Friday, August 28, 2026
Home Blog Page 356

ತನ್ನದೇ ಶೈಲಿಯಿಂದ ಹಾಸ್ಯ ಪಾತ್ರಗಳಿಗೆ ಮೆರುಗು ನೀಡಿದ ಹಾಸ್ಯ ವಿಶಾರದ – ಶ್ರೀ ಬಂಟ್ವಾಳ ಜಯರಾಮ ಆಚಾರ್ಯ 

ಪ್ರತಿಯೊಂದು ಪ್ರಸಂಗದಲ್ಲೂ ಬೇರೆ ಬೇರೆ ಸ್ವಭಾವದ ವೇಷಗಳನ್ನು ಹಾಸ್ಯಗಾರನು ನಿರ್ವಹಿಸಲೇಬೇಕು. ಇದು ಅಷ್ಟೊಂದು ಸುಲಭವಲ್ಲ. ಪಾತ್ರದ ಸ್ವಭಾವ, ಪ್ರಸಂಗಜ್ಞಾನವನ್ನು ತಿಳಿದವನಿಗೆ ಮಾತ್ರ ಸಾಧ್ಯ. ಆಲಸಿಯಾಗದೆ ದೈಹಿಕವಾಗಿಯೂ, ಮಾನಸಿಕವಾಗಿಯೂ ಚುರುಕಾಗಿದ್ದವನಿಗೆ ಮಾತ್ರ ಸಾಧ್ಯ. ವೇಗವಾಗಿ, ವೈವಿಧ್ಯಮಯವಾಗಿ, ಪಾತ್ರೋಚಿತವಾಗಿ ಬಣ್ಣ ಹಾಕಿ, ವೇಷ ಮಾಡಿಕೊಂಡು ರಂಗಪ್ರವೇಶ ಮಾಡುವ ಕಲೆಯೂ ಅವನಿಗೆ ಕರಗತವಾಗಿರಬೇಕು. ಹೀಗೆ ಸದಾ ಅಧ್ಯಯನಶೀಲರಾಗಿ, ಕಲಾಸೇವೆಯನ್ನು ಮಾಡುತ್ತಾ ಹಾಸ್ಯಗಾರರಾಗಿ ರಂಜಿಸಿದವರು ಅನೇಕರು. ಅವರಲ್ಲೊಬ್ಬರು ಶ್ರೀ ಬಂಟ್ವಾಳ ಜಯರಾಮ ಆಚಾರ್ಯರು.

ಹಾಸ್ಯಗಾರ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರು ಪ್ರಸ್ತುತ ಶ್ರೀ ಹನುಮಗಿರಿ ಮೇಳದ ಕಲಾವಿದರು. ಸರಳ, ಸಜ್ಜನ, ನಿಗರ್ವಿ, ವಿನಯವಂತ ಹಾಸ್ಯಗಾರರು. ಇವರು ಜನಿಸಿದ್ದು 12-10-1957ರಂದು. ತಂದೆ ಬಂಟ್ವಾಳ ಗಣಪತಿ ಆಚಾರ್ಯ, ತಾಯಿ ಶ್ರೀಮತಿ ಭವಾನಿ ಅಮ್ಮ. ಗಣಪತಿ ಆಚಾರ್ಯರು ತನ್ನ ಕುಲವೃತ್ತಿಯಾದ ಚಿನ್ನದ ಕೆಲಸ ಮಾಡುವುದು ಮಾತ್ರವಲ್ಲದೆ ಆ ಕಾಲದ ಉತ್ತಮ ಕಲಾವಿದರಾಗಿದ್ದರು. ಹಾಸ್ಯಗಾರರಾಗಿ ಕಲಾಸೇವೆಯನ್ನು ಮಾಡುತ್ತಿದ್ದವರು. ಬಳ್ಳಂಬೆಟ್ಟು, ಹೆರ್ಗ, ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.

ವಿದೂಷಕ ಜಯರಾಮ ಆಚಾರ್ಯರು ಕಲಿತದ್ದು ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ). ಶಾಲಾ ದಿನಗಳಲ್ಲಿ ತೀರ್ಥರೂಪರಿಂದ ತನ್ನ ಕುಲಕಸುಬನ್ನು ಅಭ್ಯಾಸ ಮಾಡಿದ್ದರು. ಎಳವೆಯಲ್ಲೇ ಇವರಿಗೆ ಯಕ್ಷಗಾನಾಸಕ್ತಿ. ಬಂಟ್ವಾಳ ಆಸುಪಾಸಿನಲ್ಲಿ ನಡೆಯುತ್ತಿದ್ದ ಆಟ ತಾಳಮದ್ದಳೆ ಪ್ರದರ್ಶನಗಳನ್ನು ತಪ್ಪದೆ ನೋಡುತ್ತಿದ್ದರು.

ತಂದೆಯವರ ಜತೆಯೂ ಯಕ್ಷಗಾನ ಪ್ರದರ್ಶನಗಳಿಗೆ ಹೋಗುತ್ತಿದ್ದರು. ತಂದೆಯವರ ಜತೆಯಾಗಿಯೇ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟವನ್ನು ನಡೆಸಿ ವೇಷವನ್ನೂ ಮಾಡಿದರು.

ಹೀಗೆ ಯಕ್ಷಗಾನ ಪ್ರದರ್ಶನಗಳನ್ನು ಶ್ರದ್ಧೆಯಿಂದ ನೋಡಿದ ಪರಿಣಾಮದಿಂದ ನಾನಿಂದು ಕಲಾವಿದನಾದೆ. ಪ್ರಸಂಗ ಮಾಹಿತಿ, ವೇಷಗಳ ಸ್ವಭಾವವೇನು ಎಂಬುದನ್ನು ತಿಳಿಯಲು ನನಗೆ ಅನುಕೂಲವಾಯಿತು ಎಂದು ಜಯರಾಮ ಆಚಾರ್ಯರು ಹೇಳುತ್ತಾ ತನ್ನ ಬಾಲ್ಯದ ದಿನಗಳನ್ನು ನೆನಪಿಸುತ್ತಾರೆ. ಶಾಸ್ತ್ರೀಯವಾಗಿ ನಾಟ್ಯಾಭ್ಯಾಸ ಮಾಡುವ ಮೊದಲೇ ಬಂಟ್ವಾಳ ಜಯರಾಮ ಆಚಾರ್ಯರು ಅಮ್ಟಾಡಿ, ಸೊರ್ನಾಡು, ಸುಂಕದಕಟ್ಟೆ, ಕಟೀಲು ಮೇಳಗಳಲ್ಲಿ 4 ತಿರುಗಾಟ ನಡೆಸಿದ್ದರು! ಇದು ಇವರ ಪ್ರತಿಭೆಗೆ ಸಾಕ್ಷಿ.

1974-75ನೇ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ದಲ್ಲಿ ನಾಟ್ಯಾರ್ಜನೆಗಾಗಿ ಸೇರಿಕೊಂಡರು. ಅಲ್ಲಿ ಗುರುಗಳಾಗಿದ್ದವರು ಖ್ಯಾತ ಕಲಾವಿದರೂ, ಅನೇಕ ಶಿಷ್ಯಂದಿರನ್ನು ಸಿದ್ಧಗೊಳಿಸಿದ ಕೀರ್ತಿಗೆ ಪಾತ್ರರೂ ಆದ ಶ್ರೀ ಪಡ್ರೆ ಚಂದು.

ಸದ್ಯ ಖ್ಯಾತ ಕಲಾವಿದರಾದ ಕರ್ಗಲ್ಲು ವಿಶ್ವೇಶ್ವರ ಭಟ್, ಸಬ್ಬಣಕೋಡಿ ಕೃಷ್ಣ ಭಟ್, ಸಬ್ಬಣಕೋಡಿ ರಾಮ ಭಟ್, ವಸಂತ ಗೌಡ ಕಾಯರ್ತಡ್ಕ, ವೇಣೂರು ಸದಾಶಿವ ಕುಲಾಲ್, ಹಳುವಳ್ಳಿ ಗಣೇಶ ಭಟ್, ಕೆ. ಎಂ. ಕೃಷ್ಣ (ಬಣ್ಣದ ಮಹಾಲಿಂಗಜ್ಜನವರ ಮಗ) ಮೊದಲಾದವರು ಧರ್ಮಸ್ಥಳ ಲಲಿತ ಕಲಾಕೇಂದ್ರದಲ್ಲಿ ಬಂಟ್ವಾಳ ಜಯರಾಮ ಆಚಾರ್ಯರ ಸಹಪಾಠಿಗಳಾಗಿದ್ದರು

ಶ್ರೀ ಧರ್ಮಸ್ಥಳ ಲಲಿತ ಕಲಾ ಕೇಂದ್ರದಲ್ಲಿ ನಾಟ್ಯ ಕಲಿತ ಜಯರಾಮ ಆಚಾರ್ಯರು ಅದೇ ವರ್ಷ ಕಟೀಲು ಮೇಳಕ್ಕೆ ಕಲಾವಿದನಾಗಿ ಸೇರಿಕೊಂಡರು. ಬಲಿಪ ನಾರಾಯಣ ಭಾಗವತರು ಭಾಗವತರಾಗಿದ್ದ ಮೇಳದಲ್ಲಿ 4 ವರ್ಷಗಳ ಕಾಲ ತಿರುಗಾಟ ನಡೆಸಿದರು. ಕೋಡಂಗಿ, ಬಾಲ ಗೋಪಾಲರ ವೇಷಗಳನ್ನು ಪೂರ್ವರಂಗದಲ್ಲಿ ನಿರ್ವಹಿಸುತ್ತಾ, ಪ್ರಸಂಗದಲ್ಲೂ ಸಣ್ಣಪುಟ್ಟ ವೇಷಗಳನ್ನು ಮಾಡುತ್ತಾ, ನಿದ್ದೆ ಮಾಡದೆ ಪ್ರದರ್ಶನಗಳನ್ನು ನೋಡುತ್ತಾ ಹಂತ ಹಂತವಾಗಿ ಬೆಳೆದು ಈಗ ಉತ್ತಮ ಹಾಸ್ಯಗಾರರಾಗಿ ಹೆಸರು ಗಳಿಸಿದ್ದಾರೆ. ಕಟೀಲು ಮೇಳದಲ್ಲಿ 4 ವರ್ಷ ತಿರುಗಾಟ ನಡೆಸಿದ

ನಂತರ ಡಾ. ಶ್ರೀಧರ ಭಂಡಾರಿಯವರ ಸಂಚಾಲಕತ್ವದ ಪುತ್ತೂರು ಮೇಳದಲ್ಲಿ ತಿರುಗಾಟ. ಅಲ್ಲಿ ಶ್ರೇಷ್ಠ ಹಾಸ್ಯಗಾರರಾಗಿದ್ದ ವೀರಕಂಭ ತಿಮ್ಮಪ್ಪ ಕುಲಾಲರ ಒಡನಾಟವೂ ಇವರಿಗೆ ಸಿಕ್ಕಿತ್ತು. ಅವರ ಜತೆ ಹಾಸ್ಯಗಾರನಾಗಿಯೂ, ಮತ್ತೆ ಪ್ರಧಾನ ಹಾಸ್ಯಗಾರನಾಗಿಯೂ ಕಲಾಸೇವೆಯನ್ನು ನಡೆಸಿದರು. ನಂತರ ಸುಂಕದಕಟ್ಟೆ ಮೇಳದಲ್ಲಿ ಸುಜನ ಸುಳ್ಳ (ಖ್ಯಾತ ಹಾಸ್ಯಗಾರರು) ಅವರ ಜತೆ ಒಂದು ವರುಷ ತಿರುಗಾಟ ನಡೆಸಿದರು. ತರುವಾಯ ಮತ್ತೆ ಕಟೀಲು ಮೇಳದಲ್ಲಿ ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರರ ಜತೆಯಲ್ಲಿ ಕಲಾಸೇವೆಯನ್ನು ಮಾಡಿದರು.

