಾಗ ಭಾಗವತಿಕೆ, ಹಾಗೂ ಹಿಮ್ಮೇಳವಾದನ ಕೂಡಾ ಮಾಡುತ್ತಿದ್ದರು. ಕೆಲವೊಮ್ಮೆ ಪ್ರಧಾನ ಭಾಗವತರು ಏರುಸ್ತಾಯಿಯಲ್ಲಿ ಹಾಡುತ್ತಿರುವಾಗ ಸ್ವರ ಬಿದ್ದು ಹೋಗುವ ಸಂದರ್ಭದಲೆಲ್ಲಾ ಪೂಂಜರು ವೇಷ ಕಳಚಿ ಭಾಗವತಿಕೆ ಮಾಡಿದ್ದುಂಟು.
ಮುಂದೆ ಉದ್ಯೋಗದ ನಿಮಿತ್ತ ಮುಂಬೈಗೆ ತೆರಳಿದರು. ಅಲ್ಲಿ ಕೂಡಾ ಯಕ್ಷಗಾನದ ನಂಟು ಮುಂದುವರೆಯಿತು. ಹಲವು ಯಕ್ಷಗಾನ ಮಂಡಳಿಗಳಿರುವ ಮುಂಬೈಯಲ್ಲಿ ಗೀತಾಂಬಿಕಾ ಮಂಡಳಿಯಲ್ಲಿ 7 ವರ್ಷ ಸದಸ್ಯನಾಗಿ, ವೇಷಧಾರಿಯಾಗಿ, ಭಾಗವತನಾಗಿ ಕೆಲಸ ಮಾಡಿದರು. ಈ ಎಲ್ಲಾ ಅನುಭವಗಳು ಮೇಳದ ಕಲಾವಿದನಾಗಲು ಮಾರ್ಗಸೂಚಿಯಾಯಿತು. ಅದೇ ಸಂದರ್ಭದಲ್ಲಿ ಕೆಲಸ ಮಾಡುತ್ತಿರುವ ಕಂಪೆನಿಯಲ್ಲಿ ಭಡ್ತಿ ವಿಷಯದಲ್ಲಿ ವ್ಯವಸ್ಥಾಪಕರೊಡನೆ ವಾಗ್ವಾದವಾಯಿತು. ಅದರಿಂದ ಬೇಸರಿಸಿ ಕೆಲಸಕ್ಕೆ ರಾಜೀನಾಮೆ ನೀಡಿ ಊರಿಗೆ ಮರಳಿದರು. ಆ ಮೇಲೆ ಪುತ್ತೂರು ಮೇಳದಲ್ಲಿ ಭಾಗವತನಾಗಿ ಸೇರಿದ ಆ ವರ್ಷವೇ ಅವರು ಬರೆದ ‘ಪಟ್ಟದ ಕತ್ತಿ’ ಎಂಬ ಪ್ರಸಂಗವನ್ನು ಮೇಳಕ್ಕೆ ಕೊಟ್ಟರು. ಹಾಗೆ ಪ್ರಾರಂಭವಾದ ಮೇಳದ ಬದುಕು ಇಂದಿನವರೆಗೂ ಮುಂದುವರೆಸಿಕೊಂಡು ಬಂದಿದ್ದರು.

“ತುಂಬಾ ಚೆನ್ನಾಗಿ ಹಾಡುವವರಿದ್ದಾರೆ. ಬೇರೇನೂ ವಿಷಯ ಗೊತ್ತಿಲ್ಲದವರೂ ಇದ್ದಾರೆ. ಭಾಗವತರಿಗೆ ಯಕ್ಷಗಾನದ ಸಮಗ್ರವಾದ ವಿಷಯ ಗೊತ್ತಿರಬೇಕು. ಮೂಲಭೂತ ವಿಷಯಗಳಾದ ರಾಗ, ತಾಳ, ಲಯ ಮಾತ್ರ ಗೊತ್ತಿದ್ದರೆ ಸಾಲದು. ಸಾಹಿತ್ಯ ಯಕ್ಷಗಾನಕ್ಕೆ ಸಂಬಂಧಿಸಿದ ಸಮಗ್ರ ವಿಷಯಗಳನ್ನು ತಿಳಿದಿರಬೇಕು. ಹೆಜ್ಜೆಗಾರಿಕೆ, ಹಿಮ್ಮೇಳದ ಚೆಂಡೆ, ಮದ್ದಳೆ ಬಗ್ಗೆಯೂ ಗೊತ್ತಿರಬೇಕು. ಮಾತ್ರವಲ್ಲ ವೇಷಧಾರಿಯ ಬಣ್ಣಗಾರಿಕೆಯ ಬಗ್ಗೆಯೂ ಜ್ಞಾನ ಮತ್ತು ಕಾಳಜಿಯನ್ನು ತೋರಿಸುವವರಾಗಿರಬೇಕು. ಇಂತಹಾ ಯಕ್ಷಗಾನದ ಸಮಗ್ರ ವಿಷಯಗಳ ಬಗ್ಗೆಯೂ ಅಧ್ಯಯನ ಕೈಗೊಂಡು ಅದರಲ್ಲಿ ಪರಿಪೂರ್ಣತೆಯನ್ನು ಸಾಧಿಸುವವರೇ ಪರಿಪೂರ್ಣ ಭಾಗವತ ಎಂದು ಕರೆಸಿಕೊಳ್ಳುತ್ತಾರೆ. ಸ್ವರ ಚೆನ್ನಾಗಿದ್ದು, ತಾಳ, ಲಯ ಹಿಡಿತ ಸಿಕ್ಕಿದಾಗ ನಾನು ಭಾಗವತನಾದೆ ಎಂದು ತಿಳಿದುಕೊಳ್ಳಬಾರದು” ಎನ್ನುತ್ತಾರೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜ.
