24ನೆಯ ‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ದ ಅಧ್ಯಕ್ಷರಾಗಿ ನಮ್ಮೆಲ್ಲರ ನೆಚ್ಚಿನ ಡಾ. ಎಂ. ಪ್ರಭಾಕರ ಜೋಶಿಯವರು ಆಯ್ಕೆಯಾಗಿದ್ದಾರೆ. 24ನೆಯ ‘ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ವು ಫೆಬ್ರವರಿ 12,13,14 ಈ ಮೂರು ದಿನಗಳಲ್ಲಿ ಮಂಗಳೂರು ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆಯಲಿದೆ.
ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಡಾ. ಪ್ರಭಾಕರ ಜೋಶಿಯವರು ಕಲಾವಿದನಾಗಿ ಪ್ರಸಿದ್ಧರಾದುದು ಮಾತ್ರವಲ್ಲದೆ ಸಾಹಿತ್ಯಲೋಕದ ಒಂದು ವಿಸ್ಮಯವಾಗಿ ಗೋಚರಿಸುತ್ತಾರೆ. ಯಕ್ಷಗಾನ ಲೋಕ ಈವರೆಗೆ ಕಂಡ ವಿದ್ವಾಂಸರಲ್ಲಿ ಡಾ. ಪ್ರಭಾಕರ ಜೋಶಿಯವರು ಅತಿ ವಿಶಿಷ್ಟ ಸ್ಥಾನದಲ್ಲಿ ನಿಲ್ಲುತ್ತಾರೆ. ಯಕ್ಷಗಾನ ಮಾತ್ರವಲ್ಲ. ವೇದ, ಪುರಾಣ, ಆಧುನಿಕ ಪ್ರಪಂಚದ ಆಗುಹೋಗುಗಳು, ತತ್ವಶಾಸ್ತ್ರ ಹೀಗೆ ಯಾವುದನ್ನೂ ಕೇಳಿದರೂ ಅದು ಹೀಗೆಯೇ ಎಂದು ಅವರು ಹೇಳಬಲ್ಲರು.
ತಾನು ಭೋದಿಸುತ್ತಿದ್ದ ವಾಣಿಜ್ಯಶಾಸ್ತ್ರದ ಉಪನ್ಯಾಸಕನಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ಯಕ್ಷಗಾನ ವಿದ್ವಾಂಸನಾಗಿ, ಕಾಲೇಜಿನ ಆಡಳಿತಾತ್ಮಕ ಹುದ್ದೆಯ ಪ್ರಾಂಶುಪಾಲನಾಗಿ, ಪ್ರಬುದ್ಧ ಲೇಖಕನಾಗಿ, ವಿಮರ್ಶಕನಾಗಿ, ಶೋಧನೆಯ ದೃಷ್ಟಿಯುಳ್ಳ ಸಂಶೋಧಕನಾಗಿ, ಅಂಕಣಕಾರನಾಗಿ, ಕಲಾವಿದನಾಗಿ, ಭಾಷಣಕಾರನಾಗಿ, ಅಪ್ರತಿಮ ವಾಕ್ಪಟುವಾಗಿ, ತತ್ವಶಾಸ್ತ್ರಜ್ಞನಾಗಿ, ಕವಿಯಾಗಿ, ನೂರಾರು ಕೃತಿಗಳು ಪ್ರಕಟಗೊಳ್ಳಲು ಕಾರಣರಾದ ಸಂಪಾದಕನಾಗಿ ಹೀಗೆ ಜೋಶಿಯವರು ಕೈ ಆಡಿಸದ ಕ್ಷೇತ್ರವಿಲ್ಲ.ಸಮ್ಮೇಳಾನಧ್ಯಕ್ಷರಾಗಿ ಜೋಶಿಯವರ ಆಯ್ಕೆಯಾದುದು ಸರ್ವರ ಮೆಚ್ಚುಗೆಯನ್ನು ಗಳಿಸಿದೆ ಮತ್ತು ಇದೊಂದು ಅರ್ಹವಾದ ಆಯ್ಕೆ. ಮಾತ್ರವಲ್ಲದೆ ಯಕ್ಷಗಾನ ಕ್ಷೇತ್ರಕ್ಕೂ ಹೆಮ್ಮೆಯನ್ನು ತಂದಿದೆ.
ಶ್ರೀ ಶಿವರಾಮ ಜೋಗಿ ಬಿ. ಸಿ. ರೋಡು ಅವರು ಯಾರನ್ನೂ ಅನುಕರಿಸದೆ ತನ್ನದೇ ಆದ ಶೈಲಿಯನ್ನು ರೂಢಿಸಿಕೊಂಡು ಮೆರೆದವರು. ಕುಡಾಣ ಶ್ರೀ ಗೋಪಾಲಕೃಷ್ಣ ಭಟ್ಟರ ಶಿಷ್ಯನಾಗಿ, ಅಗರಿ, ಶೇಣಿ, ತೆಕ್ಕಟ್ಟೆಯವರಲ್ಲದೆ ಇನ್ನೂ ಅನೇಕ ಹಿರಿಯ ಕಲಾವಿದರ ಗರಡಿಯಲ್ಲಿ ಪಳಗಿ 60ಕ್ಕೂ ಮಿಕ್ಕಿ ವರ್ಷಗಳ ತಿರುಗಾಟ ನಡೆಸುತ್ತಿರುವ ಇವರಿಗೆ ಈಗ ವಯಸ್ಸು 79. ಪುತ್ತೂರು ತಾಲೂಕಿನ ಕಾಂಚನ ಎಂಬಲ್ಲಿ 7-6-1941ರಂದು ಶ್ರೀ ಗುರುವಪ್ಪ ಜೋಗಿ, ಸೀತಮ್ಮ ದಂಪತಿಗಳಿಗೆ ಮಗನಾಗಿ ಶಿವರಾಮ ಜೋಗಿಯವರು ಜನಿಸಿದರು.
ಪ್ರಾಥಮಿಕ ವಿದ್ಯಾಭ್ಯಾಸ ಕಾಂಚನ ಶಾಲೆಯಲ್ಲಿ. ಖ್ಯಾತ ಕಲಾವಿದ ಕಾಂಚನ ಸಂಜೀವ ರೈಗಳು ಶಾಲೆಯಲ್ಲಿ ಇವರ ಸಹಪಾಠಿಯಾಗಿದ್ದರಂತೆ. ನಂತರ ಶ್ರೀ ಜೋಗಿಯವರು ಒಂದು ವರ್ಷ ಟೈಲರಿಂಗ್ ಕೆಲಸವನ್ನೂ ಮಾಡಿದ್ದರು. ಆಗ ಶೇಣಿ ಗೋಪಾಲಕೃಷ್ಣ ಭಟ್ಟರ ವ್ಯವಸ್ಥಾಪಕತ್ವದಲ್ಲಿ ಕೂಡ್ಲು ಮೇಳ ತಿರುಗಾಟ ನಡೆಸುತ್ತಿತ್ತು. ಕೂಡ್ಲು ಮೇಳದಲ್ಲಿ ಹಾಸ್ಯಗಾರರಾಗಿದ್ದವರು ರಸಿಕರತ್ನ ಗೋಪಾಲಕೃಷ್ಣ ಜೋಷಿಯವರು. ಇವರು ಕಾಂಚನದಲ್ಲಿ ವಾಸ್ತವ್ಯವಿದ್ದರಂತೆ. ಬಾಲಕನಲ್ಲಿ (ಶಿವರಾಮ ಜೋಗಿ) ಅವ್ಯಕ್ತವಾಗಿರುವ ಪ್ರತಿಭೆಯನ್ನು ಚತುರಮತಿಗಳಾದ ಜೋಷಿಯವರು ಗುರುತಿಸಿದರೋ? ಅಲ್ಲ, ಶ್ರೇಷ್ಠ ಕಲಾವಿದನಾಗುವ ಭಾಗ್ಯವನ್ನು ದೇವರು ಕರುಣಿ ಸಿದರೋ? ರಸಿಕರತ್ನ ಜೋಷಿಯವರು ಶಿವರಾಮ ಜೋಗಿಯವರನ್ನು ಮೇಳಕ್ಕೆ ಕರೆದುಕೊಂಡು ಹೋದದ್ದಂತೂ ಸತ್ಯ. ಆಗ ಯಕ್ಷಗಾನದಲ್ಲಿ ಪಾತ್ರ ಮಾಡಿಯೇ ಗೊತ್ತಿರಲಿಲ್ಲವಂತೆ ಜೋಗಿಯವರಿಗೆ. ಶಾಲಾ ದಿನಗಳಲ್ಲಿ ಕಾಂಚನ ಸಂಜೀವ ರೈಗಳ ಜತೆ ನಾಟಕದಲ್ಲಿ ಅಭಿನಯಿಸಿದ್ದರಂತೆ. ಕಾಂಚನ ಸಂಜೀವ ರೈಗಳು ಕರ್ಣನಾಗಿಯೂ, ಜೋಗಿಯವರು ಅಶ್ವತ್ಥಾಮನಾಗಿಯೂ ನಾಟಕದಲ್ಲಿ ಪಾತ್ರ ನಿರ್ವಹಿಸಿದ್ದರಂತೆ.