ಮುಂದಿನ 5 ವರ್ಷಗಳ ಕಾಲ ಮತ್ತೆ ಪುತ್ತೂರು ಮೇಳದಲ್ಲಿ ಹಾಸ್ಯಗಾರನಾಗಿ ಕಲಾಸೇವೆಯನ್ನು ಮಾಡಿದ ಬಂಟ್ವಾಳ ಜಯರಾಮ ಆಚಾರ್ಯರು ಮತ್ತು ಕರ್ನೂರು ಕೊರಗಪ್ಪ ರೈಗಳ ಸಂಚಾಲಕತ್ವದ ಕದ್ರಿ ಮೇಳವನ್ನು ಸೇರಿಕೊಂಡರು. ಅಲ್ಲಿ ಇವರಿಗೆ ಕೋಳ್ಯೂರು ರಾಮಚಂದ್ರ ರಾವ್, ಕ್ರಿಶ್ಚನ್ ಬಾಬು, ಡಿ. ಮನೋಹರ ಕುಮಾರ್, ಮೂಡುಬಿದಿರೆ ಮಾಧವ ಶೆಟ್ರು, ಕುಡ್ತಡ್ಕ ಬಾಬು, ಸರಪಾಡಿ ಅಶೋಕ ಶೆಟ್ರು ಮೊದಲಾದವರ ಜತೆ ರಂಗದಲ್ಲಿ ಅಭಿನಯಿಸುವ ಅವಕಾಶ ಬಂತು. ನಂತರ ಕುಂಬಳೆ ಮೇಳದಲ್ಲಿ ತಿರುಗಾಟ. ಕುಂಬಳೆ ದಾಸಪ್ಪ ರೈಗಳ ನೇತೃತ್ವ. ಹರಿದಾಸ ಶ್ರೀ ರಾಮದಾಸ ಸಾಮಗ, ಪೆರುವಾಯಿ ನಾರಾಯಣ ಶೆಟ್ಟಿ, ಅರುವ ನಾರಾಯಣ ಶೆಟ್ಟಿ ಮೊದಲಾದವರೊಂದಿಗೆ ಅಭಿನಯಿಸುವ ಅವಕಾಶ.

ನಂತರ ಬಂಟ್ವಾಳ ಜಯರಾಮ ಆಚಾರ್ಯರು ಕಲಾಸೇವೆಯನ್ನು ಮಾಡಿದ್ದು ಸುರತ್ಕಲ್ಲು ಮೇಳದಲ್ಲಿ (2 ವರ್ಷ). ಅಗರಿ ರಘುರಾಮ ಭಾಗವತ, ಪದ್ಯಾಣ ಗಣಪತಿ ಭಟ್, ತೆಕ್ಕಟ್ಟೆ ಆನಂದ ಮಾಸ್ತರ್, ಕೊಕ್ಕಡ ಈಶ್ವರ ಭಟ್, ಶಿವರಾಮ ಜೋಗಿ ಮೊದಲಾದವರ ಜತೆ. ತದನಂತರ ಖ್ಯಾತ ಕಲಾವಿದರಾದ ಶ್ರೀ ಡಿ. ಮನೋಹರ ಕುಮಾರರ ಸಂಚಾಲಕತ್ವದ ಕದ್ರಿ ಮೇಳದಲ್ಲಿ 11 ವರುಷಗಳ ತಿರುಗಾಟ. ದಿನೇಶ ಅಮ್ಮಣ್ಣಾಯರ ಭಾಗವತಿಕೆ. ಅರುವ ಕೊರಗಪ್ಪ ಶೆಟ್ರು, ಪುಳಿಂಚ ರಾಮಯ್ಯ ಶೆಟ್ರು, ಮನೋಹರ ಕುಮಾರರೊಂದಿಗೆ ಹಾಸ್ಯಗಾರರಾಗಿ ಕಲಾಸೇವೆ.

ಬಳಿಕ ಕಲ್ಲಾಡಿ ವಿಠಲ ಶೆಟ್ಟರ ಸಂಚಾಲಕತ್ವದ, ಶ್ರೀ ಕುರಿಯ ಗಣಪತಿ ಶಾಸ್ತ್ರಿಗಳು ಭಾಗವತರಾಗಿದ್ದ ಕಟೀಲು 3ನೇ ಮೇಳದಲ್ಲಿ ಬಂಟ್ವಾಳ ಜಯರಾಮ ಆಚಾರ್ಯರು ಹಾಸ್ಯಗಾರರಾಗಿ ರಂಜಿಸಿದರು. ಮತ್ತೆ 2 ವರುಷಗಳ ಕಾಲ ಎಡನೀರು ಮೇಳ, 9 ವರ್ಷಗಳ ಕಾಲ ಹೊಸನಗರ ಮೇಳ, ಪ್ರಸ್ತುತ 2017ರಿಂದ ಹನುಮಗಿರಿ ಮೇಳದಲ್ಲಿ. ಹೀಗೆ, 50 ವರುಷಗಳ ಕಲಾಸೇವೆ ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರದ್ದು. ಕಲಾಪೋಷಕ, `ಸಂಪಾಜೆ ಯಕ್ಷೋತ್ಸವ’ದ ರೂವಾರಿ ಶ್ರೀ ಟಿ. ಶ್ಯಾಮ ಭಟ್ಟರನ್ನೂ, ಎಲ್ಲಾ ಕಲಾಪೋಷಕರನ್ನೂ, ಕಲಾಭಿಮಾನಿಗಳನ್ನೂ ಗೌರವಿಸುವ ಬಂಟ್ವಾಳ ಹಾಸ್ಯಗಾರರು ಕಲಾವಿದನಾಗಿ ನಾನು ಅತ್ಯಂತ ತೃಪ್ತನಿದ್ದೇನೆ ಎಂದು ಹೇಳುತ್ತಾರೆ.

ಯಕ್ಷಗಾನ ಬಯಲಾಟ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪಡೆದ ಶ್ರೀಯುತರನ್ನು ಅನೇಕ ಸಂಘ-ಸಂಸ್ಥೆಗಳು ಸನ್ಮಾನಿಸಿವೆ. ಇವರ ಪತ್ನಿ ಶ್ಯಾಮಲಾ ಸಂತುಷ್ಟ ಗೃಹಿಣಿಯಾಗಿ ಮನೆಯನ್ನು ನಡೆಸುತ್ತಿದ್ದಾರೆ. ಬಂಟ್ವಾಳ ಜಯರಾಮ ಆಚಾರ್ಯ ದಂಪತಿಗಳಿಗೆ ಇಬ್ಬರು ಮಕ್ಕಳು. ಹಿರಿಯಾಕೆ ಕು| ವರ್ಷಾ. ಶಿವಮೊಗ್ಗದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾಳೆ. ಕಿರಿಯವ ವರುಣ್ ಮಂಗಳೂರು ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ (KPT) ಇಂಜಿನಿಯರಿಂಗ್ ಡಿಪ್ಲೊಮಾ ವಿದ್ಯಾರ್ಥಿ.

ಲೇಖಕ: ರವಿಶಂಕರ್ ವಳಕ್ಕುಂಜ 

ಮೇಳಗಳ ಇಂದಿನ (27.01.2021) ಯಕ್ಷಗಾನ ಪ್ರದರ್ಶನಗಳ ವಿವರ

ಮೇಳಗಳ ಇಂದಿನ (27.01.2021) ಯಕ್ಷಗಾನ ಪ್ರದರ್ಶನಗಳ ವಿವರ
ಮೇಳಸ್ಥಳ/ಪ್ರಸಂಗ 
ಶ್ರೀ ಧರ್ಮಸ್ಥಳ ಮೇಳಮಾಧವನಗರ ನೇತ್ರಾವತಿ ರೈಸ್ ಮಿಲ್ ಆವರಣ (ಸುರತ್ಕಲ್ ಹತ್ತಿರ) – ಕಚ ದೇವಯಾನಿ – ರತಿ ಕಲ್ಯಾಣ 
ಕಟೀಲು ಒಂದನೇ ಮೇಳಕಟೀಲು ಕ್ಷೇತ್ರದಲ್ಲಿ 
ಕಟೀಲು ಎರಡನೇ ಮೇಳ ಗುರುಬೆಟ್ಟು ಹೌಸ್, ಮೆನ್ನಬೆಟ್ಟು, ಕಿನ್ನಿಗೋಳಿ 
ಕಟೀಲು ಮೂರನೇ ಮೇಳನಂದನ ಹೌಸ್, ಕಲ್ಲಮುಂಡ್ಕೂರು 
ಕಟೀಲು ನಾಲ್ಕನೇ ಮೇಳ ಶ್ರೀರಾಮ ಭಜನಾ ಮಂದಿರದ ಬಳಿ, ಕಿನ್ನಿಗೋಳಿ 
ಕಟೀಲು ಐದನೇ ಮೇಳ ಕಡ್ಪಲಗುರಿ ಮನೆ, ಅಶ್ವತ್ಥಪುರ 
ಕಟೀಲು ಆರನೇ ಮೇಳಕಾಮತ್ ಕ್ಯಾಶ್ಯೂ ಕಂಪೆನಿ ಬಳಿ, ಸುಂಕದಕಟ್ಟೆ, ಬಜಪೆ 

ಮಂದಾರ್ತಿ ಒಂದನೇ ಮೇಳ ಕೇಳಪೇಟೆ ಕೊಕ್ಕರ್ಣೆ 
ಮಂದಾರ್ತಿ ಎರಡನೇ ಮೇಳ ಕಾಸ್ ಗೋಡುಮಕ್ಕಿ, ಆರ್ಡಿ, ಅಲ್ಬಾಡಿ 
ಮಂದಾರ್ತಿ ಮೂರನೇ ಮೇಳ ಗುಡ್ಡೆಕೇರಿ, ತೀರ್ಥಳ್ಳಿ 
ಮಂದಾರ್ತಿ ನಾಲ್ಕನೇ ಮೇಳ ಬಿಕ್ರಿಮನೆ, ಕೋಡಿ, ಕುಂದಾಪುರ 
ಮಂದಾರ್ತಿ ಐದನೇ ಮೇಳ ಚಿಲುಮೆಜೆಡ್ಡು, ಸಿರಿಕೆರೆ, ಆಯನೂರು 
ಶ್ರೀ ಹನುಮಗಿರಿ ಮೇಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೊಂಪದವು – ಶ್ರೀ ರಾಮ ಕಾರುಣ್ಯ 
ಶ್ರೀ ಸಾಲಿಗ್ರಾಮ ಮೇಳಕಾರ್ಕಳ ಗಾಂಧಿ ಮೈದಾನ – ಬಿಚ್ಚುಗತ್ತಿ ಭರಮಣ್ಣ 
ಶ್ರೀ ಪೆರ್ಡೂರು ಮೇಳಆರೂರು – ಶಪ್ತ ಭಾಮಿನಿ 

