ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಧರ್ಮದ ಪಥದಲ್ಲಿ ನಡೆಯಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಿರಿಯರ ಸೇವಾ ಪ್ರತಿಷ್ಠಾನ ಈಗಾಗಲೇ ಕೈಗೊಂಡಿರುವ ಕಾರ್ಯಕ್ರಮಗಳು ಸಾಮಾಜಿಕ ಪರಿವರ್ತನೆಗೆ ಕೊಡುಗೆಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಕಾಸರಗೋಡು ಜಿಲ್ಲಾ ಹಿರಿಯರ ಸಮಾವೇಶವನ್ನು ಏರ್ಪಡಿಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪ್ರಯತ್ನಿಸುವುದಾಗಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ತಿಳಿಸಿದರು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಎಡನೀರು ಪ್ರೌಢಶಾಲಾ ಸಭಾಂಗಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಯಾವುದೇ ಉತ್ತಮ ವಿಚಾರ ಮೂಡುವುದು ಒಬ್ಬನ ಮನಸ್ಸಿನಲ್ಲಿ. ಸಜ್ಜನರ ಸಂಘಟನೆಯ ಕೆಲಸವನ್ನು ಹಿರಿಯರ ಸೇವಾ ಪ್ರತಿಷ್ಠಾನ ಮಾಡುತ್ತಿದ್ದು ಶಂಕರಾಚಾರ್ಯ ರಾಮಾನುಜಚಾರ್ಯ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರು ಅತ್ಯಂತ ಕಿರಿವಯಸ್ಸಿನಲ್ಲಿ ಅಪೂರ್ವ ಸಾಧನೆ ಮಾಡಿದವರಾಗಿದ್ದು ಅವರ ಕಾರ್ಯಗಳಿಂದ ನಾವು ಪ್ರೇರಣೆಯನ್ನು ಪಡೆಯಬೇಕೆಂದು ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ. ಬಾಲಕೃಷ್ಣ ಭಟ್ ಸುರತ್ಕಲ್ ತಿಳಿಸಿದರು .
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ.ಎ.ವಿ ನಾರಾಯಣ ಮಾತನಾಡಿ ಹಿರಿಯರ ಸಂಘಟನೆಯು ಭಾರತೀಯ ಸಂಸ್ಕೃತಿ ಮತ್ತು ಕೌಟುಂಬಿಕ ಮೌಲ್ಯಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.
ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ, ಮಂಗಳೂರು ,ಭರತ್ ಕೆ ಮಂಗಳೂರು, ಶಿವಕುಮಾರ್, ಕೃಷ್ಣಶರ್ಮ ಅನಾರು, ಲೋಕೇಶ್ ಹೆಗ್ಡೆ ಪುತ್ತೂರು, ಚಂದ್ರಶೇಖರ ಆಳ್ವ ಪಡುಮಲೆ ಪ್ರಗತಿಯ ಮಾಹಿತಿಯನ್ನು ನೀಡಿದರು.
ಯುವ ಜನತೆಗೆ ಮಾರ್ಗದರ್ಶನ ನೀಡುವ ಸಂಸ್ಕಾರ ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆಯೆಂದು ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು.
ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ಯವರಿಗೆ ಮಂಗಳಾದೇವಿ ಘಟಕದ ಉಪಾಧ್ಯಕ್ಷ ಮತ್ತು ಭಜನಕಾರರಾದ ಭರತ್. ಕೆ ಅವರು ಹಸ್ತಾಕ್ಷರದಿಂದ ಬರೆದ 4000 ಕ್ಕಿಂತಲೂ ಹೆಚ್ಚು ಭಜನೆಗಳ ಸಂಗ್ರಹ ಪುಸ್ತಕವನ್ನು ಶ್ರಿ ಸ್ವಾಮೀಜಿಯವರ ಮೂಲಕ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಿಕೊಟ್ಟ ಪ್ರೊ. ಮಧೂರು ಮೋಹನ ಕಲ್ಲೂರಾಯ, ಡಾ. ವಾರಿಜಾ ನೀರ್ಬೈಲು ಮತ್ತು ಪುತ್ತೂರು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಹೆಗ್ಡೆಯವರನ್ನು ಸ್ವಾಮೀಜಿಯವರು ಗೌರವಿಸಿದರು.
ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿಷ್ಠಾನದ ಉದ್ದೇಶಗಳನ್ನು ಸಾಧಿಸಲು ಪದಾಧಿಕಾರಿಗಳು ಬದ್ಧತೆಯಿಂದ ಶ್ರಮಿಸಬೇಕೆಂದು ತಿಳಿಸಿದರು.