ಕೂಡ್ಲು ಮೇಳದಲ್ಲಿ ಆಗ ಹೆಚ್ಚಾಗಿ ಸತ್ಯಹರಿಶ್ಚಂದ್ರ, ಭಕ್ತ ಪ್ರಹ್ಲಾದ ಮೊದಲಾದ ಪೌರಾಣಿಕ ಪ್ರಸಂಗಗಳು ಪ್ರದರ್ಶಿಸಲ್ಪಡುತ್ತಿತ್ತು. ಪ್ರಾರಂಭದಲ್ಲಿ ಸಹಜವಾಗಿ ಶಿವರಾಮ ಜೋಗಿಯವರು ಅಳುಕಿದರೂ ಶ್ರೀ ಶೇಣಿಯವರು ಧೈರ್ಯ ತುಂಬಿದರು. ಸಂಭಾಷಣೆಗಳನ್ನು ಹೇಳಿಕೊಡುವ ಮೊದಲೇ ಪಾತ್ರದ ಸ್ವಭಾವ, ರಂಗದಲ್ಲಿ ವ್ಯವಹರಿಸುವ ರೀತಿ, ತಾನು ಯಾರ ಜತೆ ಮಾತನಾಡುತ್ತಿದ್ದೇನೆ, ಭಾವನೆಗಳನ್ನು ವ್ಯಕ್ತಪಡಿಸುವ ಕ್ರಮಗಳನ್ನು ಹೇಳಿಕೊಡುತ್ತಿದ್ದರಂತೆ. ಹಾಗಾಗಿಯೇ ಶೇಣಿಯವರ (ಹಿರಣ್ಯಕಶ್ಯಪ-ಪ್ರಹ್ಲಾದ, ಹರಿಶ್ಚಂದ್ರ-ಲೋಹಿತಾಶ್ವ) ಜತೆ ವೇಷ ಮಾಡಿದೆ. ಶೇಣಿಯವರು ಪ್ರೀತಿಸಿದರು, ಆಶೀರ್ವದಿಸಿದರು ಎಂದು ಜೋಗಿಯವರು ಬಾಲಕಲಾವಿದನಾಗಿ ಕಳೆದ ದಿನಗಳನ್ನು ನೆನಪಿಸುತ್ತಾರೆ.
ಆಗ ಕೂಡ್ಲು ಮೇಳದಲ್ಲಿ ಬಲಿಪರು, ಕುದ್ರೆಕೋಡ್ಲು, ಶೇಣಿ, ರಸಿಕರತ್ನ ಜೋಷಿ, ವೇಣೂರು ವೆಂಕಟ್ರಮಣ, ಮಾಣಂಗಾಯಿ ಕೃಷ್ಣ ಭಟ್ಟ ಮೊದಲಾದವರ ಒಡನಾಟವೂ ಇವರಿಗೆ ದೊರಕಿತು. ತಿರುಗಾಟ ಆರಂಭಿಸಿದ್ದು ಕೂಡ್ಲು ಗೋಪಾಲಕೃಷ್ಣ ದೇವರ ಮೇಳದಲ್ಲಿ. ಮೇಳಕ್ಕೆ ಕರೆದುಕೊಂಡು ಹೋದವರು ಗೋಪಾಲಕೃಷ್ಣ ಜೋಷಿಯವರು. ಮಾತುಗಾರಿಕೆ ಕಲಿಸಿದವರು ಶೇಣಿ ಗೋಪಾಲಕೃಷ್ಣ ಭಟ್ಟರು. ನಾಟ್ಯ ಕಲಿಸಿ ಆಶೀರ್ವದಿಸಿದವರು ಕುಡಾಣ ಗೋಪಾಲಕೃಷ್ಣ ಭಟ್ಟರು. ಹೀಗೆ ಗೋಪಾಲಕೃಷ್ಣ ಎಂಬ ಹೆಸರು ಶಿವರಾಮ ಜೋಗಿಯವರ ಜೀವನದುದ್ದಕ್ಕೂ ಬೆಸೆದುಕೊಂಡಿದೆ. ಮುಂದಿನ ವರುಷ ತಿರುಗಾಟ ಮುಲ್ಕಿ ಮೇಳದಲ್ಲಿ. ಆಗ ಖ್ಯಾತ ಹಾಸ್ಯಗಾರರಾದ ನಾರಾಯಣ ಭಟ್ಟ ಪೆರುವೊಡಿ ಇವರ ಸಂಚಾಲಕತ್ವ. ಮುಲ್ಕಿ ಮೇಳಕ್ಕೆ ಸೇರುವ ಮೊದಲೇ ಮಳೆಗಾಲದಲ್ಲಿ ಶ್ರೀ ಕುಡಾಣ ಗೋಪಾಲಕೃಷ್ಣ ಭಟ್ಟರ ಮನೆಯಲ್ಲಿದ್ದು ಜೋಗಿಯವರು ನಾಟ್ಯ ಕಲಿತರು.
ಮರೆಯಲಾಗದ ದಿನ : ‘‘ನಾನು ಬಾಲಕಲಾವಿದ. ಮುಲ್ಕಿ ಮೇಳದ ತಿರುಗಾಟ. ಪುತ್ತೂರು ನಾರಾಯಣ ಹೆಗ್ಡೆಯವರ ಹಿರಣ್ಯಕಶ್ಯಪ. ನಾನು ಪ್ರಹ್ಲಾದ. ಅವರ ಜತೆ ವೇಷ ಮಾಡುವುದೇ ಭಾಗ್ಯ. ಅವರು ರಂಗಪ್ರವೇಶ ಮಾಡಿದ ಮೇಲೆ ಪಾತ್ರವೇ ಆಗಿಬಿಡುತ್ತಿದ್ದರು. ಅವರದು ಪರಕಾಯ ಪ್ರವೇಶ. ಅಷ್ಟೂ ತನ್ಮಯರಾಗಿ ಅಭಿನಯಿಸುತ್ತಿದ್ದರು. ಆಗ ಮೇಳಗಳಲ್ಲಿ ಟೋಪನ್ ವ್ಯವಸ್ಥೆ ಇರುತ್ತಿರಲಿಲ್ಲ. ಎಲ್ಲಾ ಕಲಾವಿದರೂ ತಲೆಕೂದಲು ಬೆಳೆಸುತ್ತಿದ್ದರು. ಸ್ತ್ರೀವೇಷದವರೂ ಕೂಡಾ. ಕೊನೆಯ ದೃಶ್ಯ ಹರಿ ಎಲ್ಲಿದ್ದಾನೆ ಎಂದು ಹಿರಣ್ಯಕಶ್ಯಪನಾಗಿ ಹೆಗ್ಡೆಯವರು ಪ್ರಹ್ಲಾದನಾಗಿ ಅಭಿನಯಿಸುತ್ತಿದ್ದ ನನ್ನಲ್ಲಿ ಕೇಳಿದರು. ಎರಡು ಬಾರಿ ಕಂಬದಲ್ಲಿದ್ದಾನೆ ಎಂದು ಹೇಳಿದೆ. ಮೂರನೆ ಬಾರಿ ಕೇಳಿದಾಗ ಮಾಳಿಗೆಯಲ್ಲಿದ್ದಾನೆ ಎಂದು ಹೇಳಿದೆ. ಅವರು ಸಹಜವಾಗಿ, ತನ್ಮಯರಾಗಿ ನನ್ನ ತಲೆಮೇಲೆ ಕೈಯಿಟ್ಟು ಕೂದಲನ್ನು ಅಮುಕಿ ಎತ್ತಿ ಎಸೆಯುವಂತೆ ಅಭಿನಯಿಸಿದ್ದರು. ಶಿಕ್ಷೆ ಕೊಡುವ ದೃಶ್ಯಗಳಲ್ಲಿ, ಎದುರು ಪಾತ್ರಧಾರಿ ತಲೆಯ ಮೇಲೆ ಕೈಯಿಕ್ಕಿದಾಗ ನೋವಾಗದೇ ಇರಬೇಕಾದರೆ ನಾವೂ ಅವರ ಕೈಗಳನ್ನು ಹಿಡಿದು ಅಭಿನಯಿಸಬೇಕು. ನಾನು ಎಚ್ಚರ ವಹಿಸಿದ್ದು ಕಡಿಮೆಯಾಯಿತು. ರಂಗದಿಂದ ಹೊರಗೆ ಎಸೆಯಲ್ಪಟ್ಟೆ. ಆಗ ಎತ್ತರದ ರಂಗಸ್ಥಳ ಇರಲಿಲ್ಲ. ನೆಲದಲ್ಲೇ ಪ್ರದರ್ಶನ. ಆಗ ಹುಡುಗಾಟಿಕೆ. ಪ್ರದರ್ಶನ ಮುಗಿದ ಮೇಲೆ ನೋವಾಯಿತೆ? ಎಂದು ಕೇಳಿ ಹೆಗ್ಡೆಯವರು ಸಮಾಧಾನದಿಂದ ನೀತಿಯನ್ನೂ ಹೇಳಿದರು. ಗದರಿಸಲಿಲ್ಲ’’ ಎಂದು ಶಿವರಾಮ ಜೋಗಿಯವರು ನೆನಪಿಸಿಕೊಳ್ಳುತ್ತಾರೆ.