ಶ್ರೀ ಸುಂಕದಕಟ್ಟೆ ಮೇಳ ಪೊರ್ಕೋಡಿ ನಾರಾಯಣ ಗುರು ನಗರ ಕಾಣದಗುಡ್ಡೆ – ಕೋಟಿ ಚೆನ್ನಯ
ಶ್ರೀ ಮಾರಣಕಟ್ಟೆ ಮೇಳ ‘ಎ’ಕಪ್ಪೆಕೆರೆಮನೆ, ಕಟ್ಟಿಮಕ್ಕಿ ಹರ್ಕೂರು 
ಶ್ರೀ ಮಾರಣಕಟ್ಟೆ ಮೇಳ ‘ಬಿ’ಕುಂಟುಮಾವು ಸೆಳ್ಕೋಡು  ಜಡ್ಕಲ್ 
ಶ್ರೀ ಮಾರಣಕಟ್ಟೆ ಮೇಳ ‘ಸಿ’ಕಾಳಿಕಾಂಬಾ ದೇವಸ್ಥಾನ, ಕಟ್ಕೆರೆ, ಕಾಳಾವರ 
ಶ್ರೀ ಪಾವಂಜೆ ಮೇಳ ಮಾರಿಗುಡಿ ದೇವಸ್ಥಾನ, ಎಣ್ಣೆಹೊಳೆ – ತ್ರಿಜನ್ಮ ಮೋಕ್ಷ 
ಶ್ರೀ ಹಟ್ಟಿಯಂಗಡಿ ಮೇಳಮೂಡೂರು ಹೈಗುಳಿ ದೇವಸ್ಥಾನ, ಕಟ್ಟಿನಮಕ್ಕಿ 
ಕಮಲಶಿಲೆ ಮೇಳ ‘ಎ’ಕೊಡ್ಜನಗಡಿ, ಹಳ್ಳಿಹೊಳೆ – ಕೂಡಾಟ
ಕಮಲಶಿಲೆ ಮೇಳ ‘ಬಿ’ಕೊಡ್ಜನಗಡಿ, ಹಳ್ಳಿಹೊಳೆ – ಕೂಡಾಟ
ಶ್ರೀ ಅಮೃತೇಶ್ವರೀ ಮೇಳಶ್ರೀ ಕ್ಷೇತ್ರದಲ್ಲಿ 
ಶ್ರೀ ಬೋಳಂಬಳ್ಳಿ ಮೇಳ ಅಂಪಾರು
ಶ್ರೀ ಸೌಕೂರು ಮೇಳಬಳ್ಕೂರು ಶ್ರೀ ನಂದಿಕೇಶ್ವರ ದೇವಸ್ಥಾನ – ನೂತನ ಪ್ರಸಂಗ 
ಶ್ರೀ ಹಾಲಾಡಿ ಮೇಳನೀರ್ಜೆಡ್ಡು, ಹೆಗ್ಗುಂಜೆ – ಶ್ರೀ ಹಾಲಾಡಿ ಕ್ಷೇತ್ರ ಮಹಾತ್ಮೆ 
ಶ್ರೀ ಬೆಂಕಿನಾಥೇಶ್ವರ ಮೇಳ  ಹೆಮ್ಮಾಡಿ ಜಂಕ್ಷನ್ – ಸತ್ಯೊದ ಸ್ವಾಮಿ ಕೊರಗಜ್ಜ 
ಶ್ರೀ ಮಡಾಮಕ್ಕಿ ಮೇಳಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ – ರಾಜವಂಶ ಗುಳಿಗ 
ಶ್ರೀ ಕ್ಷೇತ್ರ ಗೋಳಿಗರಡಿ ಮೇಳತಲ್ಲೂರು ಶ್ರೀ ಮಹಾಕಾಳಿ ದೇವಸ್ಥಾನ, ಕೋಟಿ ಚೆನ್ನಯ ಗರಡಿ – ಅಬ್ಬರದ ಹ್ಯಾಗುಳಿ 
ಶ್ರೀ ಹಿರಿಯಡಕ ಮೇಳಹೆಬ್ರಿ ಬಂಗಾರಗುಡ್ಡೆ – ಪವಿತ್ರ ಫಲ್ಗುಣಿ 
ಶ್ರೀ ಶನೀಶ್ವರ ಮೇಳ ವಂಡ್ಸೆ 
ಶ್ರೀ ಸಿಗಂದೂರು ಮೇಳಗಂಟಿಹೊಳೆ ಮರ್ಲುಚಿಕ್ಕು ದೇವಸ್ಥಾನ 
ಶ್ರೀ ನೀಲಾವರ ಮೇಳ ಶ್ರೀ ರಾಮ ಭಜನಾ ಮಂದಿರ, ಗಂಗಾಬೈಲು,ಕೊಡೇರಿ
ಶ್ರೀ ಮೇಗರವಳ್ಳಿ ಮೇಳ ಮೇಗರವಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿ – ದೇವರ ಸೇವೆಯಾಟ 

ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾ ಸಂಘದ ವಾರ್ಷಿಕೋತ್ಸವ

ದೆಹಲಿ ಕನ್ನಡಿಗ, ತುಳುವೆರ್ ಪತ್ರಿಕೆಗಳ ಸಂಪಾದಕ ಬಾ. ಸಾಮಗ ಅವರು ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾ ಸಂಘ ಜ.23 ರಂದು ಉಡುಪಿ ಕೆಳಾರ್ಕಳಬೆಟ್ಟಿನಲ್ಲಿ ಏರ್ಪಡಿಸಿದ 13ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಘದ ಗೌರವಾಧ್ಯಕ್ಷ ದಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗುರು ಬಡಾನಿಡಿಯೂರು ಕೇಶವ ರಾವ್ ಅವರನ್ನು ಸನ್ಮಾನಿಸಲಾಯಿತು.

ಉದ್ಯಮಿ ಆನಂದ ಎಂ. ಅಮೀನ್ ಸಾಮಾಜಿಕ ಸೇವಾ ಕಾರ್ಯಕರ್ತ ಮಂಜುನಾಥ ಹೆಬ್ಬಾರ್, ದೇವಸ್ಥಾನದ ಅಧ್ಯಕ್ಷ ಸದಾನಂದ ನಾಯ್ಕ್, ಸಂಘದ ಅಧ್ಯಕ್ಷ ಶೇಷರಾಜ ರಾವ್ ಶುಭ ಹಾರೈಸಿದರು. ಉದ್ಯಮಿ ಕೆ. ಅನಂತ ಸಾಮಗ, ಸಂಘಟಕ ಎಸ್. ಜಯರಾಮಯ್ಯ, ವೇಷದಾರಿ ಎಂ.ಕೆ. ಸುಕುಮಾರ ಶೆಟ್ಟಿ ಉಪಸ್ಥಿತರಿದ್ದರು. ರವಿನಂದನ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಅಭಿಮನ್ಯು ಕಾಳಗ, ಸೈಂಧವ ವಧೆ, ರತಿ ಕಲ್ಯಾಣ ಪ್ರಸಂಗಗಳ ಪ್ರದರ್ಶನ ನಡೆಯಿತು.

ಸಾವಿರದಾಚೆಯ ಗಿರಕಿಗಳು – ಚಂದ್ರಶೇಖರ ಧರ್ಮಸ್ಥಳ ಮತ್ತು ದಿವಾಕರ ರೈ ಸಂಪಾಜೆ 

ಈ ತಲೆಬರಹ ಓದುವಾಗಲೇ ಇಲ್ಲಿ ಯಾವ ವಿಷಯದ ಬಗೆಗೆ ಬರೆದಿರಬಹುದು ಎಂಬುದನ್ನು ಎಲ್ಲರೂ ನಿಖರವಾಗಿ ಊಹಿಸಬಹುದು. 2014ನೇ ಇಸವಿಯಲ್ಲಿ ನಡೆದ ಕಲ್ಲುಗುಂಡಿ ಸಂಪಾಜೆ ಯಕ್ಷೋತ್ಸವವು ಒಂದು ಅಭೂತಪೂರ್ವ ಘಟನೆಗೆ ಸಾಕ್ಷಿಯಾಯಿತು.

ಪ್ರತಿ ವರ್ಷದಂತೆ ನಡೆಯುವ ಯಕ್ಷೋತ್ಸವ ಆ ಬಾರಿ ನಿಗದಿಯಾದದ್ದು 01. 11. 2014ರಂದು. ಅಪರಾಹ್ನ 2 ಘಂಟೆಗೆ ಸಂಪನ್ನಗೊಂಡ ಆ ದಿನದ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪೇಜಾವರ, ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಎಡನೀರು, ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸುಬ್ರಹಣ್ಯ ಇವರ ಘನ ಉಪಸ್ಥಿತಿಯಿತ್ತು. ಸಭಾ ಕಾರ್ಯಕ್ರಮದ ನಂತರ 5 ಘಂಟೆಯಿಂದ ಯಕ್ಷಗಾನ ಬಯಲಾಟ ಆರಂಭವಾಗಿತ್ತು. ಆ ಬಾರಿಯ ಯಕ್ಷೋತ್ಸವದಲ್ಲಿ ಆಡಲಾದ ಪ್ರಸಂಗಗಳು ನಾಲ್ಕು. ಶಿವಕಾರುಣ್ಯ, ಭೀಷ್ಮ ಪ್ರತಿಜ್ಞೆ, ವಂಶವಾಹಿನಿ ಮತ್ತು ಅಮೃತಕಲಶ ಎಂಬ ಪ್ರಸಂಗಗಳಲ್ಲಿ ಮೊದಲೆರಡು ಪ್ರಸಂಗಗಳು ಮುಗಿದ ನಂತರ ಸುಮಾರು ಮಧ್ಯರಾತ್ರಿಯ ಸಮಯದಲ್ಲಿ ವಂಶವಾಹಿನಿ ಪ್ರಸಂಗದ ಪ್ರದರ್ಶನ ಆರಂಭವಾಯಿತು.

ಈ ಪ್ರಸಂಗದ ಮುಖ್ಯ ಪಾತ್ರಗಳಾದ ಸುದರ್ಶನ ಮತ್ತು ಶತ್ರುಜಿತನ ಯುದ್ಧದ ಭಾಗದ ಸನ್ನಿವೇಶದಲ್ಲಿ ಅದ್ಭುತವೊಂದು ನಡೆದುಹೋಯಿತು. ಯಕ್ಷೋತ್ಸವ 01. 11. 2014 ರಂದು ಆಗಿದ್ದರೂ ಈ ದೃಶ್ಯ ರಂಗದಲ್ಲಿ ಬರುವಾಗ 02. 11. 2014ರ ಬೆಳಗಿನ ಜಾವದ ಸಮಯವಾಗಿತ್ತು. ಒಬ್ಬನೇ ರಾಜನ ಇಬ್ಬರು ಮಡದಿಯರ ಮಕ್ಕಳ ನಡುವೆ ನಡೆದ ಕಲಹದಲ್ಲಿ ಪಾತ್ರಧಾರಿಗಳಾಗಿ ಶ್ರೀ ಚಂದ್ರಶೇಖರ ಧರ್ಮಸ್ಥಳ (ಶತ್ರುಜಿತ) ಮತ್ತು ಶ್ರೀ ದಿವಾಕರ ರೈ ಸಂಪಾಜೆ (ಸುದರ್ಶನ) ಇವರುಗಳು ಭಾಗವಹಿಸಿದ್ದರು. ವೈಯುಕ್ತಿಕವಾಗಿ ಇಬ್ಬರು ಕಲಾವಿದರೂ ಸ್ನೇಹಿತರಾದರೂ ಆ ದಿನ ವೇದಿಕೆಯಲ್ಲಿ ಪಾತ್ರೋಚಿತ ಸನ್ನಿವೇಶ ಮತ್ತು ಕಥಾ ಸಾರದಂತೆ ಶತ್ರುಗಳಾಗಿದ್ದರು!

ಯುದ್ಧದ ಸನ್ನಿವೇಶದಲ್ಲಿ ಅಲ್ಲಿ ನೆರೆದಿದ್ದ ಅಸಂಖ್ಯಾತ ಪ್ರೇಕ್ಷಕರೆದುರು ಇಬ್ಬರಿಗೂ ಎಲ್ಲಿಲ್ಲದ ಹುರುಪು ಬಂದಿರಬೇಕು. ನಾಟ್ಯದ ವರಸೆ ವೈವಿಧ್ಯಗಳು ಇನ್ನಿಲ್ಲದಂತೆ ಮೂಡಿಬಂದುವು. ಇಬ್ಬರಿಗೂ ಸ್ಪರ್ಧೆಯ ಮನೋಭಾವ ಮೂಡತೊಡಗಿತು. ದಿಗಿಣಗಳು ರಂಗಸ್ಥಳದಲ್ಲಿ ದೂಳೆಬ್ಬಿಸಿದುವು. ಯುದ್ಧದ ಕೊನೆಯ ಸನ್ನಿವೇಶದಲ್ಲಂತೂ ಪ್ರೇಕ್ಷಕರು ಉಸಿರು ಬಿಗಿಹಿಡಿವ ಗಂಭೀರವಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದರೆ ಅದು ಅತಿಶಯೋಕ್ತಿಯಾಗಲಾರದು. ಯುದ್ಧದ ಕೊನೆಯ ಹಂತಕ್ಕೆ ಬಂದಾಗ ಒಂದು ಪದ್ಯಕ್ಕೆ ಇಬ್ಬರೂ ಸುಮಾರು ತಲಾ 50ರಷ್ಟು ದಿಗಿಣಗಳನ್ನು ಹಾರಿ ಗಿರಕಿ ತಿರುಗಲು ಸುರುಮಾಡಿದರು.