ಪ್ರೊ .ವೇದವ್ಯಾಸ ರಾಮಕುಂಜ ಪ್ರಾರ್ಥಿಸಿದರು. ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ ಕಲಾವಿದ ಗುಂಡ್ಯಡ್ಕ ಈಶ್ವರ ಭಟ್ ವಂದಿಸಿದರು. ವೆಂಕಟ್ ಭಟ್ ಎಡನೀರು ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು . ಡಾ. ಬಿ.ಎನ್. ಮಹಾಲಿಂಗ ಭಟ್ ಮತ್ತು ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ದಿನಾಂಕ 08-04-2023ನೇ ಶನಿವಾರದಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ತಿಂಗಳ ತಾಳಮದ್ದಳೆ ‘ಸೀತಾಪಹಾರ – ವಾಲಿಮೋಕ್ಷ’ ರಾಮಣ್ಣ ಮಾಸ್ತರ್ ದೇಲಂಪಾಡಿ ಮತ್ತು ಮನೆಯವರಿಂದ ಸೇವಾರೂಪವಾಗಿ ಪ್ರಸ್ತುತಗೊಂಡಿತು.
ಶ್ರೀ ಗೋಪಾಲಕೃಷ್ಣ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾಕಾರ್ಯಕ್ರಮವು ಸಂಘದ ಕಾರ್ಯದರ್ಶಿ ಹಿರಿಯ ಭಾಗವತ ಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ಮುಂದುವರೆಯಿತು.
ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು ಕುಮಾರಿ ರಚನ ಚಿದ್ಗಲ್ ತಮ್ಮ ಅಪೂರ್ವ ಕಂಠಸಿರಿಯಿಂದ ಹಾಡಿ ಜನಮೆಚ್ಚುಗೆ ಗಳಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಶ್ರೀಹರಿ ಆಲಂಕಾರು, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದ್ದರು.
ಪಾತ್ರಧಾರಿಗಳಾಗಿ ಡಾ| ರಮಾನಂದ ಬನಾರಿ ಮಂಜೇಶ್ವರ, ವೆಂಕಟರಾಮ ಭಟ್ಟ ಸುಳ್ಯ, ಬೆಳ್ಳಿಪ್ಪಾಡಿ ಸದಾಶಿವ ರೈ, ಯಂ.ರಮಾನಂದ ರೈ ದೇಲಂಪಾಡಿ, ರಾಮನಾಯ್ಕ ದೇಲಂಪಾಡಿ, ನಾರಾಯಣ ದೇಲಂಪಾಡಿ, ಪದ್ಮನಾಭ ಗೋಳಿತ್ತಡ್ಕ ಮತ್ತು ಡಿ. ರಾಮಣ್ಣ ಮಾಸ್ತರ್ ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.
ಕಾರ್ಯಕ್ರಮದ ಮೊದಲಿಗೆ ಲತಾ ಆಚಾರ್ಯ ಬನಾರಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದಕಿಶೋರ್ ಬನಾರಿ ಸ್ವಾಗತಿಸಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಧನ್ಯವಾದ ಸಮರ್ಪಿಸಿದರು.
ಖಾತೆದಾರರ 21 ಲಕ್ಷ ರೂ.ಗಳನ್ನು ಲಪಟಾಯಿಸಿದ ಮಹಿಳಾ ಪೋಸ್ಟ್ ಮಾಸ್ಟರ್ ಓರ್ವಳನ್ನು ಬಂಧಿಸಲಾಗಿದೆ.
ವಂಚಕಳು ತನ್ನ ಸ್ವಂತ ಕೈಬರಹದಲ್ಲಿ ಹೂಡಿಕೆದಾರರಿಗೆ ನಕಲಿ ಖಾತೆ ಸಂಖ್ಯೆಗಳನ್ನು ಬರೆದು ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ ಎಂದು ಖಾತೆದಾರರನ್ನು ದಾರಿ ತಪ್ಪಿಸುತ್ತಿದ್ದಳು ಎಂದು ತಿಳಿದುಬಂದಿದೆ.
ಆಲಪ್ಪುಳ: ಅಂಚೆ ಕಚೇರಿ ಖಾತೆಗೆ ಹಣ ಜಮಾ ಮಾಡದೆ 21 ಲಕ್ಷ ರೂಪಾಯಿ ವಂಚಿಸಿದ ಮಹಿಳೆ ಪೋಸ್ಟ್ ಮಾಸ್ಟರ್ ಬಂಧನ: ಮರಾರಿಕುಲಂ ಪೊಲೀಸರು ಅಮಿತಾ ನಾಥ್ (29) ಎಂಬಾಕೆಯನ್ನು ಮರಾರಿಕುಳಂ ಉತ್ತರ ಅಂಚೆ ಕಚೇರಿಯ ಬ್ರಾಂಚ್ ಪೋಸ್ಟ್ ಮಾಸ್ಟರ್ 15ನೇ ವಾರ್ಡ್ ಪಂಪುಂತಾರಾದಲ್ಲಿರುವ ಅವಳ ಮನೆಯಲ್ಲಿ ಬಂಧಿಸಿದ್ದಾರೆ.