ಯಕ್ಷಗಾನವಲ್ಲದೆ ಭರತನಾಟ್ಯ, ಕೂಚುಪುಡಿ, ಕಥಕ್ಕಳಿ ಮೊದಲಾದ ಕಲಾಪ್ರಕಾರಗಳ ಹೆಜ್ಜೆಗಾರಿಕೆಯ ಜ್ಞಾನ ಹೊಂದಿದ್ದ ಕುಡಾಣ ಗೋಪಾಲಕೃಷ್ಣ ಭಟ್ಟರಿಂದ ನಾಟ್ಯ ಕಲಿತ ಶಿವರಾಮ ಜೋಗಿಯವರು ಮುಂದೆ ಸತತ 40 ವರ್ಷಗಳ ಕಾಲ ಶ್ರೀ ಕೆ. ವಿ. ಪೈ ಸಂಚಾಲಕತ್ವದ ಸುರತ್ಕಲ್ಲು ಮೇಳದಲ್ಲಿ ಕಲಾಸೇವೆ ಮಾಡಿದರು. (ಶ್ರೀ ಮಹಮ್ಮಾಯಿ ಯಕ್ಷಗಾನ ನಾಟಕ ಸಭಾ, ಸುರತ್ಕಲ್) ಮೇಳದ ಆರಂಭವಾದಾಗಿನಿಂದ ಕೊನೆಯ ತನಕವೂ (40 ವರ್ಷ) ತಿರುಗಾಟ ನಡೆಸಿದವರು ವೇಣೂರು ಸುಂದರ ಆಚಾರ್ಯರು ಮತ್ತು ಇವರು ಮಾತ್ರ. ಅಗರಿ ಶ್ರೀನಿವಾಸ ಭಾಗವತರು, ಅಗರಿ ರಘುರಾಮ ಭಾಗವತರು, ಪದ್ಯಾಣ ಗಣಪತಿ ಭಟ್, ಕುದ್ರೆಕ್ಕೋಡ್ಲು, ತಲೆಂಗಳ ಗೋಪಾಲಕೃಷ್ಣ ಭಟ್ಟ, ಕಡಬ ನಾರಾಯಣ ಆಚಾರ್ಯ, ಶೇಣಿ, ತೆಕ್ಕಟ್ಟೆ, ಪಾತಾಳ, ಕುಂಬಳೆ ಸುಂದರ ರಾವ್, ಪುತ್ತೂರು ನಾರಾಯಣ ಹೆಗ್ಡೆ, ರಾ. ಸಾಮಗ, ಕೊಕ್ಕಡ, ಎಂ.ಕೆ. ರಮೇಶಾಚಾರ್ಯ, ಕೆ. ಗೋವಿಂದ ಭಟ್ಟರಂತಹ ಶ್ರೇಷ್ಠ ಕಲಾವಿದರ ಒಡನಾಟ ಸಿಕ್ಕಿತ್ತು. ಕಡಬ ಸಾಂತಪ್ಪ, ಉಜಿರೆ ರಾಜ ಮೊದಲಾದವರೂ ಇದ್ದರು. (ಡಿ. ಮನೋಹರ ಕುಮಾರ್, ಸದಾಶಿವ ಕುಲಾಲ್, ಸದಾಶಿವ ಆಚಾರ್ಯ, ವೇಣೂರು, ಅಶೋಕ ಆಚಾರ್ಯ ಮೊದಲಾದವರು. ಆಗ ಬಾಲ ಕಲಾವಿದರಾಗಿ ಕಾಣಿಸಿಕೊಳ್ಳುತ್ತಿದ್ದರು.) ಇಂತಹ ಪ್ರಬುದ್ಧ ಕಲಾವಿದರ ಒಡನಾಟದಿಂದಲೇ ನಾನು ಸುರತ್ಕಲ್ ಮೇಳದಲ್ಲಿ ಕಲಾವಿದನಾಗಿ ಕಾಣಿಸಿಕೊಂಡೆ ಎಂದು ಶಿವರಾಮ ಜೋಗಿಯವರು ಹೇಳುತ್ತಾರೆ
ಸುರತ್ಕಲ್ಲು ಮೇಳದಲ್ಲಿ, ಕಡುಗಲಿ ಕುಮಾರ ರಾಮ ಪ್ರಸಂಗದಲ್ಲಿ ಮೊಗಲರ ದಬ್ಬಾಳಿಕೆಯ ವಿರುದ್ಧ ಹೋರಾಡುವ ಕುಮಾರರಾಮನ ಪಾತ್ರ ಜೋಗಿಯವರಿಗೆ ಪ್ರಸಿದ್ಧಿಯನ್ನು ಕೊಟ್ಟಿತು. ಆಗ ಶೇಣಿಯವರು ಮಹಮ್ಮದ್ ಬಿನ್ ತುಘಲಕ್ ಪಾತ್ರವನ್ನು ನಿರ್ವಹಿಸುತ್ತಿದ್ದರು. ರಾಜಾ ಯಯಾತಿ ಪ್ರಸಂಗದ ಯಯಾತಿ, ಕೋಟಿ, ಚೆನ್ನಯ, ಕಾಂತಾಬಾರೆ ಬೂದಾಬಾರೆ, ಪಾತ್ರಗಳಲ್ಲಿ ರಂಜಿಸಿದರು. ಅಭಿಮನ್ಯು, ಬಬ್ರುವಾಹನ, ಚಂಡಮುಂಡರು, ಭಾರ್ಗವ- ಮೊದಲಾದ ವೇಷಗಳನ್ನೂ ಮಾಡುತ್ತಿದ್ದರು. ಪುಂಡುವೇಷಗಳಲ್ಲಿ ಇವರ ಜತೆಗಾರನಾಗಿದ್ದವರು ಖ್ಯಾತ ಕಲಾವಿದ ಕ್ರಿಶ್ಚನ್ ಬಾಬು. ಸುರತ್ಕಲ್ಲು ಮೇಳದಲ್ಲಿ ಅಗರಿ ಮತ್ತು ಪದ್ಯಾಣರ ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುತ್ತಿದ್ದ ಪ್ರಸಂಗಗಳು ಮತ್ತು ಯಾರ್ಯಾರಿಗೆ ಯಾವ ಪಾತ್ರಗಳು ಪ್ರಸಿದ್ಧಿಯನ್ನು ಕೊಟ್ಟವು ಎಂಬುದನ್ನು ಜೋಗಿಯವರು ಈಗಲೂ ನೆನಪಿಸುತ್ತಾರೆ.