ಇಬ್ಬರಲ್ಲಿ ಒಬ್ಬರು ಗಿರಕಿ ತಿರುಗಲು ಪ್ರಾರಂಭಿಸಿದರು ಎಂದು ಊಹಿಸಿದರೆ ಅದು ತಪ್ಪು. ಬದಲಾಗಿ ಇಬ್ಬರೂ ಜೊತೆಯಾಗಿ ತಿರುಗಲು(ಗಿರಕಿ) ತೊಡಗಿದರು. ಹಾಗೆ ಪ್ರಾರಂಭಗೊಂಡ ಸುತ್ತು ತಿರುಗುವಿಕೆ ನಿಮಿಷ ಪೂರ್ತಿಯಾದರೂ ನಿಲ್ಲಲಿಲ್ಲ. ಅಂದು ಇಬ್ಬರಲ್ಲೂ ಯಾಕೋ ಸ್ಪರ್ಧಾ ಮನೋಭಾವ ಅಧಿಕವಾಗಿದ್ದಂತೆ ತೋರಿತು. ‘ನೀ ಬಿಟ್ಟರೂ ನಾ ಬಿಡೆ’ ಎಂಬ ಛಲವೋ ಅಥವಾ ಸ್ಪರ್ಧೆಯೋ ಎಂಬುದನ್ನು ತಿಳಿಯದಂತೆ ತೊಡಗಿದ ಈ ಸ್ಪರ್ಧೆ ನಿಮಿಷ ಹತ್ತಾದರೂ ನಿಲ್ಲುವ ಲಕ್ಷಣಗಳು ಗೋಚರಿಸಲಿಲ್ಲ. ಹತ್ತು ನಿಮಿಷಗಳ ನಂತರ ಮುಗಿಲು ಮುಟ್ಟಿದ ಪ್ರೇಕ್ಷಕರ ಸಿಳ್ಳೆ, ಚಪ್ಪಾಳೆಗಳ ಸದ್ದುಗಳ ನಡುವೆ ಚೆಂಡೆ ಮದ್ದಲೆಗಳ ನಿನಾದಗಳು ಅಡಗಿ ಹೋದಂತೆ ಭಾಸವಾಯಿತು. ಆದರೂ ಅವರ ತಿರುಗುವಿಕೆಯ ನಾಟ್ಯ ನಿಲ್ಲಲಿಲ್ಲ.

ಮತ್ತೂ ಮತ್ತೂ ಮುಂದುವರಿಯುತ್ತಾ 15 ನಿಮಿಷಗಳ ವರೆಗೆ ತಲುಪಿತು. ಪ್ರೇಕ್ಷಕರಾಗಿದ್ದವರಿಗೆ ಸಿಳ್ಳು, ಕೇಕೆ, ಚಪ್ಪಾಳೆ ಹೊಡೆದು ಆಯಾಸವಾದಂತೆ ಅನಿಸತೊಡಗಿತು. ಆದರೆ ರಂಗದಲ್ಲಿದ್ದ ಕುಣಿಯುತ್ತಿದ್ದ ಈರ್ವರಿಗೂ ಆಯಾಸವಾದಂತೆ ಕಾಣಿಸಲಿಲ್ಲ. ಚೆಂಡೆಯ  ಬದಲಾದುದು ಮಾತ್ರವಲ್ಲ, ಹೆಚ್ಚಾಯಿತು. ಒಂದು ಚೆಂಡೆಯ ಬದಲು ಇಬ್ಬರು ವಾದಕರಿಂದ ಎರಡು ಚೆಂಡೆಗಳ ವಾದನ. ಆದರೂ ಶತ್ರುಜಿತ, ಸುದರ್ಶನರ ಗಿರಕಿ ನಿಲ್ಲಲಿಲ್ಲ. ಚೆಂಡೆವಾದಕರ ಸಂಖ್ಯೆ ಮೂರಕ್ಕೇರಿತು. ಆದರೂ ಏನೂ ವ್ಯತ್ಯಾಸವಾಗಲಿಲ್ಲ. ಚಂದ್ರಶೇಖರ ಧರ್ಮಸ್ಥಳ ಮತ್ತು  ದಿವಾಕರ ರೈ ಸಂಪಾಜೆ ಇನ್ನೂ ತಿರುಗುತ್ತಲೇ ಇದ್ದರು. ನೋಡುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ತಲೆ ತಿರುಗಿದ ಅನುಭವವಾದರೂ ಕಲಾವಿದರಿಗೇನೂ ಆಗಲಿಲ್ಲ. 

ಯಾಕೋ ಏನೋ ಇದು ವಿಷಮಕ್ಕೆ ತಲುಪುವ ಮೊದಲೇ ಸಂಘಟಕರ, ಹಿರಿಯರ ಸೂಚನೆ ಭಾಗವತರಿಗೆ ಸಿಕ್ಕಿರಬಹುದು. ಭಾಗವತರಿಂದ ಮುಂದಿನ ಪದ್ಯಕ್ಕೆ ಎತ್ತುಗಡೆಯೂ ಆಯಿತು. ಆದರೆ ಅಷ್ಟರಲ್ಲಾಗಲೇ ಅತ್ಯಪೂರ್ವ ದಾಖಲೆಯೊಂದು ಸೃಷ್ಟಿಯಾಗಿಬಿಟ್ಟಿತ್ತು. ಇಬ್ಬರು ಕಲಾವಿದರೂ ಸಾವಿರಕ್ಕೂ ಮಿಕ್ಕಿದ ಗಿರಕಿಗಳನ್ನು (1000 ಸುತ್ತು) ಪೂರೈಸಿಯಾಗಿತ್ತು. ಗೌರವಪೂರ್ವಕವಾಗಿ ಅಲ್ಲಿ ತುಂಬಿ ತುಳುಕುತ್ತಿದ್ದ ಪ್ರೇಕ್ಷಕರ ಗಡಣವೇ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿ ಕಲಾವಿದರನ್ನು ಪ್ರೋತ್ಸಾಹಿಸಿತು.

ಇದೊಂದು ಅತ್ಯಪೂರ್ವ ಅನುಭವ. ಸಂಪಾಜೆಯ ಯಕ್ಷೋತ್ಸವಗಳ ಇತಿಹಾಸದಲ್ಲಿ ದಾಖಲೆಯಾಗಿ ಉಳಿದುಬಿಡುತ್ತದೆ. ಸಂಪಾಜೆ ಯಕ್ಷೋತ್ಸವದಲ್ಲಿ ಮಾತ್ರವಲ್ಲದೆ ಈ ವರೆಗಿನ ಯಕ್ಷಗಾನದ ಸಮಗ್ರ ಇತಿಹಾಸದ ಪುಟಗಳನ್ನು ತೆರೆದು ನೋಡಿದರೂ ನಮಗೆ ಇಂತಹದೊಂದು ಘಟನೆ ಉಲ್ಲೇಖವಾದುದು ಕಂಡು ಬರುವುದಿಲ್ಲ. ಶ್ರೀ ರಾಧಾಕೃಷ್ಣ ಭಟ್, ಕೋಂಗೋಟ್ ಅವರು ಈ ವಿಡಿಯೋವನ್ನು ಯು ಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಅದನ್ನು ಮತ್ತೆ ಮತ್ತೆ ನೋಡುವಾಗಲೂ ಉಸಿರು ಬಿಗಿ ಹಿಡಿದು ನೋಡುವ ಸನ್ನಿವೇಶ ಎದುರಾಗುತ್ತದೆ. 

ಈ ಪ್ರದರ್ಶನದ ಬಗ್ಗೆ ಎರಡಭಿಪ್ರಾಯಗಳಿರಬಹುದು. ಕಲಾವಿದರ ಆರೋಗ್ಯ ದೃಷ್ಟಿಯಿಂದಲೂ ಆಕ್ಷೇಪ ಅಥವಾ ಯಕ್ಷಗಾನದ ಸಾಂಪ್ರದಾಯಿಕತೆಗೆ ಪೂರಕವಾಗಿಲ್ಲ ಎಂಬ ವಾದ ಇವೆರಡೂ ಇರಬಹುದು. ಅವುಗಳೇನೇ ಇರಲಿ. ಕಲಾವಿದರೀರ್ವರೂ ಕಾಲು ನೋವಿನ ಸಮಸ್ಯೆ ಕಾಡುತ್ತಿದ್ದರೂ ಈ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಇದು ಯಕ್ಷಗಾನ ಪ್ರೇಮಿಗಳು ಸದಾಕಾಲ ನೆನಪಿಡುವಂತೆ ಮಾಡಿದ ಪ್ರದರ್ಶನ ಎಂಬುದರಲ್ಲಿ ಎರಡು ಮಾತಿಲ್ಲ. 

ಮೇಳಗಳ ಇಂದಿನ (26.01.2021) ಯಕ್ಷಗಾನ ಪ್ರದರ್ಶನಗಳ ವಿವರ

ಮೇಳಗಳ ಇಂದಿನ (26.01.2021) ಯಕ್ಷಗಾನ ಪ್ರದರ್ಶನಗಳ ವಿವರ
ಮೇಳಸ್ಥಳ/ಪ್ರಸಂಗ 
ಶ್ರೀ ಧರ್ಮಸ್ಥಳ ಮೇಳಕೆದೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ – ಸಂಪೂರ್ಣ ಶ್ರೀ ದೇವಿ ಮಹಾತ್ಮೆ 
ಕಟೀಲು ಒಂದನೇ ಮೇಳನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದ ಬಳಿ 
ಕಟೀಲು ಎರಡನೇ ಮೇಳ ಕೋಟೆಯಡಿಮನೆ, ಬಿಜೂರು, ಕುಂದಾಪುರ 
ಕಟೀಲು ಮೂರನೇ ಮೇಳಹೊಸಗದ್ದೆಮನೆ, ಐಕಳ 
ಕಟೀಲು ನಾಲ್ಕನೇ ಮೇಳ ಕಾನ, ವಿವೇಕನಗರ, ಮುಚ್ಚೂರು 
ಕಟೀಲು ಐದನೇ ಮೇಳ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ, ಉಳಾಯಿಬೆಟ್ಟು, ಪೆರ್ಮಂಕಿ, ಗುರುಪುರ
ಕಟೀಲು ಆರನೇ ಮೇಳಕಟೀಲು ಕ್ಷೇತ್ರದಲ್ಲಿ 