ಒಂದು ಮತ್ತು ಐದು ವರ್ಷಗಳ ಅವಧಿಯ ವಿವಿಧ ಹೂಡಿಕೆ ಯೋಜನೆಗಳಲ್ಲಿ ಪಾವತಿಸಿದ ಮೊತ್ತದಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.
ಆಕೆಯು ತನ್ನ ಸ್ವಂತ ಕೈಬರಹದಲ್ಲಿ ಹೂಡಿಕೆದಾರರಿಗೆ ನಕಲಿ ಖಾತೆ ಸಂಖ್ಯೆಗಳನ್ನು ಬರೆದು ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಿ ಗ್ರಾಹಕರನ್ನು ದಾರಿ ತಪ್ಪಿಸುತ್ತಿದ್ದಳು.
ಅಮಿತಾ ನಾಥ್ ಅವರ ಮಾಸಿಕ ವೇತನ 20,000 ರೂ. ಆಗಿತ್ತು. ಆದರೂ ಲಪಟಾಯಿಸಿದ ಹಣವನ್ನು ತನ್ನ ದುಂದುವೆಚ್ಚಕ್ಕೆ ಬಳಕೆ ಮಾಡುತ್ತಿದ್ದಳು.
ಬ್ಯಾಂಕಿಂಗ್ ಕ್ಷೇತ್ರದ ಧುರೀಣ ಕೀರ್ತಿಶೇಷ ಮೂಲ್ಕಿ ಸುಂದರ್ ರಾಮ್ ಶೆಟ್ಟಿಯವರು ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾಗಿದ್ದ ಕಾಲಘಟ್ಟದಲ್ಲಿ ತುಳುನಾಡಿನ ವಿದ್ಯಾವಂತರನ್ನು ಕರೆ ಕರೆದು ಮನೆಗೊಬ್ಬರಂತೆ ಕೆಲಸ ನೀಡಿದವರು ಎಂದು ತುಂಗಾ ಸಮೂಹ ಹೋಟೆಲುಗಳ ಆಡಳಿತ ನಿರ್ದೇಶಕ ಶ್ರೀ ಸುಧಾಕರ್ ಹೆಗ್ಡೆಯವರು ನುಡಿದರು. ಅವರು ಎಪ್ರಿಲ್ 2ರಂದು ಮಲಾಡ್ ಪಶ್ಚಿಮದ ಹೋಟೆಲ್ ಸಾಯಿ ಪ್ಯಾಲೇಸ್ ಗ್ರ್ಯಾಂಡ್ ಇಲ್ಲಿ ನಡೆದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮುಂದುವರಿದು ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ವ್ಯಾಸಂಗಮಾಡಿದವರು ಇಂದು ದೇಶ ವಿದೇಶಗಳಲ್ಲಿ ದೊಡ್ಡ ದೊಡ್ಡ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹೆತ್ತು ಹೊತ್ತು ಸಾಕಿದ ತಂದೆ ತಾಯಿಗಳನ್ನು ಹಾಗೂ ನಮಗೆ ವಿದ್ಯೆ ನೀಡಿದ ಸಂಸ್ಥೆಗಳನ್ನು ಎಂದಿಗೂ ನಾವು ಮರೆಯಬಾರದು. ಉದಯ್ ಸುಂದರ್ ಶೆಟ್ಟಿಯವರ ದಕ್ಷ ಅಧ್ಯಕ್ಷತೆಯಲ್ಲಿ ಈ ಹಿರಿಯ ವಿದ್ಯಾರ್ಥಿಗಳ ಸಂಘವು ಬೆಳೆದು ಬಂದ ರೀತಿ ಮತ್ತು ತಾವು ಕಲಿತ ಕಾಲೇಜಿನ ಬಲವರ್ಧನೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು.
ಸಂಘದ ಸಲಹೆಗಾರ ನಡಿಬೆಟ್ಟು ಶ್ರೀ ನಿತ್ಯಾನಂದ ಹೆಗ್ಡೆಯವರು ಮಾತನಾಡಿ, ಸಂಘ ಸಂಸ್ಥೆಗಳ ಹುರುಪು ಉಲ್ಲಾಸ ಐದಾರು ವರ್ಷಗಳಲ್ಲಿ ಇಳಿಮುಖವಾಗುವುದನ್ನು ಕಾಣುತ್ತೇವೆ. ಆದರೆ ಈ ಹಳೆ ವಿದ್ಯಾರ್ಥಿ ಸಂಘದ ಉತ್ಸಾಹ ಕುಂದದೆ ಚಿಗುರುತ್ತಿರುವುದು ಮತ್ತು ಹದಿಮೂರು ವರ್ಷಗಳಲ್ಲಿ ಏರಿದ ಎತ್ತರ ಸಂತಸ ತಂದಿದೆ ಎಂದರು. ಸಂಘದ ಪೋಷಕರಾರದ ಪೆನಿನ್ಸುಲಾ ಸಮೂಹ ಹೋಟೆಲುಗಳ ಆಡಳಿತ ನಿರ್ದೇಶಕ ಶ್ರೀ ಸತೀಶ್ ಶೆಟ್ಟಿಯವರು, ಇಂದಿನ ಮಕ್ಕಳಿಗೆ ನಮ್ಮ ಊರಿನ ಶ್ರೀಮಂತ ಸಂಸ್ಕೃತಿಯನ್ನು ತೋರಿಸುವ, ತಿಳಿಸುವ ಅಗತ್ಯವಿದೆ ಎಂದರು.