ನಾಟ್ಯರಾಣಿ ಶಾಂತಲಾ – ಶೇಣಿಯವರದ್ದು ವಿಷ್ಣುವರ್ಧನನಾಗಿ ಅಮೋಘ ಪಾತ್ರ ನಿರ್ವಹಣೆ. ಕುವರ ವಿಷ್ಣುವಾಗಿ (ದತ್ತಪುತ್ರ) ಜೋಗಿಯವರು. ಶೇಣಿಯವರು ಕುಣಿಯದೇ, ಹೆಚ್ಚು ಮಾತನಾಡದೇ ಪ್ರೇಕ್ಷಕರನ್ನು ಹಿಡಿದಿಡುತ್ತಿದ್ದರು. ಮನಸೂರೆಗೊಳ್ಳುತ್ತಿದ್ದರು. ಅವರ ಮಾತು, ಭಾವಾಭಿವ್ಯಕ್ತಿಗೆ ಪ್ರೇಕ್ಷಕರು ತಲೆತೂಗುತ್ತಲಿದ್ದರು. ಶ್ರೀನಿವಾಸ ಕಲ್ಯಾಣ – ಜೋಗಿಯವರ ಶ್ರೀನಿವಾಸ, ಎಂ. ಕೆ.ಯವರ ಪದ್ಮಾವತಿ, ವೇಣೂರು ಸುಂದರ ಆಚಾರ್ಯರ ಸಖ. ಈ ಪ್ರಸಂಗವನ್ನು ನೋಡಲು ಸಾಗರ ಮೊದಲಾದ ಮಲೆನಾಡ ಪ್ರದೇಶದಲ್ಲಿ ಜನಸಾಗರವೇ ಹರಿದು ಬರುತಿತ್ತಂತೆ. ಶಿವರಾಮ ಜೋಗಿಯವರ ಪ್ರಾಮಾಣಿಕ ಅಭಿಪ್ರಾಯದಂತೆ ಇಲ್ಲೊಂದು ಗಮನಿಸಬೇಕಾದ ಅಂಶವಿದೆ- ಇದು ನಮ್ಮ ಕಲ್ಪನೆ ಅಲ್ಲ. ನಮಗೆ ಹಿರಿಯ ಕಲಾವಿದರ ಕೊಡುಗೆ ಈ ಪ್ರಸಂಗ. ನಾವು ಅದನ್ನು ಅನುಸರಿಸಿದೆವು. ಅಗರಿಯವರ ನಿರ್ದೇಶನದಲ್ಲಿ ಶೇಣಿಯವರು ಶ್ರೀನಿವಾಸನಾಗಿ, ಕೋಳ್ಯೂರು ರಾಮಚಂದ್ರ ರಾಯರು ಪದ್ಮಾವತಿಯಾಗಿ, ವಿಟ್ಲ ಜೋಷಿಯವರು ಸಖನಾಗಿ, ಕಡಬ ಸಾಂತಪ್ಪನವರು ಸಖಿಯಾಗಿ ಪ್ರಸಂಗವನ್ನು ರಂಜಿಸಿದರು. ಶ್ರೇಯಸ್ಸು ಅವರಿಗೆ.
ಹೀಗೆ ಕಲಾವಿದನಾಗಿ ಬೆಳೆದ ಜೋಗಿಯವರಿಗೆ ಮೇಳದಲ್ಲಿ ವಾಹನ ಚಾಲಕನಾಗಿ 20 ವರುಷ ದುಡಿದ ಅನುಭವವೂ ಇದೆ. ಕೆ. ವಿ. ಪೈಯವರು ಒಳ್ಳೆಯ ಯಜಮಾನರು. ಶ್ರೇಷ್ಠ ಕಲಾವಿದ ಒಡನಾಟ. ಇನ್ನೇನು ಬೇಕು? ತಿರುಗಾಟ ಇನ್ನೂ ಬೇಕೆನಿಸಿದಾಗ ಅನಿವಾರ್ಯ ಕಾರಣಗಳಿಂದ ಸುರತ್ಕಲ್ಲು ಮೇಳ ತಿರುಗಾಟ ನಿಲ್ಲಿಸಿತು. ನಂತರ ಕಿಶನ್ ಹೆಗ್ಡೆಯವರ ಕರ್ನಾಟಕ ಮೇಳ (ಕಾಲಮಿತಿ) ಮತ್ತು ಕುಂಟಾರು ಮೇಳದಲ್ಲಿ ವ್ಯವಸಾಯ ಮಾಡಿದೆ. 12 ವರ್ಷ ಹೊಸನಗರ, ಎಡನೀರು , ಹನುಮಗಿರಿ ಮೇಳದಲ್ಲಿ ತಿರುಗಾಟ ನಡೆಸಿದೆ. ಶ್ರೀ ಟಿ. ಶ್ಯಾಮ ಭಟ್ಟರು ಯಕ್ಷಗಾನವನ್ನೂ, ಕಲಾವಿದರನ್ನೂ ಗೌರವಿಸುತ್ತಾರೆ, ಪ್ರೀತಿಸುತ್ತಾರೆ. ಕಿರಿಯ ಕಲಾವಿದನಾದರೂ ಪ್ರೀತಿಯಿಂದ ಮಾತನಾಡಿಸುತ್ತಾರೆ. ಅದು ಅವರ ಶ್ರೇಷ್ಠ ಗುಣ. ಯಕ್ಷಗಾನದಿಂದಲೇ ಬದುಕಿದೆ. ಕಲಾವಿದನಾಗಿ ನಾನು ಅತ್ಯಂತ ತೃಪ್ತ ಎಂಬುದು ಜೋಗಿಯವರ ಮನತುಂಬಿದ ಮಾತುಗಳು. ಶಿವರಾಮ ಜೋಗಿಯವರು ಪಡೆದ ಪ್ರಶಸ್ತಿಗಳ ವಿವರ : ಪೇಜಾವರ ವಿಜಯವಿಠಲ ಪ್ರಶಸ್ತಿ, ಎಡನೀರು ಪ್ರಶಸ್ತಿ, ಕೀಲಾರು ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಮೊದಲಾದವುಗಳು. ಕಾಂಚನದಲ್ಲಿ ಜನಿಸಿದರೂ 50 ವರುಷಗಳಿಂದ ಬಿ. ಸಿ. ರೋಡಿನಲ್ಲಿ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಕುಟುಂಬದ ಬಗ್ಗೆ : ಪತ್ನಿ ಲತಾ. ಮಗಳು ಸೌಮ್ಯ-ವಿವಾಹಿತೆ. ಮಗ ಸುಮಂತ್ರಾಜ್-ಪದವೀಧರ. IDBI ಉದ್ಯೋಗಿ. ವಿವಾಹಿತ. ಇವರು ಹವ್ಯಾಸೀ ಯಕ್ಷಗಾನ ಕಲಾವಿದ.
ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಪ್ರೇಕ್ಷಕರನ್ನು ರಂಜಿಸಿದವರು ಅನೇಕ ಕಲಾವಿದರು. ಅಂತಹವರಲ್ಲೊಬ್ಬರು ಪೆರುವಡಿ ನಾರಾಯಣ ಭಟ್ಟರು. ಈಗ ಕಲಾಜೀವನದಿಂದ ನಿವೃತ್ತರಾಗಿ ಪುತ್ತೂರು ಸಮೀಪದ ಬಪ್ಪಳಿಗೆಯಲ್ಲಿ ವಾಸಿಸುತ್ತಿದ್ದಾರೆ. ಶುದ್ಧ ಪರಂಪರೆಯ ಹಾಸ್ಯಗಾರರಾದ ಶ್ರೀಯುತರು ಮೇಳದ ಸಂಚಾಲಕರಾಗಿಯೂ ಕಲಾಸೇವೆಯನ್ನು ಮಾಡಿದವರು. ಯಕ್ಷಗಾನಕ್ಕೆ ಒಬ್ಬ ಶ್ರೇಷ್ಠ ಸಂಪನ್ಮೂಲ ವ್ಯಕ್ತಿಯೂ ಹೌದು. ಅನೇಕ ಕಮ್ಮಟಗಳಲ್ಲಿ ಭಾಗವಹಿಸಿ ತಮ್ಮ ಅನುಭವಗಳನ್ನು ಧಾರೆಯೆರೆದಿದ್ದಾರೆ.
ಶ್ರೀಯುತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಪೆರುವಡಿಯಲ್ಲಿ ಪದ್ಯಾಣ ಭೀಮ ಭಟ್ ಮತ್ತು ಗುಣವತಿ ಅಮ್ಮ ದಂಪತಿಗಳ ಮಗನಾಗಿ ಮೇ 28, 1927ರಂದು ಜನಿಸಿದರು. ಮಿತ್ತನಡ್ಕ (ಕರೋಪಾಡಿ) ಮತ್ತು ಪೆರುವಡಿ ಕುದ್ರಡ್ಕ ಶಾಲೆಗಳಲ್ಲಿ 5ನೇ ತರಗತಿ ವರೆಗೆ ಓದಿದ್ದರು. ಎಳವೆಯಲ್ಲಿ ಅಜ್ಜನ ಮನೆಯ ಆಸರೆಯಲ್ಲಿ ಬೆಳೆದು ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದ ಆಶ್ರಯದಲ್ಲಿ ನಡೆಯುತ್ತಿದ್ದ ಸಂಸ್ಕೃತ ಪಾಠಶಾಲೆಯಲ್ಲಿ ಎರಡು ವರ್ಷ ವಿದ್ಯಾರ್ಥಿಯಾಗಿದ್ದರು. ಪದ್ಯಾಣ ಪುಟ್ಟುನಾರಾಯಣ ಭಾಗವತರು ಮತ್ತು ಮಾಂಬಾಡಿ ನಾರಾಯಣ ಭಾಗವತರು ಇವರ ಬಂಧುಗಳು. ಪೆರುವಡಿ ಮನೆಯರಿಗಂತೂ ಯಕ್ಷಗಾನ ಅಚ್ಚುಮೆಚ್ಚಿನ ಕಲೆ. ಮನೆಯ ಸದಸ್ಯರೆಲ್ಲರೂ ಹಿಮ್ಮೇಳ, ಮುಮ್ಮೇಳ ಕಲಾವಿದ ರಾಗಿದ್ದರು.