ಮಂದಾರ್ತಿ ಒಂದನೇ ಮೇಳ ಉಗ್ರಾಣಿ, ಗಣಪನಮನೆ, ಉಳ್ತೂರು 
ಮಂದಾರ್ತಿ ಎರಡನೇ ಮೇಳ ಗೋಯಾಡಿಮನೆ, ಮಣೂರು, ಪಡುಕೆರೆ 
ಮಂದಾರ್ತಿ ಮೂರನೇ ಮೇಳ ಕುಳಗೇರಿ, ಸರಳ, ಸಂಕದಹೊಳೆ 
ಮಂದಾರ್ತಿ ನಾಲ್ಕನೇ ಮೇಳ ಉಂಬಳಬೆಟ್ಟು, ಮೇಲ್ಮನೆ ನಂಚಾರು 
ಮಂದಾರ್ತಿ ಐದನೇ ಮೇಳ ವೆಂಕನಹಳ್ಳಿ, ಕುಟ್ಲಗಾರು, ಕನ್ನಂಗಿ 
ಶ್ರೀ ಹನುಮಗಿರಿ ಮೇಳ ಶ್ರೀ ಬ್ರಹ್ಮ ಬಂಟರ ಕೋಟಿ ಚೆನ್ನಯ, ಪಂಜುರ್ಲಿ ಹಾಯ್ಗುಳಿ ಮತ್ತು ಪರಿವಾರಗಳ ಗರಡಿ, ಗುಜ್ಜಾಡಿ – ವಿರೋಚನ ಕಾಳಗ, ಗದಾಯುದ್ಧ, ರಕ್ತರಾತ್ರಿ 
ಶ್ರೀ ಸಾಲಿಗ್ರಾಮ ಮೇಳಪರ್ಕಳ ಸರಸ್ವತಿನಗರ – ಬಿಚ್ಚುಗತ್ತಿ ಭರಮಣ್ಣ 
ಶ್ರೀ ಪೆರ್ಡೂರು ಮೇಳಜನ್ಸಾಲೆ ಹಂಚಿನಂಗಡಿ ಡಿ. ಮಧುಸೂದನ ಕಾಮತ್ ಅವರ ಮನೆಯ ವಠಾರ – ಸುದರ್ಶನ, ಚಂದ್ರಹಾಸ 

ಶ್ರೀ ಸುಂಕದಕಟ್ಟೆ ಮೇಳ ಪ್ರೇಮ ನಿಲಯ, ಮಂಜಲ್ತಾರು, ಮಾಳ, ಬಜಗೋಳಿ – ಅಬ್ಬರದ ಬೊಬ್ಬರ್ಯೆ 
ಶ್ರೀ ಮಾರಣಕಟ್ಟೆ ಮೇಳ ‘ಎ’ಅಂಬಾಗಿಲು, ಉಪ್ಪುಂದ 
ಶ್ರೀ ಮಾರಣಕಟ್ಟೆ ಮೇಳ ‘ಬಿ’ಶ್ರೀ ಕ್ಷೇತ್ರದಲ್ಲಿ 
ಶ್ರೀ ಮಾರಣಕಟ್ಟೆ ಮೇಳ ‘ಸಿ’ನೀರ್ಬಳ್ಳಿ, ಹಿಲ್ಕೋಡ್, ನೇರಳಕಟ್ಟೆ 
ಶ್ರೀ ಪಾವಂಜೆ ಮೇಳ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನ, ಆಲಂಗಾರು – ಶ್ರೀ ದೇವಿ ಮಹಾತ್ಮೆ 
ಶ್ರೀ ಹಟ್ಟಿಯಂಗಡಿ ಮೇಳಬಸ್ರೂರು, ಕೊಳ್ಕೆರೆ – ಕೊರಾಳ ಶ್ರೀ ಚಿಕ್ಕಮ್ಮ ದೇವಿ ಮಹಾತ್ಮೆ 
ಕಮಲಶಿಲೆ ಮೇಳ ‘ಎ’ಕಾವ್ರಾಡಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರ 
ಕಮಲಶಿಲೆ ಮೇಳ ‘ಬಿ’ಶ್ರೀ ಬ್ರಾಹ್ಮೀ ಭಕ್ತವೃಂದ, ಸೌಡ

ಶ್ರೀ ಬಪ್ಪನಾಡು ಮೇಳಸಜೀಪಮುನ್ನೂರು ಯುವಕಸಂಘ, ಕಂದೂರು – ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ 
ಶ್ರೀ ಸಸಿಹಿತ್ಲು ಭಗವತೀ ಮೇಳ ಅರಿಯಾಳ ಪೇಟೆ, ನಿಡ್ಡೋಡಿ – ಕೋರ್ದಬ್ಬು ಬಾರಗ 
ಶ್ರೀ ಅಮೃತೇಶ್ವರೀ ಮೇಳ ಕುಮ್ರಗೋಡು, ಮುಳ್ಳುಜಡ್ದು 
ಶ್ರೀ ಬೋಳಂಬಳ್ಳಿ ಮೇಳ ತೆಗ್ಗರ್ಸೆ, ಗುಡ್ಡೆ ಅಂಗಡಿ – ನಾಗ ಸುನೇತ್ರೆ 
ಶ್ರೀ ಸೌಕೂರು ಮೇಳಆರ್ಮಕ್ಕಿ, ಶಿರೂರು (ಬೈಂದೂರು) 
ಶ್ರೀ ಹಾಲಾಡಿ ಮೇಳಶ್ರೀ ನಾಗ ಬೊಬ್ಬರ್ಯ ದೇವಸ್ಥಾನ, ಕುಂದಾಪುರ ಮೀನು ಮಾರ್ಕೆಟ್ ಹತ್ತಿರ 
ಶ್ರೀ ಬೆಂಕಿನಾಥೇಶ್ವರ ಮೇಳ  ಬಗ್ವಾಡಿ ಮಹಿಷಮರ್ದಿನಿ ಸನ್ನಿಧಾನ – ಸತ್ಯೊದ ಸ್ವಾಮಿ ಕೊರಗಜ್ಜ 

ಶ್ರೀ ಮಡಾಮಕ್ಕಿ ಮೇಳಶಿರೂರು ದೊಂಬೆ ತ್ರಿಶ್ಯೂಲ್ ಜೆಟ್ಟಿಗೇಶ್ವರ ದೇವಸ್ಥಾನ 
ಶ್ರೀ ಕ್ಷೇತ್ರ ಗೋಳಿಗರಡಿ ಮೇಳಶ್ರೀ ಕೋಟಿ ಚೆನ್ನಯ – ಪಂಜುರ್ಲಿ ಗರಡಿ, ಬಸ್ರೂರು, ಮೂಡ್ಕೇರಿ
ಶ್ರೀ ಹಿರಿಯಡಕ ಮೇಳಅತ್ತೂರು, ಗುಂಡ್ಯಡ್ಕ (ಕಾರ್ಕಳ) ಧರ್ಮಶಾಸ್ತಾ ಯುವಕ ಮಂಡಲ – ಪವಿತ್ರ ಫಲ್ಗುಣಿ 
ಶ್ರೀ ಶನೀಶ್ವರ ಮೇಳ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಠಾರ, ಮುದೂರು 
ಶ್ರೀ ಸಿಗಂದೂರು ಮೇಳಸಿದ್ಧಾಪುರ, ಕಲ್ಲುಗುಡ್ಡಿ ಕೇಳಾಬೈಲು ರಸ್ತೆ  
ಶ್ರೀ ನೀಲಾವರ ಮೇಳ ಬಿ.ಸಿ ರೋಡ್ ರಿಕ್ಷಾ ನಿಲ್ದಾಣ ಬಳಿ

ಶ್ರೀ ರಾಮ ಪಟ್ಟಾಭಿಷೇಕ – ಯಕ್ಷ ಕಲಾ ಅಕಾಡೆಮಿಯಲ್ಲಿ ತಾಳಮದ್ದಳೆ

ಗಣರಾಜ್ಯೋತ್ಸವ‌ದ ಪ್ರಯುಕ್ತ, ಬೆಂಗಳೂರಿನ ಯಕ್ಷ ಕಲಾ ಅಕಾಡೆಮಿಯು ವಿಶೇಷ ಕಾರ್ಯಕ್ರಮ‌ವನ್ನು ಹಮ್ಮಿಕೊಂಡಿದೆ. 72ನೇ ಗಣರಾಜ್ಯೋತ್ಸವ‌ದ ಪ್ರಯುಕ್ತ ಜನವರಿ 26ರಂದು ಯಕ್ಷ ಕಲಾ ಅಕಾಡೆಮಿಯ ಆವರಣದಲ್ಲಿ ” ಶ್ರೀ ರಾಮ ಪಟ್ಟಾಭಿಷೇಕ ” ಎಂಬ ಪೌರಾಣಿಕ ಪ್ರಸಂಗದ ತಾಳಮದ್ದಳೆಯನ್ನು ಸಂಸ್ಥೆಯ ಕಲಾವಿದರು ನಡೆಸಿಕೊಡಲಿದ್ದಾರೆ.

ಭಾಗವತಿಕೆ‌ಯಲ್ಲಿ, ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ, ಗುರು ಕೋಟ ಕೃಷ್ಣ ಮೂರ್ತಿ ತುಂಗ, ಹಾಗೂ ಕುಮಾರಿ ಚಿತ್ಕಲಾ ಕೆ. ತುಂಗ, ಮದ್ದಳೆಯ‌ಲ್ಲಿ ಚಿನ್ಮಯ್ ಅಂಬರಗೊಡ್ಲು, ರಾಘು ಶರ್ಮಾ, ಮುಮ್ಮೇಳದಲ್ಲಿ, ರವಿ ಮಡೋಡಿ, ಮನೋಜ್ ಭಟ್, ಆದಿತ್ಯ ಉಡುಪ, ಶಶಾಂಕ್ ಕಾಶಿ, ಪ್ರದೀಪ ಮಧ್ಯಸ್ಥ,ಆದಿತ್ಯ ಹೊಳ್ಳ, ಸುಹಾಸ ಕರಬ, ಸದಾಶಿವ ತುಂಗ, ಶ್ರೀ ನಿಧಿ ಎಂ.ಎಸ್., ವಾಸುದೇವ, ಶ್ರೀಮತಿ ಅರ್ಚನಾ, ಶ್ರೀ‌ಮತಿ ಚೇತನಾರವರು ಭಾಗವಹಿಸಲಿದ್ದಾರೆ ಎಂದು ಯಕ್ಷ ಕಲಾ ಅಕಾಡೆಮಿಯ ಕಾರ್ಯದರ್ಶಿ ಕೆ.ಅನಸೂಯಾರವರು ತಿಳಿಸಿದ್ದಾರೆ. ಸರಕಾರದ ಕೋವಿಡ್ ನಿಯಮಗಳನ್ನು ಅನುಸರಿಸಿ ಕಾರ್ಯ‌ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಂಸ – ಕಂಸ – ಕಂಸ : ಕದ್ರಿ ರಾಜಾಂಗಣದಲ್ಲಿ ಪೆರ್ಡೂರು ಮೇಳದವರಿಂದ ಯಕ್ಷಗಾನ ಪ್ರದರ್ಶನ

ರಂಗಸ್ಥಳ ಮಂಗಳೂರು ರಿ.  ಅರ್ಪಿಸುವ ಮತ್ತು ಪೆರ್ಡೂರು ಮೇಳದವರಿಂದ ದಿನಾಂಕ 30 – 1 – 21 ನೇ ಶನಿವಾರ  ರಾತ್ರಿ 7-00 ರಿಂದ (ಕಾಲ ಮಿತಿ) ಕದ್ರಿ ರಾಜಾಂಗಣದಲ್ಲಿ ಕಂಸ – ಕಂಸ  – ಕಂಸ ( ಕಂಸ ಜನನ –  ಕಂಸ ಧಿಗ್ವಿಜಯ –  ಕಂಸ ವಧೆ ) ಎಂಬ ಯಕ್ಷಗಾನ ಪ್ರದರ್ಶನ  ನಡೆಯಲಿದೆ. 

ರಂಗಸ್ಥಳ ಮಂಗಳೂರು (ರಿ) ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ಯಕ್ಷಗಾನ ಕಲಾಭಿಮಾನಿಗಳಿಗೆ ಸ್ವಾಗತ ಕೋರಿದ್ದಾರೆ. ಈ ಪ್ರದರ್ಶನಕ್ಕೆ ಉಚಿತ ಪ್ರವೇಶವಿರುವುದಾದರೂ ಸರಕಾರದ ನಿಯಮದಂತೆ ಸಾಮಾಜಿಕ ಅಂತರ ಮತ್ತು ಮಾಸ್ಕ್  ಕಡ್ಡಾಯ ಎಂದೂ ಸಂಘಟಕರು ತಿಳಿಸಿದ್ದಾರೆ. 