ಮಾರ್ಗದರ್ಶಕ, ಎಂ. ಎಸ್. ಆರ್. ಎಸ್. ಕಾಲೇಜಿನ ಮಾಜಿ ಪ್ರಾಧ್ಯಾಪಕ, ಪ್ರಸ್ತುತ ಬಂಟರ ಸಂಘ ಮುಂಬಯಿ ಪ್ರಾಯೋಜಿತ ಎಸ್. ಎಂ. ಶೆಟ್ಟಿ ಕಾಲೇಜ್ ಪೊವೈ ಇಲ್ಲಿಯ ಪ್ರಾಂಶುಪಾಲರಾದ ಡಾ. ಶ್ರೀಧರ್ ಶೆಟ್ಟಿಯವರು ಮಾತನಾಡಿ, ಕೀರ್ತಿಶೇಷರಾದ ಮುದ್ದು ಶೆಟ್ಟಿ, ಸುಂದರ್ ರಾಮ್ ಶೆಟ್ಟಿ, ಸತೀಶ್ಚಂದ್ರ ಹೆಗ್ಡೆಯವರಂಥ ಧೀಮಂತ ವ್ಯಕ್ತಿಗಳು ಸಮರ್ಪಣಾ ಭಾವದೊಂದಿಗೆ ಶಿರ್ವದಂಥ ಗ್ರಾಮೀಣ ಪ್ರದೇಶದಲ್ಲಿ ಕಟ್ಟಿ ಬೆಳೆಸಿದ ವಿದ್ಯಾದೇಗುಲದಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ.
ಹಳೆ ವಿದ್ಯಾರ್ಥಿಗಳಿಂದ ಪ್ರಸ್ತುತ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಬಿಸಿಯೂಟದ ವ್ಯವಸ್ಥೆ ವಿನೂತನವಾದುದು. ಅದನ್ನು ಉಳಿಸಿ ಬೆಳೆಸುವ ತೀವ್ರ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ನನ್ನನ್ನೂ ಸೇರಿ ಎಲ್ಲರೂ ಉದಾರತೆಯಿಂದ ಆರ್ಥಿಕವಾಗಿ ಸ್ಪಂದಿಸಬೇಕೆಂದು ಹಳೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅಧ್ಯಕ್ಷ, ಉದಯ್ ಸುಂದರ್ ಶೆಟ್ಟಿ ಮಾತನಾಡಿ, ಸಮಾಜದ ಶ್ರೇಷ್ಠ ವ್ಯಕ್ತಿಗಳೊಂದಿಗಿನ ಒಡನಾಟವು ನಮ್ಮ ವ್ಯಕ್ತಿತ್ವದಲ್ಲಿ ಅಮೂಲಗ್ರಹ ಬದಲಾವಣೆಗಳನ್ನು ತರಬಲ್ಲುದು. ನಮ್ಮ ಜೀವನದಲ್ಲಿ ಅನುಭವಿ ಹಾಗೂ ಮಾಗಿದ ವ್ಯಕ್ತಿಗಳಿಂದ ಕಲಿಯುವ ಜೀವನ ಮೌಲ್ಯಗಳನ್ನು ಯಾವ ವಿಶ್ವ ವಿದ್ಯಾಲಯಗಳು ಕಲಿಸಲಾರವು. ಸಂಘವು 2016ರಿಂದ ಪ್ರಸ್ತುತ ವಿದ್ಯಾರ್ಥಿಗಳಿಗೆ ಪ್ರಾಯೋಜಿಸುತ್ತಿರುವ ಬಿಸಿಯೂಟದ ಪ್ರಯೋಜನವನ್ನು 250 ವಿದ್ಯಾರ್ಥಿಗಳು ಪಡೆಯುತ್ತಿರುವುದು ಸಂತಸದ ಸಂಗತಿ. ಪದಾಧಿಕಾರಿಗಳ ಸಾಂಘಿಕ ಪ್ರಯತ್ನ ಹಾಗೂ ಉದಾರತೆಯ ಫಲವಾಗಿ ಸಂಘವು 13 ವರ್ಷಗಳಲ್ಲಿ ಈ ಎತ್ತರಕ್ಕೆ ಏರಲು ಸಾಧ್ಯವಾಯಿತು. ಕೋವಿಡ್ ಸಂಕಷ್ಟದಲ್ಲಿ ನಾವೆಲ್ಲ ಪರಸ್ಷರ ಸಂಪರ್ಕದಲ್ಲಿದ್ದು ಸಹಕರಿಸುತ್ತಿದ್ದೆವು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಸುಧಾಕರ್ ಹೆಗ್ಡೆ ಹಾಗೂ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ದಂಪತಿಗಳನ್ನು ಸನ್ಮಾನಿಸಲಾಯಿತು. ಶ್ರೀಮತಿ ಜ್ಯೋತಿ ಶೆಟ್ಟಿ ಸೂಡ ಸನ್ಮಾನ ಪತ್ರ ವಾಚಿಸಿದರು. ಸಂಘದ ಉಪಾಧ್ಯಕ್ಷ ಶ್ರೀ ಅಶೋಕ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಮೊದಲಿಗೆ ಶ್ರೀಮತಿ ಲಕ್ಷ್ಮೀ ಸತೀಶ್ ಶೆಟ್ಟಿಯವರ ಪ್ರಾರ್ಥನಾ ಗೀತೆಯೊಂದಿಗೆ ನೆರೆದ ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷ ಪಲಿಮಾರು ವಸಂತ್ ಶೆಟ್ಟಿಯವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಸಿ.ಎ. ರವಿರಾಜ್ ಶೆಟ್ಟಿಯವರು 2020 ರಿಂದ 2023ರ ಈ ವರೆಗಿನ ಸಂಘದ ಖರ್ಚು ವೆಚ್ಚಗಳ ಯಾದಿಯನ್ನು ವಾಚಿಸಿದರು.
ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಎರಡು ವರ್ಷಗಳಲ್ಲಿ ಸಂಘವು ನಿರ್ವಹಿಸಿದ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದರು. ಸಂಘದ ಸದಸ್ಯ ಹರೀಶ್ ಶೆಟ್ಟಿ ಪಂಜಿಮಾರು ಅವರ ಪ್ರತಿಭಾವಂತ ಮಗಳು ಡಾ. ಹರ್ಷಿತಾ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಅಭ್ಯಾಸದ ಕುರಿತಾಗಿ ಸಲಹೆಯನ್ನೂ ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.
ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶಬುನ ಸತೀಶ್ ಶೆಟ್ಟಿ ಹಾಗೂ ಜಗದೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಜಾತ ಶೆಟ್ಟಿಯವರು ವಂದಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರುಗಳಾದ ಅಶೋಕ್ ಶೆಟ್ಟಿ, ಪಲಿಮಾರು ವಸಂತ್ ಶೆಟ್ಟಿ, ಖಾಂದೇಶ್ ಭಾಸ್ಕರ್ ಶೆಟ್ಟಿ, ಮೋಹನ್ ಶೆಟ್ಟಿ ಕಾಪು ಹಾಗೂ ಸಮನ್ವಯಕ ವಾಲ್ಟರ್ ಮಥಾಯಸ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಪೂರ್ವದಲ್ಲಿ ನಡೆದ ಸಂಗೀತಗೋಷ್ಠಿಯಲ್ಲಿ ಸುರೇಶ್ ಶೆಟ್ಟಿ ಶಿಬರೂರು ಮತ್ತು ಲಕ್ಷ್ಮೀ ಸತೀಶ್ ಶೆಟ್ಟಿಯವರು ದೇವರನಾಮಗಳನ್ನು ಹಾಡಿದರು. ಸದಸ್ಯರ ಮತ್ತು ಅವರ ಮಕ್ಕಳ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಸುರೇಶ್ ಶೆಟ್ಟಿಯವರು ನಡೆಸಿಕೊಟ್ಟರು. ಸಾಯಿ ಪ್ಯಾಲೇಸ್ ಹೋಟೆಲಿನ ಆದರಾತಿಥ್ಯದ ಪ್ರೀತಿ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ವಡೋದರಾ: 63 ವರ್ಷದ ವ್ಯಕ್ತಿಯೊಬ್ಬರು ಗುಜರಾತ್ ಮುಖ್ಯಮಂತ್ರಿಗೆ ಪತ್ರ ಬರೆದು ನಾಪತ್ತೆಯಾಗಿರುವ ತಮ್ಮ ಹೆಣ್ಣುಮಕ್ಕಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ತನ್ನ ಅವಳಿ ಹೆಣ್ಣು ಮಕ್ಕಳಾದ ಸಾರಿಕಾ ಮತ್ತು ಶೀತಲ್ ಸುಮಾರು 50 ದಿನಗಳಿಂದ ನಗರದಿಂದ ಕಾಣೆಯಾಗಿದ್ದಾರೆ ಎಂದು ಹರ್ನಿಯ ನಿವಾಸಿ ಚಿಮನ್ ವಂಕರ್ ಹೇಳಿದ್ದಾರೆ.