ಸಹಜವಾಗಿ ಯಕ್ಷಗಾನ ಆಸಕ್ತಿ ಮೂಡಿತು. ತನ್ನ 14ನೇ ವಯಸ್ಸಿನಲ್ಲಿ ಪೆರುವಡಿ ನಾರಾಯಣ ಭಟ್ಟರು ನಾಟ್ಯಾಭ್ಯಾಸ ಇಲ್ಲದೆ ಶ್ರೀ ಧರ್ಮಸ್ಥಳ ಮೇಳದಲ್ಲಿ ಮೊದಲ ತಿರುಗಾಟ ಮಾಡಿದ್ದರು. (ಶ್ರೀ ಮಂಜಯ್ಯ ಹೆಗ್ಗಡೆಯವರ ಕಾಲ, ಕುರಿಯ ವಿಠಲ ಶಾಸ್ತ್ರಿಗಳು ಮೇಳ ವಹಿಸಿಕೊಂಡ ಸಮಯ) ನಂತರ ಕುರಿಯ ವಿಠಲ ಶಾಸ್ತ್ರಿಗಳು ಇವರನ್ನು ನಾಟ್ಯ ಕಲಿಯಲು ಪ್ರೇರೇಪಿಸಿದರಂತೆ. ವ್ಯವಸ್ಥೆಯೂ ಆಯಿತು. ದೇಲಂತಬೆಟ್ಟು ಶಾಲೆಯಲ್ಲಿ ನಾಟ್ಯ ತರಗತಿ ನಡೆಯುತ್ತಿತ್ತು. ಅಲ್ಲಿಗೆ ಕುರಿಯ ವಿಠಲ ಶಾಸ್ತ್ರಿಗಳು, ಕರ್ಗಲ್ಲು ಸುಬ್ಬಣ್ಣ ಭಟ್, ಕಾವು ಕಣ್ಣ ಮೊದಲಾದವರು ನಾಟ್ಯ ಕಲಿಸಲು ಬರುತ್ತಿದ್ದರು. “ಯಕ್ಷರಂಗದ ರಸಋಷಿಗಳೆನಿಸಿದ ಸಂಕಯ್ಯ ಭಾಗವತರೂ, ಈಶ್ವರ ಹಾಸ್ಯಗಾರರೂ, ಕುರಿಯ ವಿಠಲ ಶಾಸ್ತ್ರಿಗಳೂ ನನ್ನನ್ನು ಯಕ್ಷಗಾನ ರಂಗಕ್ಕೆ ಬರುವಂತೆ ಮಾಡಿದರು. ಕರ್ಗಲ್ಲು, ಹೊಸಹಿತ್ತಿಲು ಗಣಪತಿ ಭಟ್ಟ, ಕಾಸರಗೋಡು ಸುಬ್ಬಯ್ಯ ಶೆಟ್ಟಿ ಮೊದಲಾದವರ ಮಾರ್ಗದರ್ಶನದಿಂದ ನಾನು ಕಲಾವಿದನಾಗಿ ರೂಪುಗೊಂಡೆ. ವಿಟ್ಲ ಅರಸರ ಆಶ್ರಯದಿಂದ ಪ್ರಭಾವಿತರಾಗಿ ಸಂಕಯ್ಯ ಭಾಗವತರೂ ಈಶ್ವರ ಹಾಸ್ಯಗಾರರೂ ಕಲಾವಿದರಾಗಿ ರಂಜಿಸಿದವರು. ಅವರಿಂದ ಮತ್ತು ಮನೆಯವರಿಂದಲೂ ನಾನು ಪ್ರೇರಿತನಾಗಿ ಕಲಾವಿದನಾದೆ” ಎಂಬುದು ಪೆರುವಡಿ ನಾರಾಯಣ ಭಟ್ಟರ ಅಭಿಪ್ರಾಯ.
ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು. ಮೇಳದ ಸಂಚಾಲಕನಾಗಿ ಆರ್ಥಿಕವಾಗಿ ಸೋಲುಂಡರೂ ಕೀರ್ತಿಯನ್ನು ಸಂಪಾದಿಸಿದರು. ಸಮರ್ಥ ಸಂಚಾಲಕ ಎಂದು ಹೆಸರು ಗಳಿಸಿದರು. ತೆಂಕಿನ ಮೇಳಗಳು ಬಡಗಿನ ಕಡೆಗೂ ಬಡಗಿನ ಮೇಳಗಳು ತೆಂಕಿನ ಕಡೆಗೂ ತಿರುಗಾಟಕ್ಕೆ ಬರದೇ ಇರುತ್ತಿದ್ದ ಕಾಲ ಅದು. ಪೆರುವಡಿಯವರು ಮೂಲ್ಕಿ ಮೇಳವನ್ನು ಬಡಗಿನ ಕಡೆಗೂ ನಡೆಸಿ ಸಾಹಸವನ್ನು ತೋರಿದರು. ತೆಂಕಿನ ಆಟಗಳು ಬಡಗಿನ ಕಡೆಯಲ್ಲೂ ಬಡಗಿನ ಪ್ರದರ್ಶನಗಳು ತೆಂಕಿನ ಕಡೆಯಲ್ಲೂ ಆರಂಭಗೊಳ್ಳಲು ಇವರು ಒಂದು ಭದ್ರ ವೇದಿಕೆಯನ್ನೇ ಹಾಕಿಕೊಟ್ಟರು.
ಬಭ್ರುವಾಹನ ಪ್ರಸಂಗದಲ್ಲಿ ಪೆರುವಡಿ ನಾರಾಯಣ ಭಟ್ (ಬಭ್ರುವಾಹನನಾಗಿ ವಸಂತ ಗೌಡ ಕಾಯರ್ತಡ್ಕ)
ಮತ್ತೆ 17 ವರ್ಷಗಳ ಕಾಲ ಶ್ರೀ ಧರ್ಮಸ್ಥಳ ಮೇಳದಲ್ಲಿ ತಿರುಗಾಟ ನಡೆಸಿದರು. ಪೆರುವಡಿಯವರು ಹಳ್ಳಿಯಿಂದ ದಿಲ್ಲಿಯ ವರೆಗೆ ಯಕ್ಷಗಾನ ಪ್ರದರ್ಶನದಲ್ಲಿ ಭಾಗವಹಿಸಿದವರು. ‘ರಾಜಹಾಸ್ಯ’ ಖ್ಯಾತಿಯ ಇವರು ರಾಕ್ಷಸ ದೂತನಾಗಿ ವಿಜೃಂಭಿಸಿದರು. ಮಕರಂದನಾಗಿ ಶ್ರೀಕೃಷ್ಣನಿಗೆ ನೆರವಾಗಿ ಪ್ರೇಕ್ಷಕರನ್ನು ರಂಜಿಸಿದರು. ವಿಜಯನಾಗಿ ವಿಜಯಿಯಾದರು. ನಾರದನಾಗಿ ಕಲಹಬೀಜವನ್ನು ಬಿತ್ತಿ ಪ್ರಸಂಗವನ್ನು ಮೆರೆಸಿದರು. ಬ್ರಹ್ಮನಾಗಿ ಅನುಗ್ರಹಿಸಿದರು. ಬಾಹುಕನಾಗಿ ಮೆರೆದರು. ‘ಪಾಪಣ್ಣ’ನ ಪಾತ್ರವನ್ನು ನೋಡಿ ಪ್ರೇಕ್ಷಕರು “ಅಯ್ಯೋ, ಪಾಪ… ಅಣ್ಣ” ಎಂದು ಹೇಳುವಂತೆ ಅಭಿನಯಿಸಿದರು. ಪಾಪಣ್ಣ ವಿಜಯ – ಗುಣಸುಂದರಿ’ ಪ್ರಸಂಗದ ‘ಪಾಪಣ್ಣ’ ಪಾತ್ರ ಇವರಿಗೆ ಅಪಾರ ಪ್ರಸಿದ್ಧಿಯನ್ನು ತಂದುಕೊಟ್ಟಿತು. ಪೆರುವಡಿ ನಾರಾಯಣ ಭಟ್ಟರು ‘ಪಾಪಣ್ಣ ಭಟ್ರು’ ಎಂದೇ ಪ್ರಸಿದ್ಧರಾದರು. ವೃತ್ತಿ ಸಂಕಷ್ಟವನ್ನು ಸಾರುವ ಮೂರ್ತೆಯವನಾಗಿ, ತಾಮಸಿ ಪ್ರವೃತ್ತಿಯ ರಾಕ್ಷಸ ದೂತನಾಗಿ, ಸಹಜ ಬದುಕಿಗೆ ಕನ್ನಡಿ ಹಿಡಿಯುವ ವಿಪ್ರನಾಗಿ, ದೇವತ್ವವನ್ನು ಎತ್ತಿ ಹಿಡಿವ ದೇವದೂತನಾಗಿ ಅಭಿನಯಿಸುತ್ತಾ ಇವರು ಎಲ್ಲಾ ಹಾಸ್ಯಗಾರರಿಗೂ ಆದರ್ಶರಾದರು.