ಅನುಭವಿ ಕಲಾವಿದ – ಶ್ರೀ ಬಾಲಕೃಷ್ಣ ಶೆಟ್ಟಿ ತಾರಿಯಡ್ಕ

ಒಬ್ಬಳು ತಾಯಿ ಹೆತ್ತ ಎಲ್ಲಾ ಮಕ್ಕಳೂ ಒಂದೇ ತೆರನಿರುವುದಿಲ್ಲ. ಇರಬೇಕೆಂಬ ನಿಯಮವೂ ಇಲ್ಲ. ಕೆಲವರಿಗೆ ಅವಕಾಶಗಳು ಹೆಚ್ಚು. ಕೆಲವರು ಅವಕಾಶವಿಲ್ಲದ ಪ್ರತಿಭೆಗಳಾಗಿಯೇ ಉಳಿಯುವುದುಂಟು. ಕೆಲವರು ಶ್ರೇಷ್ಠ ಕಲಾವಿದನೆಂದು ಪ್ರಸಿದ್ಧಿಯನ್ನು ಪಡೆಯುತ್ತಾರೆ. ಕೆಲವರು ಎಲೆಮರೆಯ ಕಾಯಿಯಾಗಿ ಉಳಿಯುತ್ತಾರೆ. ತುಂಬಾ ಎತ್ತರಕ್ಕೇರದಿದ್ದರೂ ತನಗೆ ಬಂದ ಪಾತ್ರವನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ತನ್ನ ಬೌದ್ಧಿಕ ಮಿತಿಯೊಳಗೆ ಆ ಪಾತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ಕಲಾವಿದನು ನೀಡಬಲ್ಲ. ಯಾವ ಪಾತ್ರ ಎನ್ನುವುದು ಮುಖ್ಯವಲ್ಲ ತಾನೆ? ಪಾತ್ರವನ್ನು ಹೇಗೆ ನಿರ್ವಹಿಸಿದ, ಎಷ್ಟು ಚೆನ್ನಾಗಿ ನಿರ್ವಹಿಸಿದ ಎಂಬುದು ನಿರ್ಣಯಕ್ಕಿರುವ ಮಾನದಂಡವಲ್ಲವೇ.
ಕಲಾವಿದರೆಲ್ಲರೂ ಕಲಾಮಾತೆಯ ಸುಪುತ್ರರು. ಕಲಾಸೇವೆಯನ್ನು ಮಾಡುವವರು. ಪ್ರಾಮಾಣಿಕವಾಗಿ ದುಡಿದಾಗ ಆ ಕಲಾವಿದನು ಖಂಡಿತಾ ಗೌರವಿಸಲ್ಪಡುತ್ತಾನೆ. ಪ್ರಚಾರವನ್ನು ಬಯಸದೆ ಮಾಧ್ಯಮಗಳಿಂದ ದೂರ ಉಳಿದು ಪ್ರಾಮಾಣಿಕ ವಾಗಿ ಕಲಾಕೈಂಕರ್ಯವನ್ನು ನಡೆಸುವ ಕಲಾವಿದರನೇಕರಿದ್ದಾರೆ. ಅಂತಹವರಲ್ಲೊಬ್ಬರು ಬಾಲಕೃಷ್ಣ ಶೆಟ್ಟಿ ತಾರಿಯಡ್ಕ. ಪ್ರಸ್ತುತ ಕಟೀಲು ಮೇಳದ ಕಲಾವಿದ.

ಬಾಲಕೃಷ್ಣ ಶೆಟ್ಟಿ ಇವರು ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ತಾರಿಯಡ್ಕ ಎಂಬಲ್ಲಿ ಕೊರಗಪ್ಪ ಶೆಟ್ಟಿ ಮತ್ತು ಮುತ್ತಕ್ಕ ದಂಪತಿಗಳಿಗೆ ಮಗನಾಗಿ 01-09-1963ರಲ್ಲಿ ಜನಿಸಿದರು. ಇವರದು ಬಡ ಕೃಷಿ ಕುಟುಂಬ. ಬಾಲಕೃಷ್ಣ ಶೆಟ್ಟರು ಕೊಡುಂಗಾಯಿ ಶಾಲೆಯಲ್ಲಿ 4ನೇ ತರಗತಿ ವರೇಗೆ ಓದಿದರು. ಬಡತನದಿಂದಾಗಿಯೆ ಶಾಲೆ ಬಿಡಬೇಕಾಯಿತು. ಓದನ್ನು ನಿಲ್ಲಿಸಿ ತಂದೆಗೆ ಕೃಷಿ ಕಾರ್ಯಗಳಲ್ಲಿ ಸಹಕರಿಸಿದರು. ಬಾಲಕೃಷ್ಣ ಶೆಟ್ಟರಿಗೆ ಯಕ್ಷಗಾನವೆಂದರೆ ಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಬಲು ಇಷ್ಟ. ವಿಟ್ಲ, ಮಂಚಿ ಪರಿಸರದಲ್ಲಿ ನಡೆಯುತ್ತಿದ್ದ ಪ್ರದರ್ಶನಗಳನ್ನು ನೋಡುತ್ತಿದ್ದರು. ತಾಳಮದ್ದಳೆಗೂ ಹೋಗುತ್ತಿದ್ದರಂತೆ. ಸಹಜವಾಗಿ ಕಲಾವಿದನಾಗಬೇಕೆಂಬ ಆಸೆ ಮೂಡಿತು. ನಾಟ್ಯ ಕಲಿಯಬೇಕೆಂಬ ತುಡಿತವೂ ಹೆಚ್ಚಿತು.

1981ನೇ ಇಸವಿ ಧರ್ಮಸ್ಥಳ ಲಲಿತಕಲಾ ಕೇಂದ್ರಕ್ಕೆ ತೆರಳಿ ಕರ್ಗಲ್ಲು ವಿಶ್ವೇಶ್ವರ ಭಟ್ಟರಿಂದ ನಾಟ್ಯ ಕಲಿತರು. ಆಗ ಹಿಮ್ಮೇಳಕ್ಕೆ ಗುರುಗಳಾಗಿದ್ದವರು ನೆಡ್ಲೆ ನರಸಿಂಹ ಭಟ್ಟರು. ಕಟೀಲು ಮೇಳ 2 ಇದ್ದ ಸಂದರ್ಭ. 2ನೇ ಮೇಳದಲ್ಲಿ 1 ವರ್ಷ ಕಲಾವಿದನಾಗಿಯೂ ಚೌಕಿಸಹಾಯಕನಾಗಿಯೂ ಕೆಲಸ ಮಾಡಿದರು. ಮುಂದಿನ ವರ್ಷ 3ನೇ ಮೇಳ ಪ್ರಾರಂಭವಾದಾಗ ವೇಷಧಾರಿಯಾಗಿ ಸೇರಿಕೊಂಡರು. ಆಗ ಭಾಗವತರಾಗಿದ್ದವರು ಸರಪಾಡಿ ಶ್ರೀ ಶಂಕರನಾರಾಯಣ ಕಾರಂತರು. ಗೇರುಕಟ್ಟೆ, ಗುಡ್ಡಪ್ಪ ಗೌಡ, ಸಂಜೀವ ಚೌಟರು, ಪೇಜಾವರ ಸತ್ಯಾನಂದ ರಾವ್, ಕೃಷ್ಣಮೂಲ್ಯ, ಉಮೇಶ್ ಹೆಬ್ಬಾರ್, ನಾರಾಯಣ ಮಣಿಯಾಣಿ, ಕುತ್ಯಾಳ ಬಾಬು ರೈಗಳ ಒಡನಾಟ ಇವರಿಗೆ ಸಿಕ್ಕಿತು.

3ನೇ ಮೇಳದಲ್ಲಿ 1 ವರ್ಷ ತಿರುಗಾಟ ನಡೆಸಿ ನಂತರ 9 ವರ್ಷ 1ನೇ ಮೇಳದಲ್ಲಿ ಕಲಾಸೇವೆಯನ್ನು ಮಾಡಿದರು. ಭಾಗವತರಾಗಿದ್ದವರು ಇರಾ ಗೋಪಾಲಕೃಷ್ಣ ಭಾಗವತರು. 1ನೇ ಮೇಳದಲ್ಲಿ ಕೊರಗಪ್ಪ ನಾಯ್ಕ ಕಾಟುಕುಕ್ಕೆ, ಕುಂಞಣ್ಣ ಶೆಟ್ಟಿ, ಸಂಪಾಜೆ ಶೀನಪ್ಪ ರೈ, ಕುಷ್ಠ ಗಾಣಿಗ, ಸುಣ್ಣಂಬಳ, ಬೆಳ್ಳಾರೆ ಮಂಜುನಾಥ ಭಟ್, ಗುಂಡಿಮಜಲು, ಕೇಶವ ಶೆಟ್ಟಿಗಾರ್, ಮುಚ್ಚೂರು ಉಮೇಶ ಶೆಟ್ರು ಮೊದಲಾದವರೊಂದಿಗೆ ತಿರುಗಾಟ ನಡೆಸಿದ ಶ್ರೀ ಬಾಲಕೃಷ್ಣ ಶೆಟ್ರು ಕಳೆದ 25 ವರುಷಗಳಿಂದ ಕಟೀಲು 4ನೇ ಮೇಳದಲ್ಲಿ ಕಲಾಮಾತೆಯ ಸೇವೆಯನ್ನು ಮಾಡುತ್ತಿದ್ದಾರೆ.

ಸದ್ರಿ ಮೇಳದಲ್ಲಿ ಪೂಂಜರು, ಕುಬಣೂರು, ಜೋಗಿ, ಶೀನಪ್ಪ ರೈ, ತೊಡಿಕಾನ, ಸುಬ್ರಾಯ ಹೊಳ್ಳರು, ವಿಷ್ಣುಶರ್ಮರು, ಕಾವು ಗಿರೀಶ, ಪೆರುವಾಯಿ, ಪೆರ್ಮುದೆ, ಉಮಾ ಮಹೇಶ್ವರ ಮೊದಲಾದವರೊಂದಿಗೆ ಕೊಡುಂಗಾಯಿ ಬಾಲಕೃಷ್ಣ ಶೆಟ್ಟರು ಕಲಾವಿದರಾಗಿ ಎಲ್ಲರ ಪ್ರೀತಿಗೆ ಪಾತ್ರರಾದರು. ಕೋಡಂಗಿ, ಬಾಲಗೋಪಾಲರು, ಮುಖ್ಯ ಸ್ತ್ರೀವೇಷ, ಪೀಠಿಕಾ ಸ್ತ್ರೀವೇಷಗಳನ್ನು (ಪೂರ್ವರಂಗ) ನಿರ್ವಹಿಸುತ್ತಾ ಹಂತ ಹಂತವಾಗಿ ಬೆಳೆದು ಕಲಾವಿದರಾದರು.

ಪುರಾಣಪ್ರಸಂಗಗಳ ಮಾಹಿತಿ ಇವರಿಗೆ ಅದ್ಭುತವಾದುದು. ಪ್ರಸಂಗ ನಡೆಗಳ ಬಗ್ಗೆ ಉತ್ತಮ ಮಾಹಿತಿಯಿರುವ ಅನುಭವೀ ಕಲಾವಿದರಿವರು. ಸ್ತ್ರೀವೇಷ, ಪುಂಡುವೇಷಗಳನ್ನು ನಿರ್ವಹಿಸುತ್ತಿದ್ದ ಇವರು ಈಗ ಕಿರೀಟ ವೇಷಧಾರಿ. ತನಗೆ ಬಂದ ಪಾತ್ರಗಳನ್ನು ನಿರ್ವಂಚನೆಯಿಂದ ನಿರ್ವಹಿಸುವ ಪ್ರಾಮಾಣಿಕ ಕಲಾವಿದರು. ಪ್ರಚಾರಪ್ರಿಯರಲ್ಲ. ತೆರೆದುಕೊಳ್ಳುವ ಸ್ವಭಾವ ಅಲ್ಲ. ಯಾವಾಗಲೂ ಮುಚ್ಚಿಕೊಳ್ಳುವ ಸ್ವಭಾವ. ತಾನಾಯಿತು ತನ್ನ ಕೆಲಸವಾಯಿತು ಎಂದು ವ್ಯವಹರಿಸುವವರು.