“ಮೇಳದ ಬಿಡಾರದಲ್ಲ್ಲಿ ಉಳಿದುಕೊಳ್ಳುವಾಗ ಕೆಲವು ಸಮಸ್ಯೆಗಳು ಬರುತ್ತಿರುತ್ತವೆ. ಕುಡಿಯುವ ನೀರು ಬದಲಾಗುತ್ತಲೇ ಇರುವಾಗ ಕೆಲವೊಮ್ಮೆ ಸ್ವರಗಳು ಬೀಳುತ್ತಿತ್ತು. ಇದರಿಂದ ನಾನು ಪ್ರತಿದಿನವೂ ಮನೆಯಿಂದ ಕ್ಯಾಂಪ್, ಕ್ಯಾಂಪ್ನಿಂದ ಮನೆ ಹೀಗೆ ಪ್ರಯಾಣಿಸುತ್ತಿದ್ದೆ. ಸಮಯದ ಅಭಾವವಿದ್ದರೂ ಹಾಗೂ ಪ್ರಯಾಣ ಕಷ್ಟವಿದ್ದರೂ ನೆಮ್ಮದಿ ಇರುತ್ತಿತ್ತು. ಹೆಚ್ಚಾಗಿ ನನ್ನ ಬರವಣಿಗೆ ಎಲ್ಲಾ ಮೇಳದ ತಿರುಗಾಟದ ಅವಧಿಯಲ್ಲಿ ಇರಲಿಲ್ಲ. ಕೊನೆಯ ಸೇವೆಯಾಟದ ನಂತರ ನನ್ನ ಬರವಣಿಗೆ ಸಾಗುತಿತ್ತು. ಅನಿವಾರ್ಯ ಸಂದರ್ಭಗಳಲ್ಲಿ ಮೇಳದ ತಿರುಗಾಟದಲ್ಲಿ ಬರೆದದ್ದೂ ಉಂಟು. ‘ಮನ್ಮಥೋಪಖ್ಯಾನ’ ಹಾಗೂ ‘ಸತಿ ಉಲೂಪಿ’ ಎಂಬ ಪ್ರಸಂಗಗಳನ್ನು ತಿರುಗಾಟದ ಸಮಯದಲ್ಲಿ ಬರೆದಿದ್ದೆ. ನಿದ್ರೆಯ ಅಭಾವದಿಂದ ಅವುಗಳನ್ನು ಬರೆಯಲು ಸ್ವಲ್ಪ ಕಷ್ಟವಾಗಿತ್ತು. ಸ್ವಲ್ಪ ಬಿಡುವೇನಾದರೂ ಸಿಕ್ಕಿದರೆ, ಓದುವ ಹವ್ಯಾಸವಿದೆ. ವರ್ತಮಾನ ಪತ್ರಿಕೆಗಳನ್ನೋದುವುದು, ಬರೆಯುವ ಹವ್ಯಾಸ, ಕ್ರಿಕೆಟ್ ಮ್ಯಾಚ್ ನೋಡುವುದು,ಸಂಗೀತ ಕೇಳುವುದು ಮೊದಾದ ಹವ್ಯಾಸಗಳು ಕೂಡಾ ಇವೆ. ನನ್ನ ಕಾಲೇಜಿನ ದಿನಗಳಲ್ಲಿ ಕ್ರೀಡಾ ಪಟುವಾಗಿದ್ದೆ, ಕಾಲೇಜಿನ ವಾಲಿಬಾಲ್ ತಂಡದ ನಾಯಕನಾಗಿದ್ದೆ” ಎಂದು ಬೊಟ್ಟಿಕೆರೆಯವರು ನುಡಿಯುತ್ತಾರೆ.