ಹಿರಿಯ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ಟ ಮತ್ತು ಸಾವಿತ್ರಿ ದಂಪತಿಗಳದ್ದು ಮೂವರು ಪುತ್ರಿಯರು, ಅಳಿಯಂದಿರು ಹಾಗೂ ಮೊಮ್ಮಕ್ಕಳ ಜೊತೆಗಿನ ಸಂತೃಪ್ತ ಜೀವನ. ಪ್ರಥಮ ಪುತ್ರಿ ಕೃಷ್ಣಕುಮಾರಿ ವಿವಾಹಿತೆ. ಅಳಿಯ ಮುಳಿಯ ಈಶ್ವರ ಭಟ್ ಕೃಷಿಕರು. ಇವರ ಮಕ್ಕಳಾದ ಶ್ರೀಕಾಂತ ಮತ್ತು ಶ್ರೀದೇವಿ ಬೆಂಗಳೂರಿನಲ್ಲಿ ಉದ್ಯೋಗಿಗಳು. ದ್ವಿತೀಯ ಪುತ್ರಿ ಸುಗುಣಕುಮಾರಿ ವಿವಾಹಿತೆ. ಇವರು ಉತ್ತಮ ಚಿತ್ರಕಲಾವಿದೆ. ಅಳಿಯ ವೆಂಕಟ್ರಾಮ ಸುಳ್ಯ ಅವರು ಸುಳ್ಯದಲ್ಲಿ ಶ್ರೀ ಪ್ರತಿಭಾ ವಿದ್ಯಾಲಯವನ್ನು ನಡೆಸುತ್ತಿದ್ದಾರೆ. ಲೇಖಕರಾಗಿ ಮತ್ತು ತಾಳಮದ್ದಳೆ ಅರ್ಥಧಾರಿಯಾಗಿ ಪ್ರಸಿದ್ಧರು. ಶ್ರೀಮುಖ ಮತ್ತು ಕೃತಿಕಾ ಇವರ ಮಕ್ಕಳು. ತೃತೀಯ ಪುತ್ರಿ ಮಹಾಲಕ್ಷ್ಮಿ ವಿವಾಹಿತೆ. ಅಳಿಯ ಶ್ರೀ ಚಂದ್ರಶೇಖರ ಭಟ್ ಉದ್ಯೋಗಿ. ಇವರ ಪುತ್ರ ಸ್ಕಂದ ಎನ್. ಭಟ್ ಪಿ.ಯು.ಸಿ. ವಿದ್ಯಾರ್ಥಿ. ಪೆರುವಡಿ ಹಾಸ್ಯಗಾರರು ಪ್ರಸ್ತುತ ಪುತ್ತೂರಿನ ಬಪ್ಪಳಿಗೆಯ ಸಮೀಪದ ತೆಂಕಿಲ ನೂಜಿ ಶ್ರೀ ದುರ್ಗಾ ನಿಲಯದಲ್ಲಿ ವಾಸವಾಗಿದ್ದಾರೆ.
ಊರಿನ ಪಟೇಲರಾಗಿ, ಜನಪ್ರಿಯ ಶಿಕ್ಷಕರಾಗಿ ಹಾಗೂ ಹಳೆ ತಲೆಮಾರಿನ ಯಕ್ಷಗಾನ ಅರ್ಥಧಾರಿಯಾಗಿ ಪ್ರಸಿದ್ಧರಾದ ದಿ. ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ಹಿರಿಯ ಅರ್ಥಧಾರಿ, ನಿವೃತ್ತ ಭೂಮಾಪನ ಅಧಿಕಾರಿ ದಿ. ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ‘ಬೊಂಡಾಲ ಪ್ರಶಸ್ತಿ’ ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಹೆಸರಾಂತ ವೇಷಧಾರಿ ರಮೇಶ ಭಟ್ ಬಾಯಾರು ಆಯ್ಕೆಯಾಗಿದ್ದಾರೆ.
ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರಿಗಾಗಿ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ನೀಡುತ್ತಿರುವ ಈ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2020-21ನೇ ಸಾಲಿನಲ್ಲಿ ರಮೇಶ ಭಟ್ಟರ ಹೆಸರನ್ನು ಸೂಚಿಸಿದೆ. ಪ್ರಶಸ್ತಿಯು ಶಾಲು, ಸ್ಮರಣಿಕೆ ಮತ್ತು ಗೌರವ ನಿಧಿಯನ್ನೊಳಗೊಂಡಿದೆ.
ರಮೇಶ್ ಭಟ್ ಬಾಯಾರು: ಕಾಸರಗೋಡು ಬಾಯಾರು ಗ್ರಾಮದ ಸರವು ನಾರಾಯಣ ಭಟ್ಟ ಮತ್ತು ಪಾರ್ವತಿ ಅಮ್ಮ ದಂಪತಿಗೆ 1967 ನವೆಂಬರ್ 17 ರಂದು ಜನಿಸಿದ ರಮೇಶ್ ಭಟ್ ಹತ್ತನೇ ತರಗತಿವರೆಗೆ ಕಲಿತು ಬಳಿಕ ಯಕ್ಷಗಾನ ರಂಗವನ್ನು ಪ್ರವೇಶಿಸಿದರು. ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ಕೇಂದ್ರದಲ್ಲಿ ಕೆ. ಗೋವಿಂದ ಭಟ್ ಮತ್ತು ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ನಾಟ್ಯಾಭ್ಯಾಸ ಮಾಡಿ 1984 ರಲ್ಲಿ ಕುಂಬಳೆ ಮೇಳದಲ್ಲಿ ತಿರುಗಾಟ ಆರಂಭಿಸಿದರು. ಭಾಗವತ ಕುರಿಯ ಗಣಪತಿ ಶಾಸ್ತ್ರಿಯವರ ನಿರ್ದೇಶನದಂತೆ 1985 ರಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸೇರಿಕೊಂಡ ಅವರು ಕಳೆದ 35 ವರ್ಷಗಳಿಂದ ಅದೇ ಮೇಳದಲ್ಲಿ ಕಲಾ ಸೇವೆ ಮಾಡುತ್ತಿದ್ದಾರೆ. ‘ದೇವಿಮಹಾತ್ಮೆ’ ಯ ಶ್ರೀದೇವಿ ಪಾತ್ರಕ್ಕೆ ಅವರು ಪ್ರಸಿದ್ಧರು.