ಪತ್ನಿ ಶ್ರೇಯಾ, 1993ರಲ್ಲಿ ವಿವಾಹವಾದ ಬಾಲಕೃಷ್ಣ ಶೆಟ್ಟರು ಇಬ್ಬರು ಮಕ್ಕಳ ತಂದೆ. ಪುತ್ರಿ ಮಶೀಶಾ ಶೆಟ್ಟಿ ಪದವೀಧರೆ, ವಿವಾಹಿತೆ. ಪುತ್ರ ಯತಿನ್ ಪದವೀಧರ. ವಾಮಂಜೂರು ಲಿಂಗಮಾರು ಶಿವಣ್ಣ ಶೆಟ್ರ 50ನೇ ವರುಷದ ಬಯಲಾಟದ ಸಂದರ್ಭ ಮತ್ತು ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಸಂದರ್ಭ ಶ್ರೀ ಕಟೀಲು ಪದ್ಮನಾಭ ಇವರಿಂದ ಸನ್ಮಾನಿತರಾದ ಶ್ರೀ ಬಾಲಕೃಷ್ಣ ಶೆಟ್ಟಿ ಕೊಡುಂಗಾಯಿ ಇವರಿಗೆ ಕಲಾಮಾತೆಯ ಅನುಗ್ರಹ ಸದಾ ಇರಲೆಂದು ಕಲಾಭಿಮಾನಿಗಳೆಲ್ಲರ ಪರವಾಗಿ ಹಾರೈಕೆ.

ಲೇಖಕ : ರವಿಶಂಕರ್ ವಳಕ್ಕುಂಜ

ಮೇಳಗಳ ಇಂದಿನ (25.01.2021) ಯಕ್ಷಗಾನ ಪ್ರದರ್ಶನಗಳ ವಿವರ

ಮೇಳಗಳ ಇಂದಿನ (25.01.2021) ಯಕ್ಷಗಾನ ಪ್ರದರ್ಶನಗಳ ವಿವರ
ಮೇಳಸ್ಥಳ/ಪ್ರಸಂಗ 
ಶ್ರೀ ಧರ್ಮಸ್ಥಳ ಮೇಳಕುಂಜ್ಞಾಡಿ ಶ್ರೀ ಯಕ್ಷೇಶ್ವರಿ ದೇವಸ್ಥಾನದ ಸಮೀಪ – ಕನಕಾಂಗಿ ಕಲ್ಯಾಣ, ಅಗ್ರಪೂಜೆ
ಕಟೀಲು ಒಂದನೇ ಮೇಳಮಂಚಿ, ಕುಕ್ಕಾಜೆ, ಬಂಟ್ವಾಳ 
ಕಟೀಲು ಎರಡನೇ ಮೇಳ ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರ 
ಕಟೀಲು ಮೂರನೇ ಮೇಳತೋಕೂರು, ರಾಂಪಾಲ್ MSEZ ಕಾಲನಿ 
ಕಟೀಲು ನಾಲ್ಕನೇ ಮೇಳ ಕಿಲೆಂಜೂರು ನಡುಗೋಡು, ವಯಾ ಕಿನ್ನಿಗೋಳಿ 
ಕಟೀಲು ಐದನೇ ಮೇಳ ಕಟೀಲು ಕ್ಷೇತ್ರದಲ್ಲಿ 
ಕಟೀಲು ಆರನೇ ಮೇಳಕರಂಬಾರುಗುತ್ತು, ಮಳವೂರು, ಮಂಗಳೂರು 

ಮಂದಾರ್ತಿ ಒಂದನೇ ಮೇಳ ಬರ್ಗಲ್ ಹ್ಯಾಗುಳಿ ದೇವಸ್ಥಾನ, ಶಿರೂರು, ಬೈಂದೂರು 
ಮಂದಾರ್ತಿ ಎರಡನೇ ಮೇಳ ಶಾಡಿಗುಂಡಿ, ಹುಯ್ಯಾರು 
ಮಂದಾರ್ತಿ ಮೂರನೇ ಮೇಳ ಬೀಸಿನಗದ್ದೆ, ಅಕ್ಲಾಪುರ, ತೀರ್ಥಳ್ಳಿ – ಕೂಡಾಟ 
ಮಂದಾರ್ತಿ ನಾಲ್ಕನೇ ಮೇಳ ಕಂಚಾರು, ಅಂಪಾರು 
ಮಂದಾರ್ತಿ ಐದನೇ ಮೇಳ ಬೀಸಿನಗದ್ದೆ, ಅಕ್ಲಾಪುರ, ತೀರ್ಥಳ್ಳಿ – ಕೂಡಾಟ   
ಶ್ರೀ ಹನುಮಗಿರಿ ಮೇಳ ಉಡುಪಿ ಪುತ್ತೂರು ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರ – ವೀರ ಮಾರುತಿ 
ಶ್ರೀ ಸಾಲಿಗ್ರಾಮ ಮೇಳಬೆಳ್ವೆ – ಚಂದ್ರಮುಖಿ ಸೂರ್ಯಸಖಿ  
ಶ್ರೀ ಪೆರ್ಡೂರು ಮೇಳಗರ್ತಿಕೆರೆ – ಅಹಂ ಬ್ರಹ್ಮಾಸ್ಮಿ 

ಶ್ರೀ ಸುಂಕದಕಟ್ಟೆ ಮೇಳ ಬಟ್ಟಾಜೆ – ಕೋರ್ದಬ್ಬು ತನ್ನಿಮಾನಿಗ 
ಶ್ರೀ ಮಾರಣಕಟ್ಟೆ ಮೇಳ ‘ಎ’ಶ್ರೀ ಕ್ಷೇತ್ರದಲ್ಲಿ 
ಶ್ರೀ ಮಾರಣಕಟ್ಟೆ ಮೇಳ ‘ಬಿ’ಶ್ರೀ ಕ್ಷೇತ್ರದಲ್ಲಿ 
ಶ್ರೀ ಮಾರಣಕಟ್ಟೆ ಮೇಳ ‘ಸಿ’ವೇದಾವತಿ ನಿಲಯ, ತೆಂಕಬೈಲು, ನಾಡ 
ಶ್ರೀ ಪಾವಂಜೆ ಮೇಳ ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನ, ಆಲಂಗಾರು – ಶ್ರೀ ವಿಷ್ಣು ಮಹಾತ್ಮೆ (ಗರುಡೋದ್ಭವ)  
ಶ್ರೀ ಹಟ್ಟಿಯಂಗಡಿ ಮೇಳಮಲಯಾಳಿ ಬೊಬ್ಬರ್ಯ ಕೆಂಪಣ್ಣ ಹೈಗೂಳಿ ಪರಿವಾರ ದೇವಸ್ಥಾನ ಹೆರಗೋಡು 
ಕಮಲಶಿಲೆ ಮೇಳ ‘ಎ’ಶ್ರೀ ಕ್ಷೇತ್ರದಲ್ಲಿ – ಕೂಡಾಟ, ದೇವಿ ಮಹಾತ್ಮೆ 
ಕಮಲಶಿಲೆ ಮೇಳ ‘ಬಿ’ಶ್ರೀ ಕ್ಷೇತ್ರದಲ್ಲಿ – ಕೂಡಾಟ, ದೇವಿ ಮಹಾತ್ಮೆ 

ಶ್ರೀ ಬಪ್ಪನಾಡು ಮೇಳಶ್ರೀ ಮಹಾತಾಯಿ ಭಜನಾ ಮಂಡಳಿ, ಕೆದಿಮೇಲು – ಬಂಗಾರ್ ಬಾಲೆ 
ಶ್ರೀ ಸಸಿಹಿತ್ಲು ಭಗವತೀ ಮೇಳ ಉಪ್ಪೂರು ಸಾಲ್ಮರ ವಠಾರ – ನಾಗ ತಂಬಿಲ 
ಶ್ರೀ ಅಮೃತೇಶ್ವರೀ ಮೇಳಮೂಡುಗಿಳಿಯಾರು 
ಶ್ರೀ ಬೋಳಂಬಳ್ಳಿ ಮೇಳ ವಂಡಾರು ಮಾವಿನಕಟ್ಟೆ 
ಶ್ರೀ ಸೌಕೂರು ಮೇಳಗುಲ್ವಾಡಿ – ಶ್ರೀ ದೇವಿ ಮಹಾತ್ಮೆ 
ಶ್ರೀ ಹಾಲಾಡಿ ಮೇಳತೌಡಗಲ್ಲು, ಕಲ್ಗದ್ದೆ, ಶಂಕರನಾರಾಯಣ – ಶ್ರೀ ಹಾಲಾಡಿ ಕ್ಷೇತ್ರ ಮಹಾತ್ಮೆ
ಶ್ರೀ ಬೆಂಕಿನಾಥೇಶ್ವರ ಮೇಳ  ಬಾಳಿಕೆರೆ ಹೊಸಿ ಹೈಗುಳಿ ಚಿಕ್ಕು ಸಹಪರಿವಾರ ದೇವಸ್ಥಾನ (ದೇವಲ್ಕುಂದ ಗ್ರಾಮ)  – ಶ್ರೀ ದೇವಿ ರಕ್ತೇಶ್ವರಿ ಮಹಾತ್ಮೆ 
ಶ್ರೀ ಮಡಾಮಕ್ಕಿ ಮೇಳಬಿದ್ಕಲ್ ಕಟ್ಟೆ ಮಣಗೇರಿ ಶಿಕ್ಕು ದೇವಸ್ಥಾನ – ಶ್ರೀ ಮಾಂಕಾಳಿ ಮಹಾತ್ಮೆ 

ಶ್ರೀ ಕ್ಷೇತ್ರ ಗೋಳಿಗರಡಿ ಮೇಳಉದ್ಯಾವರ ಸಂಪಿಗೆನಗರ ಆರೂರು ತೋಟ  
ಶ್ರೀ ಉಳ್ಳಾಲ ಚೀರುಂಭ ಭಗವತೀ ಮೇಳ ಶ್ರೀ ಆದಿನಾಥೇಶ್ವರ ದೇವಸ್ಥಾನದ ವಠಾರ – ಕಾರಿಂಜ ಕಾಂಜವೆ 
ಶ್ರೀ ಹಿರಿಯಡಕ ಮೇಳಹಾಲಕ್ಕಿ ಶಾಲಾ ವಠಾರ – ಮಾಯೊದ ಅಜ್ಜೆ 
ಶ್ರೀ ಶನೀಶ್ವರ ಮೇಳ ಶ್ರೀ ಈಶ್ವರ ದೇವಸ್ಥಾನ ಬೆಲ್ಕಲ್ 
ಶ್ರೀ ಸಿಗಂದೂರು ಮೇಳಕಾಲ್ತೋಡು, ಕೇರಿಜೆಡ್ಡು ಹಾಯ್ಗುಳಿ ದೇವಸ್ಥಾನ
ಶ್ರೀ ನೀಲಾವರ ಮೇಳ ಆರೂರು ಕ್ರಾಸ್

ಕಲಾವಿದರಿಗೆ, ಅಭ್ಯಾಸಿಗಳಿಗೆ ಸಂಪನ್ಮೂಲ ವ್ಯಕ್ತಿ – ಪ್ರಸಿದ್ಧ ಕಲಾವಿದ ಬೆಳ್ಳಾರೆ ಮಂಜುನಾಥ ಭಟ್ 

ಕೆ. ಜಿ. ಮಂಜುನಾಥ ಭಟ್ಟರು (ಬೆಳ್ಳಾರೆ ಮಂಜುನಾಥ ಭಟ್) ಪ್ರಸ್ತುತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಇದಿರು ವೇಷಧಾರಿ. ಕಲಾವಿದನಾಗಿ 44 ತಿರುಗಾಟಗಳನ್ನು ನಡೆಸಿದವರು. ಸುಳ್ಯ ತಾಲೂಕು ಬೆಳ್ಳಾರೆಯಲ್ಲಿ ಕುಂಞಹಿತ್ತಿಲು ಗೋವಿಂದ ಭಟ್ ಮತ್ತು ಸರಸ್ವತಿ ಅಮ್ಮ ದಂಪತಿಗಳಿಗೆ ಮಗನಾಗಿ 01-04-1960ರಲ್ಲಿ ಬೆಳ್ಳಾರೆ ಮಂಜುನಾಥ ಭಟ್ಟರು ಜನಿಸಿದರು. ಇವರದು ಪುರೋಹಿತ ಮನೆತನ. 8ನೇ ತರಗತಿಯ ವರೇಗೆ ಓದಿದ ಇವರು ಯಕ್ಷಗಾನದತ್ತ ಆಕರ್ಷಿತರಾದರು.   