ಫೆಬ್ರುವರಿ 17 ರಂದು 24 ವರ್ಷ ವಯಸ್ಸಿನ ತನ್ನ ಹೆಣ್ಣುಮಕ್ಕಳು ಕಾಲೇಜಿಗೆ ತಮ್ಮ ಮನೆಯಿಂದ ಹೊರಟಿದ್ದರು ಎಂದು ವಂಕರ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಸಂಜೆ ಅವರು ಹಿಂತಿರುಗಲಿಲ್ಲ, ನಂತರ ಅವರು ಅವರಿಗೆ ಕರೆ ಮಾಡಲು ಪ್ರಯತ್ನಿಸಿದರು ಆದರೆ ಅವರ ಫೋನ್ ಸ್ವಿಚ್ ಆಫ್ ಆಗಿತ್ತು.
ವಂಕರ್ ಅವರು ತಮ್ಮ ಸಂಬಂಧಿಕರು ಮತ್ತು ನಗರದಲ್ಲಿನ ಅವರ ಮಗಳ ಸ್ನೇಹಿತರನ್ನು ವಿಚಾರಿಸಿದರು. ಆದರೆ ಅವರಿಗೆ ಹುಡುಗಿಯರ ಬಗ್ಗೆ ತಿಳಿದಿರಲಿಲ್ಲ. ನಂತರ ವಂಕರ್ ಅವರು ಸಯಾಜಿಗುಂಜ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ತನ್ನನ್ನು ಮದುವೆಯಾಗುವಂತೆ ಸಾರಿಕಾ ಮೇಲೆ ಒತ್ತಡ ಹೇರುತ್ತಿದ್ದ ಕಿಶನ್ ಸೋಲಂಕಿ ಎಂಬ ಶಂಕಿತನನ್ನೂ ಅವರ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸೋಲಂಕಿ ತನ್ನ ಹೆಣ್ಣು ಮಕ್ಕಳನ್ನು ಅಪಹರಿಸಿರಬಹುದು ಎಂದು ವಂಕರ್ ಆರೋಪಿಸಿದ್ದಾರೆ.
ಸಾರಿಕಾ ಎಂಎಸ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದರೆ, ಶೀತಲ್ ಎಸ್ಎನ್ಡಿಟಿ ಕಾಲೇಜಿನಲ್ಲಿ ಓದುತ್ತಿದ್ದಾರೆ. ಇದರಲ್ಲಿ ಕಾಣೆಯಾದ ಅರ್ಜಿಯನ್ನು ಸ್ವೀಕರಿಸಿದ ನಂತರ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದರು, ಇದರಲ್ಲಿ ಪೊಲೀಸರು ಎಂಎಸ್ ವಿಶ್ವವಿದ್ಯಾಲಯದ ಸಿಸಿಟಿವಿ ದೃಶ್ಯಗಳನ್ನು ಸಹ ಪರಿಶೀಲಿಸಿದ್ದಾರೆ. ಸಿಸಿಟಿವಿ ಫೂಟೇಜ್ನಲ್ಲಿ ಕಾಲೇಜು ಬಿಟ್ಟು ಎಲ್ಲಿಗೆ ಹೋಗಿದ್ದಾನೆ ಎಂಬ ಕುರುಹು ಇಲ್ಲ,
ತಂದೆಯ ಆರೋಪದ ಪ್ರಕಾರ ಪೊಲೀಸರು ಕಿಶನ್ ಸೋಲಂಕಿ ಎಂಬ ಯುವಕನನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದರು, ಅದರಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪೊಲೀಸ್ ವಿಚಾರಣೆಗೆ ಸಕಾರಾತ್ಮಕ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಚಿಮನ್ಭಾಯ್ ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ನಾಪತ್ತೆಯಾಗಿರುವ ತಮ್ಮ ಮಗಳ ಪತ್ತೆಗೆ ಮನವಿ ಮಾಡಿದರು.
ಅರ್ಜಿಯ ಅನ್ವಯ ನಗರ ಪೊಲೀಸ್ ಆಯುಕ್ತರು ಸಂಪೂರ್ಣ ಅಧ್ಯಾಯದ ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದಾರೆ. ಕಳೆದ 50 ದಿನಗಳಿಂದ ನಾಪತ್ತೆಯಾಗಿರುವ ಅವಳಿ ಸಹೋದರಿಯರ ತನಿಖೆಗೆ ನೆರವಾಗುವಂತೆ ಕ್ರೈಂ ಬ್ರಾಂಚ್ ಅಮೆರಿಕದಲ್ಲಿರುವ ಕಂಪನಿಯ ಕೇಂದ್ರ ಕಚೇರಿಯಿಂದ ವಾಟ್ಸಾಪ್ ಡೇಟಾವನ್ನು ಕೋರಿದೆ.