ಬಹುತೇಕ ಪೌರಾಣಿಕ ಪ್ರಸಂಗಗಳಲ್ಲೇ ಪಾತ್ರ ನಿರ್ವಹಿಸುತ್ತಿರುವ ರಮೇಶ್ ಭಟ್ಟರ ಸೀತೆ, ದಮಯಂತಿ, ಕಯಾದು, ಮೋಹಿನಿ, ದ್ರೌಪದಿ, ಮೀನಾಕ್ಷಿ, ಶಶಿಪ್ರಭೆ, ಯಶೋಮತಿ ಮೊದಲಾದ ಸ್ತ್ರೀಭೂಮಿಕೆಗಳು ಜನಪ್ರಿಯ. ರಕ್ತಬೀಜ, ಅರುಣಾಸುರ, ಹಿರಣ್ಯಕಶಿಪು ಮೊದಲಾದ ದೈತ್ಯ ಪಾತ್ರಗಳಲ್ಲೂ ಅವರು ಪರಿಣತರು. ಮೇಳದ ತಿರುಗಾಟವಲ್ಲದೆ ಮುಂಬಯಿ, ಚೆನ್ನೈ, ಹೈದರಾಬಾದ್, ಸಿಂಗಾಪುರಗಳಲ್ಲೂ ಕಾರ್ಯಕ್ರಮ ನೀಡಿದ ಅನುಭವ ಅವರಿಗಿದೆ. ವೃತ್ತಿಪರ ಯಕ್ಷಗಾನ ಕಲಾವಿದರಾಗಿ ಸರಿಸುಮಾರು ಮೂರೂವರೆ ದಶಕಗಳ ಅನುಭವ ಹೊಂದಿರುವ ಬಾಯಾರು ರಮೇಶ ಭಟ್ಟರು ಪತ್ನಿ ಗೀತಾ ಮತ್ತು ಪುತ್ರ ಶ್ರೀರಾಮರೊಂದಿಗೆ ಬಾಯಾರು ಗ್ರಾಮದ ಸರವು ಎಂಬಲ್ಲಿ ಸಂತೃಪ್ತಿಯ ಜೀವನ ನಡೆಸುತ್ತಿದ್ದಾರೆ.
ಫೋಟೋ ಕೃಪೆ: ಯಕ್ಷ ಮಾಧವ
ಫೆ.19 ಕ್ಕೆ ಪ್ರಶಸ್ತಿ ಪ್ರದಾನ: ಫೆಬ್ರವರಿ 18 , 2021ರಂದು ರಾತ್ರಿ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ ಮತ್ತು ಸ್ಥಳೀಯ ಹತ್ತು ಸಮಸ್ತರ ವತಿಯಿಂದ ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ‘ಸಮಗ್ರ ರಾವಣ’ ಹಾಗೂ ಮರುದಿನ ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಶ್ರೀ ದೇವಿ ಮಹಾತ್ಮೆ’ ಸೇವಾ ಬಯಲಾಟಗಳು ಜರಗಲಿವೆ. ಈ ಸಂದರ್ಭ ದಿನಾಂಕ 19 ರಂದು ಶುಕ್ರವಾರ ಏರ್ಪಡಿಸಲಾದ ‘ಬೊಂಡಾಲ ಜನಾರ್ಧನ ಶೆಟ್ಟಿ ಮತ್ತು ಬೊಂಡಾಲ ರಾಮಣ್ಣ ಶೆಟ್ಟಿ ಸಂಸ್ಮರಣಾ ಸಮಾರಂಭ’ ದಲ್ಲಿ ಕಟೀಲು ಕ್ಷೇತ್ರದ ಅರ್ಚಕರು ಮತ್ತು ವಿವಿಧ ಗಣ್ಯರು ಭಾಗವಹಿಸುವರು. ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡುವರು. ಕಟೀಲು ಮೇಳದ ರಂಗಸ್ಥಳದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕಲಾವಿದ ರಮೇಶ್ ಭಟ್ಟರಿಗೆ ‘ಬೊಂಡಾಲ ಪ್ರಶಸ್ತಿ ಪ್ರದಾನ’ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ತಿಳಿಸಿದ್ದಾರೆ.
ಪಾತ್ರಧಾರಿಯಾಗಿ ಗೋವಿಂದ ಭಟ್ಟರು ಪ್ರೇಕ್ಷಕರ ಮೇಲೆ ಬೀರುವ ಪ್ರಭಾವ ಬಹಳ ಗಾಢವಾದದ್ದು. ಆ ಪ್ರಭಾವ ಎಷ್ಟಿರುತ್ತದೆಂದರೆ ಅವರು ನಿರ್ವಹಿಸುವ ಪಾತ್ರಗಳಿಂದಾಚೆಗೆ ಯಕ್ಷಗಾನವೇ ಇಲ್ಲ ಎನ್ನುವಷ್ಟು. ಕೆ. ಗೋವಿಂದ ಭಟ್ಟರ ಕುರಿತಾಗಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಸಂಪಾಜೆ ಇವರು ಪ್ರಕಾಶಿಸಿದ ಎರಡು ಪುಸ್ತಕಗಳು ಬಿಡುಗಡೆಯಾಗಿವೆ. ಮೊದಲನೆಯದು ಡಾ. ಬಿ. ಪ್ರಭಾಕರ ಶಿಶಿಲ ಅವರು ಬರೆದ ಗೋವಿಂದ ಭಟ್ಟರ ಆತ್ಮಕಥೆ ‘ಯಕ್ಷೋಪಾಸನೆ’ ಹಾಗೂ ಇನ್ನೊಂದು ಹಿರಣ್ಯ ವೆಂಕಟೇಶ್ವರ ಭಟ್ಟ ಸಂಪಾದಕತ್ವದಲ್ಲಿ ಬಿಡುಗಡೆಗೊಂಡ ಸೂರಿಕುಮೇರಿ ಅವರ ಅಭಿನಂದನಾ ಗ್ರಂಥ ‘ಸವ್ಯಸಾಚಿ’.
ಮೊದಲನೆಯ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ 2008ರಲ್ಲಿ ಹೊರತಂದ ಪುಸ್ತಕ ‘ಯಕ್ಷೋಪಾಸನೆ’ ಡಾ. ಬಿ. ಪ್ರಭಾಕರ ಶಿಶಿಲರ ಅದ್ಭುತ ನಿರೂಪಣೆಯಿಂದ ಕೂಡಿದ್ದು ಪ್ರಾರಂಭದಿಂದ ಕೊನೆಯ ವರೆಗೂ ಓದಿಸಿಕೊಂಡು ಹೋಗುತ್ತದೆ. ಗ್ರಂಥದಲ್ಲಿ ಗೋವಿಂದ ಭಟ್ಟರ ಬಾಲ್ಯದಿಂದ ತೊಡಗಿ ಆ ಪುಸ್ತಕ ಪ್ರಕಟವಾಗುವ ವರೆಗಿನ ಅವರ ಜೀವನದ ವಿವಿಧ ಮಜಲುಗಳು, ಏಳುಬೀಳುಗಳನ್ನು ಸಮರ್ಥವಾಗಿ ನಿರೂಪಿಸಲಾಗಿದೆ. ಮೊದಲ ಭಾಗವು ಕರುಣರಸದ ಭಾವಾಭಿವ್ಯಕ್ತಿಯ ಧಾರೆಯಲ್ಲಿ ಮಿಂದು ತೋಯಿಸಿದರೂ ಮುಂದುವರಿದಂತೆ ಅವರ ಸಾಧನೆಗಳ ಅಲೆಯಲ್ಲಿ ನಾವೂ ತೇಲಾಡುವಂತೆ ಅನಿಸುತ್ತದೆ. ಮುಂದಿನ ಭಾಗದಲ್ಲಿ ಅವರ ವಿವಿಧ ಸಂದರ್ಶನಗಳಿಂದ ಆಯ್ದ ಪ್ರಶ್ನೋತ್ತರಗಳಿವೆ. ಈ ಪುಸ್ತಕದ ನಿರೂಪಣೆಯ ಕೊನೆಯಲ್ಲಿ ಗೋವಿಂದ ಭಟ್ಟರ ಈ ಮಾತುಗಳು ಸತ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
‘‘ಪಾತ್ರ ಯಾವುದೇ ಇರಲಿ, ತಕರಾರಿಲ್ಲದೆ ಕಲಾವಿದ ಒಪ್ಪಿಕೊಂಡರೆ ಕಲಾವಿದ ಬೆಳೆಯುತ್ತಾನೆ ಮತ್ತು ಪ್ರಯೋಗ ಯಶಸ್ವಿಯಾಗುತ್ತದೆ. ನಮ್ಮನ್ನು ನಾವು ಒಂದೆರಡು ಪಾತ್ರಗಳಿಗೆ ಮಾತ್ರ ಸೀಮಿತಗೊಳಿಸಿಕೊಂಡರೆ ಕಲಾಮಾಧ್ಯಮ ಸೊರಗುತ್ತದೆ. ಯಕ್ಷಗಾನವು ಒಂದು ಸಾಮುದಾಯಿಕ ಭಾವಾಭಿವ್ಯಕ್ತಿಯೇ ಹೊರತು ಏಕವ್ಯಕ್ತಿ ಪ್ರದರ್ಶನವಲ್ಲ. ಇಡೀ ತಂಡವಾಗಿ ಕಲಾವಿದರು ದುಡಿದರೆ ಎಂತಹ ಪ್ರಸಂಗ ವನ್ನಾದರೂ ಯಶಸ್ವಿಗೊಳಿಸಬಹುದು ಎಂಬುದು ನಾನು ಕಂಡುಕೊಂಡ ಸತ್ಯ.’’ ಗೋವಿಂದ ಭಟ್ಟರು ಈ ಮಾತಿನಂತೆಯೇ ನಡೆದುಕೊಂಡರು. ಅಗತ್ಯ ಬಿದ್ದಾಗ ಯಾವುದೇ ಪಾತ್ರವನ್ನು, ಎಷ್ಟೇ ಸಣ್ಣ ಪಾತ್ರವನ್ನಾದರೂ ನಿರ್ವಹಿಸಿದ ಉದಾಹರಣೆಗಳು ಕಣ್ಣಮುಂದೆ ಹೇರಳವಾಗಿವೆ.