ಪ್ರಸಿದ್ಧ ಕಲಾವಿದರಾದ ಮಾಣಂಗಾಯಿ ಕೃಷ್ಣ ಭಟ್ಟರು ಇವರ ಬಂಧುಗಳೇ ಆಗಿದ್ದರು (ಅಜ್ಜ). ತಂದೆಯವರೂ ಯಕ್ಷಗಾನ ಕಲಾವಿದರಾಗಿದ್ದರು. ಅಣ್ಣ ಬೆಳ್ಳಾರೆ ಸೂರ್ಯನಾರಾಯಣ ಭಟ್ ಉತ್ತಮ ಅರ್ಥಧಾರಿಗಳೂ, ಸಂಘಟಕರೂ, ಶ್ರೇಷ್ಠ ಲೇಖಕರೂ ಆಗಿರುತ್ತಾರೆ. ಬೆಳ್ಳಾರೆಯ ಮನೆಯಲ್ಲಿ ವಾರಕ್ಕೊಂದು ತಾಳಮದ್ದಳೆ ನಡೆಯುತ್ತಿತ್ತು.  ಬೆಳ್ಳಾರೆ ಆಸುಪಾಸಿನ ಮನೆಗಳಲ್ಲಿ ತಾಳಮದ್ದಳೆ ಕಾರ್ಯಕ್ರಮಗಳು ಆಗಾಗ ನಡೆಯುತ್ತಿತ್ತು. ಸಹಜವಾಗಿ ಮಂಜುನಾಥ ಭಟ್ಟರಿಗೆ ಕಲಾವಿದನಾಗಬೇಕೆಂಬ ಬಯಕೆ ಮೂಡಿತು. ತನ್ನ 14ನೇ ವಯಸ್ಸಿನಲ್ಲಿ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದರು. ಕಲಾವಿದನಾಗಲು ಪ್ರೇರಣೆ ಸಿಕ್ಕಿದ್ದು ಹಿರಿಯರಿಂದ.

1974-75ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಲಿತ ಕಲಾ ತರಬೇತಿ ಕೇಂದ್ರದಲ್ಲಿ ಶ್ರೀ ಪಡ್ರೆ ಚಂದು ಅವರ ಶಿಷ್ಯನಾಗಿ ನಾಟ್ಯವನ್ನು ಕಲಿತರು.  ಮೊದಲು ಗೆಜ್ಜೆ ಕಟ್ಟಿ ವೇಷ ಮಾಡಿದ್ದು ಅಜ್ಜ ಮಾಣಂಗಾಯಿ ಕೃಷ್ಣ ಭಟ್ಟರ ನೇತೃತ್ವದಲ್ಲಿದ್ದ  ಕೂಡ್ಲು ಶ್ರೀ ಗೋಪಾಲಕೃಷ್ಣ ದೇವರ ಮೇಳದಲ್ಲಿ (ಕುತ್ಯಾಳ). ಇದು ನನ್ನ ಸುಯೋಗ ಎಂದು ಬೆಳ್ಳಾರೆ ಮಂಜುನಾಥ ಭಟ್ಟರು ಹೇಳುತ್ತಾ ಆ ದಿನವನ್ನು ಇಂದಿಗೂ ನೆನಪಿಸುತ್ತಾರೆ. ನಂತರ ತಿರುಗಾಟ ಕಟೀಲು ಮೇಳದಲ್ಲಿ. ಆಸ್ರಣ್ಣ ಬಂಧುಗಳ ಆಶೀರ್ವಾದ, ಕಲ್ಲಾಡಿ ವಿಠಲ ಶೆಟ್ಟರು, ಪ್ರಸ್ತುತ ಸಂಚಾಲಕರಾದ ಕಲ್ಲಾಡಿ ದೇವೀಪ್ರಸಾದ ಶೆಟ್ಟರ ಪ್ರೋತ್ಸಾಹ, ಸಹಕಲಾವಿದರ, ಕಲಾಭಿಮಾನಿ ಗಳ ಪ್ರೋತ್ಸಾಹ, ಎಲ್ಲಕ್ಕಿಂತ ಹೆಚ್ಚು ಕಲಾಮಾತೆಯ ಅನುಗ್ರಹದಿಂದ ನಿರಂತರ ಕಟೀಲು ಮೇಳದಲ್ಲಿ ತಿರುಗಾಟ ನಡೆಸುತ್ತಿದ್ದೇನೆ ಎಂಬುದು ಶ್ರೀ ಭಟ್ಟರ ಅಭಿಪ್ರಾಯ.

ಚಿತ್ರಕೃಪೆ: ಕೋಂಗೋಟ್ ರಾಧಾಕೃಷ್ಣ ಭಟ್ 

ಪೂರ್ವರಂಗದಲ್ಲಿ ಬಾಲಗೋಪಾಲರಾಗಿ, ಸ್ತ್ರೀವೇಷಧಾರಿಯಾಗಿ, ಪೀಠಿಕಾ ಸ್ತ್ರೀವೇಷ… ಹೀಗೆ ಎಲ್ಲಾ ವೇಷಗಳನ್ನೂ ಮಾಡಿರುತ್ತಾರೆ. ಪೂರ್ವರಂಗದ ಎಲ್ಲಾ ಪ್ರದರ್ಶನಗಳನ್ನೂ ಹೀಗೆಯೇ ಎಂದು ಹೇಳಬಲ್ಲ, ಮಾಡಬಲ್ಲ ಸಾಮರ್ಥ್ಯ ಇವರಿಗಿದೆ. ಹಂತ ಹಂತವಾಗಿ ಬೆಳೆಯುತ್ತಾ ಬಂದ ಬೆಳ್ಳಾರೆ ಮಂಜುನಾಥ ಭಟ್ಟರು ಈಗ ಮೇಳದ ಇದಿರು ವೇಷಧಾರಿ. ಎಲ್ಲಾ ವೇಷಗಳ ಮುಖವರ್ಣಿಕೆ ಹೀಗೆಯೇ ಇರಬೇಕು ಎಂದು ನಿಖರವಾಗಿ ಹೇಳಬಲ್ಲರು. ಅಲ್ಲದೆ ವೇಗವಾಗಿ ಮೇಕಪ್ ಮಾಡಿ ಗೆಜ್ಜೆ ಕಟ್ಟಿ ಸಿದ್ಧವಾಗುವ ಕಲೆ ಇವರಿಗೆ ಕರಗತವಾಗಿದೆ. ಪುರಾಣಜ್ಞಾನ, ಪ್ರಸಂಗಗಳ ನಡೆ ಬಗ್ಗೆ ಚೆನ್ನಾಗಿ ತಿಳಿದಿರುವ ಕಾರಣವೇ ಇವರೊಬ್ಬ ಸಂಪನ್ಮೂಲ ವ್ಯಕ್ತಿ.

ಮುದ್ದಿನ ಮಗಳು ಶ್ರೀಮತಿ ಸಾಯಿಸುಮಾ ಜೊತೆಯಲ್ಲಿ 

ಚೌಕಿಯಲ್ಲಿ ಇವರಿದ್ದರೆ ಎಲ್ಲರಿಗೂ ಸಂತಸ. ಇವರಿಂದ ಸಲಹೆಗಳನ್ನು ಪಡೆದುಕೊಳ್ಳುತ್ತಾರೆ. ಅನನುಭವಿಗಳಿಗೆ ಅರ್ಥವಾಗುವಂತೆ ಚೆನ್ನಾಗಿ ಹೇಳಿಕೊಡಬಲ್ಲರು. ಹಾಗಾಗಿಯೇ ಬೆಳ್ಳಾರೆ ಮಂಜುನಾಥ ಭಟ್ಟರು ಮೇಳಕ್ಕೆ ಸಹಕಲಾವಿದರಿಗೆ ಆಸ್ತಿಯಾಗಿದ್ದಾರೆ. ಜಾಂಬವ, ವಾಲಿ, ಹಿರಣ್ಯಕಶ್ಯಪ, ಕಾರ್ತವೀರ್ಯ, ಕರ್ಣ, ರಕ್ತಬೀಜ, ಮಧು, ಕೈಟಭ, ದೇವೇಂದ್ರ, ಅರ್ಜುನ, ಅತಿಕಾಯ, ಭೀಷ್ಮ, ಕೌರವ ಮೊದಲಾದ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ. 

ಸನ್ಮಾನಿತರಾದ ಕ್ಷಣ

1992ರಲ್ಲಿ ಅದಿತಿಯವರನ್ನು ವಿವಾಹವಾದರು. ಇವರು ಪ್ರಸಿದ್ಧ ಕಲಾವಿದ ನಿಡ್ಲೆ ಗೋವಿಂದ ಭಟ್ಟರ ಸಹೋದರಿ. ಬೆಳ್ಳಾರೆ ಮಂಜುನಾಥ ಭಟ್ ದಂಪತಿಗಳಿಗೆ ಮೂವರು ಮಕ್ಕಳು. (ಒಂದು ಹೆಣ್ಣು ಮತ್ತು ಇಬ್ಬರು ಪುತ್ರರು). ಪುತ್ರಿ ಸಾಯಿಸುಮಾ ಸ್ನಾತಕೋತ್ತರ ಪದವೀಧರೆ. ಯಕ್ಷಗಾನ ಕಲಾವಿದೆ. ವಿವಾಹಿತೆ. ರಾಮಕುಂಜ ಕಾಲೇಜಿನಲ್ಲಿ ಉಪನ್ಯಾಸಕಿ. ಹಿರಿಯ ಪುತ್ರ ಶ್ರೀಹರಿಶರ್ಮ ಪದವೀಧರ. ಕಿರಿಯ ಪುತ್ರ ಶ್ರೀರಾಮ ಶರ್ಮ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿ. ನಿಡ್ಲೆ ನರಸಿಂಹ ಭಟ್ ಮತ್ತು ಇರಾ ಗೋಪಾಲಕೃಷ್ಣ ಭಾಗವತರು ನನ್ನನ್ನು ತಿದ್ದಿ ತೀಡಿದರು ಎನ್ನುವ ಬೆಳ್ಳಾರೆ ಮಂಜುನಾಥ ಭಟ್ಟರು ಕದ್ರಿ ವಿಷ್ಣು ಸ್ಮಾರಕ ಎಳೆಯರ ಬಳಗ ಕದ್ರಿ, ಚೊಕ್ಕಾಡಿ, ಶೇಣಿ, ಮಲ್ಲೂರು, ಕುಪ್ಪೆಪದವು, ತಲಕಳ, ಬಜಪೆ, ಬಂಟ್ವಾಳ ಮೊದಲಾದ ಕಡೆಗಳಲ್ಲಿ ನಾಟ್ಯ ತರಬೇತಿಯನ್ನೂ ನೀಡಿರುತ್ತಾರೆ. ಬೆಳ್ಳಾರೆ ಮಂಜುನಾಥ ಭಟ್ಟರು ಅನೇಕ ಸಂಘ-ಸಂಸ್ಥೆಗಳಿಂದ ಸನ್ಮಾನಿತರಾಗಿದ್ದಾರೆ. 

ಲೇಖಕ: ರವಿಶಂಕರ್ ವಳಕ್ಕುಂಜ