ಮಂಗಳೂರು: ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ, ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ.
ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2022 – 23 ನೇ ಸಾಲಿಗೆ ಪುಂಡಿಕಾಯಿ ಅವರ ಹೆಸರನ್ನು ಸೂಚಿಸಿದೆ. ಪ್ರಶಸ್ತಿಯು ರೂ. 10,000/- ನಗದು; ಶಾಲು,ಸ್ಮರಣಿಕೆ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.
ಪುಂಡಿಕಾಯಿ ಗೋಪಾಲಕೃಷ್ಣ ಭಟ್:
ಬಲಿಪ ಪರಂಪರೆಯ ಪ್ರಮುಖ ಕೊಂಡಿಯಾಗಿರುವ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಜನಿಸಿದ್ದು 1973 ಮೇ 14ರಂದು; ತಂದೆ ಗೋವಿಂದ ಭಟ್, ತಾಯಿ ಭವಾನಿ. ಅಡ್ಯನಡ್ಕದಲ್ಲಿ ತಮ್ಮ ಪ್ರಾಥಮಿಕ ಮತ್ತು ಪ್ರೌಢ ವಿದ್ಯಾಭ್ಯಾಸ ಪೂರೈಸಿ ವಿಟ್ಲ ಜೂನಿಯರ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದರು. ಬಳಿಕ ಮೂಡಬಿದ್ರೆ ಮಹಾವೀರ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದರು.
ಯಕ್ಷಗಾನದ ಹಾಡುಗಾರಿಕೆಯಲ್ಲಿ ಆಸಕ್ತರಾದ ಗೋಪಾಲಕೃಷ್ಣ ಭಟ್ಟರಿಗೆ ಮಾವ ಬಲಿಪ ನಾರಾಯಣ ಭಾಗವತರೇ ಆರಂಭಿಕ ಗುರುಗಳು. ಬಲಿಪ ವಿಶ್ವೇಶ್ವರ ಭಟ್ ಮತ್ತು ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದ ಭಾಗವತಿಕೆಯ ವಿವಿಧ ಆಯಾಮಗಳನ್ನು ಕಲಿತ ಅವರು ಕುಬಣೂರು ಶ್ರೀಧರಾಯರ ಮಾರ್ಗದರ್ಶನದಲ್ಲಿ ಯಕ್ಷಗಾನವನ್ನು ವೃತ್ತಿಯನ್ನಾಗಿ ಸ್ವೀಕರಿಸಿದರು. ಪ್ರಥಮವಾಗಿ ಬಪ್ಪನಾಡು ಮೇಳದಲ್ಲಿ ಒಂದು ವರ್ಷ ತಿರುಗಾಟ ನಡೆಸಿದ ಪುಂಡಿಕಾಯಿ ಬಳಿಕ ಕಾಟಿಪಳ್ಳ ಮೇಳದಲ್ಲಿ ಮತ್ತೊಂದು ವರ್ಷ ದುಡಿದರು. ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿಯಲ್ಲಿ 27 ವರ್ಷಗಳನ್ನು ಪೂರೈಸಿ ಕಳೆದ ಆರು ವರ್ಷಗಳಿಂದ ಪ್ರಧಾನ ಭಾಗವತರಾಗಿ ಪ್ರಸ್ತುತ ಆರನೇ ಮೇಳದಲ್ಲಿ ಕಲಾ ಸೇವೆಯನ್ನು ಮುಂದುವರಿಸುತ್ತಿದ್ದಾರೆ
ಯಕ್ಷಗಾನದ ಘರಾನವೆನಿಸಿದ ಬಲಿಪ ಶೈಲಿಯ ಹಾಡುಗಾರಿಕೆಯಲ್ಲಿ ಜನಪ್ರಿಯತೆ ಗಳಿಸಿರುವ ಪುಂಡಿಕಾಯಿ ಗೋಪಾಲಕೃಷ್ಣ ಭಟ್ಟರು ಯಕ್ಷಗಾನದ ಸಂಪ್ರದಾಯಗಳನ್ನು ತಿಳಿದ ಕೆಲವೇ ಭಾಗವತರಲ್ಲಿ ಒಬ್ಬರು. ಪತ್ನಿ ಹೇಮಲತಾ ಹಾಗೂ ಮಕ್ಕಳಾದ ದುರ್ಗಾ ಕಿರಣ್ ಮತ್ತು ಶ್ರೀಭವಾನಿಯವರನ್ನೊಳಗೊಂಡ ಸಂತೃಪ್ತ ಸಂಸಾರ ಹೊಂದಿದ್ದಾರೆ.
ಫೆ. 17 ಕ್ಕೆ ಪ್ರಶಸ್ತಿ ಪ್ರದಾನ :
ಫೆಬ್ರವರಿ 16 ರಂದು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಹತ್ತು ಸಮಸ್ತರ ವತಿಯಿಂದ ‘ದಾನಶೂರ ಕರ್ಣ’ ಹಾಗೂ 17ರಂದು ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಸೇವಾ ಬಯಲಾಟಗಳು ಜರಗಲಿವೆ.
ಫೆಬ್ರವರಿ 17 ರಂದು ಶುಕ್ರವಾರ ರಾತ್ರಿ ರಂಗಸ್ಥಳದಲ್ಲಿ ಜರಗುವ ದಿ.ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ದಿ.ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರ ಅಧ್ಯಕ್ಷತೆಯಲ್ಲಿ ಕಟೀಲು ಕ್ಷೇತ್ರದ ಆರ್ಚಕ ಅನಂತಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡುವರು. ಮಾಜಿ ಸಚಿವ ಬಿ. ರಮಾನಾಥ ರೈ, ಯಕ್ಷಗಾನ ವಿದ್ವಾಂಸ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅತಿಥಿಗಳಾಗಿ ಭಾಗವಹಿಸುವರು ಎಂದು ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