ಇನ್ನೊಂದು ಪುಸ್ತಕ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದವರೇ ಹೊರತಂದ ಹಿರಣ್ಯ ವೆಂಕಟೇಶ್ವರ ಭಟ್ಟ ಸಂಪಾದಿತ ‘ಸವ್ಯಸಾಚಿ’. ಹೆಸರೇ ಹೇಳುವಂತೆ ಯಕ್ಷರಂಗದ ನಿಜ ಸವ್ಯಸಾಚಿಯ ಬಗ್ಗೆ ಕಲಾಪೋಷಕ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ರಿಂದ ಮೊದಲ್ಗೊಂಡು ಅನೇಕ ಗಣ್ಯರು ಬರೆದ ಅನಿಸಿಕೆಗಳಿವೆ. ಟಿ. ಶ್ಯಾಮ್ ಭಟ್ ಅವರು ಈ ಪುಸ್ತಕದಲ್ಲಿ ‘‘ಅವರ ವೇಷಗಳು ರಂಗಸ್ಥಳವನ್ನು ತುಂಬಿಕೊಳ್ಳುವ ಪರಿ ಅನುಪಮವಾದುದು. ಗೋವಿಂದ ಭಟ್ಟರಿಗೆ ಗೋವಿಂದ ಭಟ್ಟರೇ ಸರಿ. ಯಾರ ಅನುಕರಣೆಯೂ ಇಲ್ಲದೆ, ಯಾರನ್ನೂ ಅನುಸರಿಸದೆ ತಮ್ಮದೇ ಆದ ಶೈಲಿಯಿಂದ ಮೆರೆದವರು…. ಸಾಮಾಜಿಕವಾದ ಕೆಲವು ವಿವಾದಗಳನ್ನು ಅವರು ಬಗೆಹರಿಸಿದ್ದಿದೆ. ಹೀಗೆ ಸಾಮಾಜಿಕ ಸೇವೆಗಳನ್ನು ಬಹುಕಾಲ ನಡೆಸಿದ್ದಾರೆ’’ ಎಂದು ಬರೆದಿದ್ದಾರೆ.
ಹೀಗೆ ಸಮಾಜಮುಖಿಯಾದ ಗೋವಿಂದ ಭಟ್ಟರು ಬಾಲ್ಯದಲ್ಲಿ ಬಡತನದ ಬೇಗೆಯಲ್ಲಿ ಬೆಂದು ಬಸವಳಿದಿದ್ದರೂ ಅದನ್ನೆಲ್ಲಾ ಮೆಟ್ಟಿ ನಿಂತು ಛಲದಿಂದ ಬದುಕಿ ಈಗ ಸುದೃಢವಾದ ಆರ್ಥಿಕ ಬದುಕನ್ನು ಕಂಡುಕೊಂಡವರು. ‘ಸವ್ಯಸಾಚಿ’ ಹೊತ್ತಗೆಯ ಒಂದು ಭಾಗದಲ್ಲಿ ಯಕ್ಷಗಾನ ಕಲಾವಿದ ಕೆ. ವಿಶ್ವೇಶ್ವರ ಭಟ್, ಸುಣ್ಣಂಬಳ ಅವರು ತಮ್ಮ ಗುರುಗಳ ಬಗ್ಗೆ ಹೀಗೆ ಹೇಳುತ್ತಾರೆ. ‘‘ಗುರುಗಳ ಗದಾಯುದ್ಧದ ಕೌರವನ ಪಾತ್ರ. ನನ್ನದು ಕರ್ಣಪರ್ವದ ಕರ್ಣ. ವೇಷಭೂಷಣ ಒದಗಿಸುವವರು ಒಂದು ಬಿಳಿ ಬಣ್ಣದ ಸೋಗೆವಲ್ಲಿಯನ್ನು ಮಾತ್ರ ತಂದಿದ್ದರು. ನಾನು ವೇಷಧರಿಸುವಾಗ ಅದನ್ನು ಅವರ ಕೌರವನ ಪಾತ್ರಕ್ಕಾಗಿ ತೆಗೆದಿಟ್ಟು ಬೇರೆ ಬಣ್ಣದ ಸೋಗೆವಲ್ಲಿ ಹಾಕಿದೆ. ಅದನ್ನು ನೋಡಿದ ಅವರು ಬಂದು ನೀನು ಅದನ್ನು ಹಾಕು ಎಂದು ಹೇಳಿ ಮೊದಲು ನಾನು ಹಾಕಿದ ಸೋಗೆವಲ್ಲಿಯನ್ನು ತೆಗೆಸಿದ್ದು ಮಾತ್ರವಲ್ಲ ಅಂದು ಅವರು ಕೌರವನಿಗೆ ಬೇರೆ ಯಾವುದೋ ಒಂದು ಸೋಗೆವಲ್ಲಿ ಹಾಕಿದರು. ಹೀಗೆ ತನ್ನ ವೇಷಭೂಷಣಕ್ಕೆ ಕೊರತೆ ಮಾಡಿಕೊಂಡು ಇನ್ನೊಬ್ಬರನ್ನು ಮೆರೆಯಿಸುವ ಎಷ್ಟು ಮಂದಿಗಳನ್ನು ನಾವಿಂದು ಕಾಣಬಹುದು?’’ ನಿಜವಾಗಿಯೂ ಅತಿಶಯೋಕ್ತಿಗಳಿಂದ ಕೂಡಿದ ಮಾತಲ್ಲ ಇದು. ಇಂತಹ ಎಷ್ಟೋ ಸಂದರ್ಭಗಳಲ್ಲಿ ಗೋವಿಂದ ಭಟ್ಟರನ್ನು ಹತ್ತಿರದಿಂದ ಬಲ್ಲವರು ಒಪ್ಪುವ ಮಾತೇ.
ಅವರು ರಂಗದಲ್ಲಿ ಪಾತ್ರವೇ ಆಗಿರುತ್ತಿದ್ದರು. ಪಾತ್ರ, ಸ್ವಭಾವಗಳನ್ನು ತನ್ನ ಮೇಲೆ ಆವಾಹಿಸಿಕೊಳ್ಳುತ್ತಿದ್ದ ರೀತಿ ಅನನ್ಯವಾದದ್ದು. ‘ಯಕ್ಷೋಪಾಸನೆ’ಯಲ್ಲಿ ಅವರೇ ಹೇಳುವಂತೆ ‘‘ದ್ರೌಪದಿ ವಸ್ತ್ರಾಪಹರಣದ ಉದ್ದೇಶ ಪ್ರತೀಕಾರ. ಆ ಪಾತ್ರವನ್ನು ನಾನು ನಿರ್ವಹಿಸುವಾಗ ಹಿಂದೆ ನನ್ನ ವೈಯುಕ್ತಿಕ ಜೀವನದಲ್ಲಾದ ಅಪಮಾನ ಗಳನ್ನು ನೆನಪಿಸಿಕೊಂಡು ಈಗ ಅದಕ್ಕೆ ಪರಿಮಾರ್ಜನೆ ಮಾಡುತ್ತಿದ್ದೇನೆ ಎಂದುಕೊಳ್ಳುತ್ತಿದ್ದೆ. ಕೌರವನ ಪಾತ್ರ ಸಹಜವಾಗಿ ಅಭಿವ್ಯಕ್ತಿಗೊಳ್ಳುತ್ತಿದ್ದರೆ, ಅದಕ್ಕೆ ಈ ಭಾವ ಕಾರಣ ವಾಗಿರಬೇಕು.’’ ಎಂತಹಾ ಮಾರ್ಮಿಕವಾದ ಮಾತು. ಅಷ್ಟೇ ಸತ್ಯವೂ ಕೂಡ.