ಇಬ್ಬರೂ ಸಹೋದರಿಯರು ತಮ್ಮ ಮೊಬೈಲ್ ಫೋನ್ ತೆರೆದಾಗಲೆಲ್ಲಾ ವೈಫೈ ಮೂಲಕ ವಾಟ್ಸಾಪ್ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಕ್ಯಾಲಿಫೋರ್ನಿಯಾ ಮೂಲದ ಕಂಪನಿಯಿಂದ ಮಾತ್ರ ಪಡೆಯಬಹುದು, ಪೊಲೀಸರು ಡೇಟಾಕ್ಕಾಗಿ ಅಲ್ಲಿಗೆ ಲಿಖಿತ ವಿನಂತಿಯನ್ನು ಕಳುಹಿಸಿದ್ದಾರೆ.
ಇಂದು ದಿನಾಂಕ 08.04.2023ರ ಶನಿವಾರ ಸಂಜೆ ಘಂಟೆ 5ರಿಂದ ಯಕ್ಷಬ್ರಹ್ಮ ಅಗರಿ ಶ್ರೀನಿವಾಸ ಭಾಗವತರ ಅಗರಿ ಸಂಸ್ಮರಣೆ ಮತ್ತು ಅಗರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮ ಸುರತ್ಕಲ್ಲಿನಲ್ಲಿರುವ ಗೋವಿಂದದಾಸ ಕಾಲೇಜಿನಲ್ಲಿ ನಡೆಯಲಿದೆ. ಈ ಸಾಲಿನ ಅಗರಿ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಡಿ. ಹರ್ಷೇ೦ದ್ರ ಕುಮಾರ್ ಅವರಿಗೆ ನೀಡಿ ಗೌರವಿಸಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಪೂರ್ಣಿಮಾ ಯತೀಶ್ ರೈ ನೇತೃತ್ವದಲ್ಲಿ ಅಗರಿ ಶ್ರೀನಿವಾಸ ಭಾಗವತ ವಿರಚಿತ ‘ಶ್ರೀ ದೇವಿ ಮಹಿಷಮರ್ದಿನಿ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿರುವುದು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಣ ಪರಿಕರಗಳು ಪ್ರಮುಖ ಪಾತ್ರ ವಹಿಸುತ್ತವೆ. ಆಧುನಿಕ ತಂತ್ರಜ್ಞಾನಗಳ ಮೂಲಕ ನಡೆಯುವ ಪಾಠ ಪ್ರವಚನಗಳು ವಿದ್ಯಾರ್ಥಿಗಳಿಗೆ ಸುಲಭವಾಗಿ ಮನನವಾಗುತ್ತವೆ. ಆ ದಿಸೆಯಲ್ಲಿ ಶೈಕ್ಷಣಿಕ ಕ್ಷೇತ್ರ ಆಧುನಿಕತೆಗೆ ತನ್ನನ್ನು ತಾನು ತೆರೆದುಕೊಳ್ಳುವುದು ಅಗತ್ಯ ಎಂದು ಅಂಬಿಕಾ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿ ಡಾ.ವಿವೇಕ್ ಕಜೆ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ನೂತನವಾಗಿ ಅಳವಡಿಸಿರುವ ಇಂಟರಾಕ್ಟಿವ್ ಸ್ಮಾರ್ಟ್ ಬೋರ್ಡ್ ಅನ್ನು ಉದ್ಘಾಟನೆಗೈದು ಶುಕ್ರವಾರ ಮಾತನಾಡಿದರು.
ನಾವಿಂದು ಅನೇಕ ತಂತ್ರಜ್ಞಾನಗಳ ಮೂಲಕ ವಿಷಯಗಳನ್ನು ಸುಲಭವಾಗಿ ಕರಗತ ಮಾಡಿಕೊಳ್ಳುತ್ತಿರುವುದು ಹೌದಾದರೂ ನಡವಳಿಕೆಯನ್ನು ಸುಂದರವಾಗಿ ಕಾಪಾಡಿಕೊಳ್ಳಬೇಕಾದದ್ದು ಅಗತ್ಯ. ಅದು ಜ್ಞಾನಕ್ಕಿಂತಲೂ ಮೊದಲು ಸಿದ್ಧವಾಗಬೇಕಾದದ್ದು. ಹಾಗಾಗಿ ಉತ್ಕೃಷ್ಟ ನಡವಳಿಕೆಯನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಶಿಕ್ಷಣ ಬೇಕಾಗಿದೆ. ಶಿಕ್ಷಕರು ಅಂತರಂಗದಾಳದಿಂದ ಬೋಧಿಸಿದಾಗ ಆ ಪಾಠಗಳು ವಿದ್ಯಾರ್ಥಿಗಳ ಮನಸ್ಸನ್ನು ಮುಟ್ಟುತ್ತವೆ ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಜಗತ್ತು ಹೊಸತನದೆಡೆಗೆ ಮುಖ ಮಾಡುವಾಗ ನಾವೂ ಅದರೊಂದಿಗೆ ಹೆಜ್ಜೆ ಹಾಕಬೇಕಾದ್ದು ಅನಿವಾರ್ಯ. ಪುತ್ತೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಅಂಬಿಕಾ ಮೊಟ್ಟ ಮೊದಲ ಬಾರಿಗೆ ಇಂತಹ ಇಂಟರಾಕ್ಟಿವ್ ಸ್ಮಾರ್ಟ್ ಬೋರ್ಡ್ ಅನ್ನು ಅಳವಡಿಸಿದೆ ಎಂಬುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳ ಅರ್ಥ ಮಾಡಿಕೊಳ್ಳುವ ಶಕ್ತಿ ಇದರಿಂದ ವೃದ್ಧಿಸಲಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿದ್ದರು. ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಸ್ವಾಗತಿಸಿದರು. ಶಿಕ್ಷಕಿ ಗೌರಿ ವಂದಿಸಿದರು. ಶಿಕ್ಷಕಿ ಅನಘಾ ಕಾರ್ಯಕ್ರಮ ನಿರ್ವಹಿಸಿದರು.
