ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಹಿರಿಯ ಅರ್ಥಧಾರಿ ಎಸ್. ಎಮ್. ಹೆಗಡೆ ಹಾಗೂ ಅರ್ಥಧಾರಿ, ಲೇಖಕ, ಚಿಂತಕ ಕೆ. ಎಲ್. ಕುಂಡಂತಾಯ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 23ರಿಂದ ಆರಂಭವಾಗಲಿದ್ದು, ಮೇ 29 ಭಾನುವಾರ ಸಂಜೆ 5.00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಎಸ್. ಎಮ್. ಹೆಗಡೆ ಮುಡಾರೆ
ಎಸ್. ಎಮ್. ಹೆಗಡೆ ಮುಡಾರೆಯವರು ಪ್ರಶಸ್ತಿಗೆ ಆಯ್ಕೆಯಾದ ನಂತರ ನಮ್ಮನ್ನಗಲಿದ್ದು ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು.
ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.
ಉಪ್ಪಿನಂಗಡಿ ವೇದಶಂಕರ ನಗರದ ಶ್ರೀರಾಮ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಕೇಂದ್ರವನ್ನು ಉಪ್ಪಿನಂಗಡಿ ಯಕ್ಷ ಸಂಗಮದ ಅಧ್ಯಕ್ಷ ಶ್ರೀ ರವೀಶ್ ಯೆಚ್. ಟಿ ದೀಪ ಬೆಳಗಿಸಿ ಉದ್ಘಾಟಿಸಿ ರಾಮಾಯಣ, ಮಹಾಭಾರತದ ಮೌಲ್ಯಗಳನ್ನು ತಾಳಮದ್ದಳೆ ಮತ್ತು ಯಕ್ಷಗಾನ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಯಕ್ಷ ಸಂಗಮ ಪ್ರಾಯೋಜಿತ ತರಬೇತಿಯನ್ನು ಸಂಸ್ಥೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶ್ರೀರಾಮ ಶಾಲೆಯ ಉಪಾಧ್ಯಕ್ಷೆ ಶ್ರೀಮತಿ ಅನುರಾಧ ಆರ್ ಶೆಟ್ಟಿ ಮಾತನಾಡಿ ಪುರಾಣ ವಾಚನ, ತಾಳಮದ್ದಳೆ ಮತ್ತು ಯಕ್ಷಗಾನ ಬಯಲಾಟವನ್ನು ವೀಕ್ಷಿಸಿದ ಅನುಭವವು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅನುಸರಿಸಲು ಮತ್ತು ಯಾವುದೇ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಆತ್ಮಶಕ್ತಿಯನ್ನು ನೀಡುವುದೆಂದು ತಿಳಿಸಿದರು.
ಸಮಾರಂಭದಲ್ಲಿ ಅತಿಥಿಗಳಾಗಿದ್ದ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಗವತ ಡಿ.ಕೆ ಆಚಾರ್ಯ ಆಲಂಕಾರು ಶುಭಹಾರೈಸಿದರು.
ರಾಮ ನಗರ ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷರಾದ ಉಮೇಶ್ ಶೆಣೈ. ಎನ್, ಸಂಜೀವ ಪಾರೆಂಕಿ, ಮೋಹನ್ ಭಟ್, ಲೋಕೇಶ್ ಆಚಾರ್ಯ ಸರಪಾಡಿ, ಶಾಲಾ ವಿದ್ಯಾರ್ಥಿ ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತರಬೇತಿ ಕೇಂದ್ರದ ಗುರುಗಳಾದ ಮಾಣಿ ಸತೀಶ್ ಆಚಾರ್ಯ ಪ್ರಸ್ತಾವನೆಗೈದರು. ಪ್ರದೀಪ್ ಆಚಾರ್ಯ ಸ್ವಾಗತಿಸಿ ಶ್ರೀರಾಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಮಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿಯ ಯಕ್ಷಗಾನ ಕಲಾರಂಗವು ಯಕ್ಷಗಾನ ಸಂಘಟನೆ-ಕಲಾವಿದರು ಮತ್ತು ಯಕ್ಷಗಾನ ವಿದ್ವಾಂಸರನ್ನು ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಇಪ್ಪತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾ ಬಂದಿದೆ.
ಈ ವರ್ಷದ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ ಕಲಾವಿದ, ಅರ್ಥಧಾರಿ, ಪ್ರಸಂಗಕರ್ತ, ಪತ್ರಿಕಾ ಸಂಪಾದಕ, ಲೇಖಕ, ಯಕ್ಷಗುರು ಹೀಗೆ ಕಲೆ-ಸಾಹಿತ್ಯ ಸಂಬ0ಧಿ ಬಹು ಆಯಾಮಗಳಲ್ಲಿ ಸಾಧನೆ ಮಾಡಿದ ತಾರಾನಾಥ ವರ್ಕಾಡಿಯವರನ್ನು ಸಂಸ್ಥೆ ಆಯ್ಕೆ ಮಾಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭ ಮೇ 22, 2022 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲಾಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ.
ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅತಿಥಿಗಣ್ಯರ ಸಮಕ್ಷ ಜರಗಲಿದೆ.
ಡಾ. ತಲ್ಲೂರು ಶಿವರಾಮ ಶೆಟ್ಟರ ನೇತೃತ್ವದ ತಲ್ಲೂರು ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಪ್ರಾಯೋಜಕತ್ವದ ಈ ಪ್ರಶಸ್ತಿಯು ರೂ. 40,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.