ಯಕ್ಷಗಾನ ಕ್ಷೇತ್ರದಲ್ಲಿ ಅವರ ಅನುಭವ ಈ ರೀತಿ ಇದೆ.
ಉಪ್ಪಳ ಭಗವತಿ ಮೇಳ-ಒಂದು ವರ್ಷ
ಮುಂಬಯಿ ಗೀತಾಂಬಿಕಾ ಮಂಡಳಿ-ಏಳು ವರ್ಷ, ಪುತ್ತೂರು ಮೇಳ – ಎರಡು ವರ್ಷ, ಕರ್ನಾಟಕ ಮೇಳ –
ಐದು ವರ್ಷ, ಕಟೀಲು ಮೇಳ – ಇಪ್ಪತ್ತೆಂಟು ವರ್ಷಗಳಿಂದ.
ಬರೆದ ಪೌರಾಣಿಕ ಯಕ್ಷಗಾನ ಪ್ರಸಂಗಗಳು:
ಕನ್ನಡ ಪೌರಾಣಿಕ: ವಧುವೈಶಾಲಿನಿ, ಉಭಯಕುಲ ಬಿಲ್ಲೋಜ, ನಳಿನಾಕ್ಷನಂದಿನಿ, ಮಾನಿಷಾದ ಕ್ಷಾತ್ರ ಮೇಧ, ರಾಜಾದ್ರುಪದ, ಮಾತಂಗಕನ್ಯೆ, ಮನ್ಮಥೋಪಖ್ಯಾನ, ಗಂಡುಗಲಿ ಘಟೋತ್ಕಚ, ಪಾಂಚಜನ್ಯ, ಕಾರ್ತಿಕೇಯ ಕಲ್ಯಾಣ, ಗಾಂಗೇಯ, ಕಲಿಕೀಚಕ, ರುದ್ರಪಾದ, ಸತಿ ವಿಲೂಪಿ, ಬೋಪದೇವೋಪಾಖ್ಯಾನ, ದತ್ತಸಂಭವ ಇತ್ಯಾದಿ.
ಕನ್ನಡ ಕಾಲ್ಪನಿಕ ಪ್ರಸಂಗಗಳು : ಮೇಘ ಮಯೂರಿ, ಸ್ವರ್ಣನೂಪುರ, ಅಮೃತವರ್ಷಣಿ, ಮೇಘ ಮಾಣಿಕ್ಯ.
ತುಳು ಕಾಲ್ಪನಿಕ ಪ್ರಸಂಗಗಳು : ಪಟ್ಟದಕತ್ತಿ, ಬಂಗಾರ್ದಗೆಜ್ಜೆ, ದಳವಾಯಿ ಮುದ್ದಣ್ಣೆ, ನಲಿಕೆದ ನಾಗಿ, ಸ್ವರ್ಣ ಕೇದಗೆ, ಗರುಡ ಕೇಂಜವೆ.
ನೃತ್ಯ ರೂಪಕಗಳು : ಅಂಧಕ ನಿದಾನ, ಭುವನಾಭಿರಾಮ (ಕನ್ನಡ), ಜೇವು ಕೇದಗೆ (ತುಳು).
ಮಕ್ಕಳ ನಾಟಕ : ಹಿತ್ತಾಳೆ ಕಿವಿ. ಇತ್ತೀಚಿಗೆ ಪ್ರಕಟವಾದ ಪ್ರಸಂಗ ಪುಸ್ತಕಗಳು: ‘ಅಂಬುರುಹ ಲವ’ ಮತ್ತು ‘ಅಂಬುರುಹ ಕುಶ’
ತಾಳ ಲಯ ಪರಿಪಕ್ವತೆಗೆ ಇನ್ನೊಂದು ಹೆಸರಾದ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಪತ್ನಿ ಶೋಭಾ, ಮಕ್ಕಳು ಜೀವಿತೇಶ ಮತ್ತು ಪರೀಕ್ಷಿತ.
‘ಮಾನಿಷಾದ’ ದ ಕರ್ತೃವಿಗೆ ವಿಷಾದದ ಭಾವಪೂರ್ಣ ವಿದಾಯ.
- 6th Standard, Science, Chapter 3, Separation of Substances
- 7th Standard, English, Second Language, Chapter 3 – EKALAVYA
- 8th Standard, Science, Chapter 3, Health: The Ultimate Treasure
- 8th Standard, English FL, PROSE – 3, BEFORE THE MATCH
- 6th Standard, Social Science, Chapter 5 – RISE OF NEW RELIGIONS