ತನ್ನನ್ನು ಎಚ್ಚರಿಸಲು ತಡವಾದ ಕಾರಣಕ್ಕೆ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಕೇರಳದ ತ್ರಿಶೂರ್ ಜಿಲ್ಲೆಯ ಕೊಡನ್ನೂರು ಅರಿಯಂಪದಂ ಮೂಲದ ಜಾಯ್ (60) ಎಂದು ಗುರುತಿಸಲಾಗಿದೆ.
ತಂದೆಯನ್ನು ಕೊಂದದ್ದಕ್ಕಾಗಿ ಪೊಲೀಸರು ಜಾಯ್ ಅವರ ಪುತ್ರ ರಿಜೋ(25)ನನ್ನು ವಶಕ್ಕೆ ಪಡೆದಿದ್ದಾರೆ.
ವೆಲ್ಡಿಂಗ್ ಕೆಲಸಗಾರನಾಗಿದ್ದ ರಿಜೋ ಸಂಜೆ 5 ಗಂಟೆ ಸುಮಾರಿಗೆ ಕುಡಿದ ಅಮಲಿನಲ್ಲಿ ಮನೆಗೆ ಬಂದಿದ್ದಾನೆ. ಮಲಗಲು ತೆರಳುವ ಮುನ್ನ ರಾತ್ರಿ 8.15ಕ್ಕೆ ತನ್ನನ್ನು ಎಬ್ಬಿಸುವಂತೆ ಪೋಷಕರಿಗೆ ಹೇಳಿ ಮಲಗಿದ್ದ.
ಆದರೆ ಸರಿಯಾದ ಸಮಯದ ಹದಿನೈದು ನಿಮಿಷದ ನಂತರ ಅಂದರೆ ರಾತ್ರಿ 8.30ರ ವೇಳೆಗೆ ಆತನನ್ನು ಪೋಷಕರು ಎಬ್ಬಿಸಿದರೂ ತಡವಾದ್ದಕ್ಕೆ ಆತ ಕೂಗಾಡಿದ್ದಾನೆ. ಇದನ್ನು ಜಾಯ್ ಪ್ರಶ್ನಿಸಿದಾಗ, ರಿಜೋ ಅವರನ್ನು ದೂಡಿ ಕೆಳಗೆ ತಳ್ಳಿದ್ದಾನೆ.
ನಂತರ ಆತ ತನ್ನ ತಂದೆ ಜಾಯ್ ಅವರನ್ನು ಕ್ರೂರವಾಗಿ ಹೊಡೆಯಲು ಪ್ರಾರಂಭಿಸಿದ. ಜಾಯ್ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟರು.
ತೆಂಕುತಿಟ್ಟಿನ ಪ್ರತಿಭಾನ್ವಿತ ಕಲಾವಿದರಾದ ಜಗದೀಶ ನಲ್ಕ (46) ಅವರು 06-04-2023ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕಳೆದ 21 ವರುಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಭಗವತಿ ಮಹಾತ್ಮೈಯಲ್ಲಿ ಈಶ್ವರನ ಪಾತ್ರ, ದೇವಿ ಮಹಾತ್ಮೈಯಲ್ಲಿ ವಿಷ್ಣು, ರಕ್ತಬೀಜನ ಪಾತ್ರ ಹೀಗೆ ಎಲ್ಲ ಪಾತ್ರಗಳನ್ನು ಸೊಗಸಾಗಿ ನಿರ್ವಹಿಸುತ್ತಿದ್ದರು.
ಪತ್ನಿ, ಪುತ್ರಿ, ಪುಟಾಣಿ ಗಂಡು ಮಗುವನ್ನು ಅಗಲಿದ್ದಾರೆ.
ಯಕ್ಷನಿಧಿಯ ಸದಸ್ಯರಾಗಿರುವ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.