Saturday, August 29, 2026
Home Blog Page 99

ವರದಕ್ಷಿಣೆಗಾಗಿ ಮಾವನಿಂದ ಅಮಾನುಷವಾಗಿ ಥಳಿಸಲ್ಪಟ್ಟ ಮಹಿಳೆ – ಮಾವನ ಬಂಧನ

ಕೇಳಿದಷ್ಟು ವರದಕ್ಷಿಣೆ ನೀಡದ ಕಾರಣ ಸೊಸೆಯನ್ನು ಮನೆ ಬಿಟ್ಟು ಹೋಗುವಂತೆ ಹೇಳಿ ವ್ಯಕ್ತಿಯೊಬ್ಬ ದೊಣ್ಣೆಯಿಂದ ಥಳಿಸಿದ ಘಟನೆ ನಡೆದಿದೆ.

ಪರಶುವಕ್ಕಲ್‌ನ ಕಿಳಕ್ಕೆ ಪುತ್ತನ್‌ ವೇದಿಕೆಯ ಸ್ಟೀಫನ್‌ ಎಂಬುವರ ಪತ್ನಿ ಎ.ಎಲ್‌.ಪ್ರೇಮಲತಾ (42) ಅವರಿಗೆ ಮಾವ ರಾಮಚಂದ್ರನ್‌ (68) ಥಳಿಸಿದ್ದಾರೆ.

ಪ್ರೇಮಲತಾ ಅವರ 14 ವರ್ಷದ ಕಿರಿಯ ಮಗ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದ ದೃಶ್ಯಾವಳಿಯಿಂದ ಈ ಘಟನೆ ಹೊರಬಿದ್ದಿದೆ. ದೃಶ್ಯಗಳ ಸಮೇತ ಪ್ರೇಮಲತಾ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಮಚಂದ್ರನನ್ನು ವಶಕ್ಕೆ ಪಡೆದಿದ್ದಾರೆ.

ದೃಶ್ಯಗಳಲ್ಲಿ ಪ್ರೇಮಲತಾ ಅವರ ಮುಖಕ್ಕೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದು, ರಾಮಚಂದ್ರನ್ ದೊಣ್ಣೆಯಿಂದ ಥಳಿಸಿದ್ದಾರೆ.

‘ಮಾಯಾಪುರಿ ಮಹಾತ್ಮೆ’ ಯಕ್ಷಗಾನ

ಹಾದಿಗಲ್ಲು ಶ್ರೀ ಅಭಯಲಕ್ಷ್ಮಿ ನರಸಿಂಹ ದೇವಾಲಯದ ವರ್ಧಂತ್ಯುತ್ಸವದ ಪ್ರಯುಕ್ತ 11-04-2023ರಂದು ಜರಗಿದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮದಲ್ಲಿ ಶ್ರೀ   ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾಮಂಡಳಿ ಅಂಬಲಪಾಡಿ (ಅಧ್ಯಕ್ಷ ಕೆ. ಅಜಿತ್‌ಕುಮಾರ್)

ಹಾಗೂ ಹಿರಿಯ ಯಕ್ಷಗಾನ ಕಲಾವಿದ ಶಿವಶಂಕರ ಕೆ.ಎಸ್. ಭಟ್‌ ಇವರಿಗೆ ತಲಾ ರೂ.10,000/- ಹಮ್ಮಿಣಿಯೊಂದಿಗೆ ‘ಶ್ರೀವಾದಿರಾಜಾನುಗ್ರಹ’ ಪ್ರಶಸ್ತಿಯನ್ನು ದೇವಳದ ಧರ್ಮದರ್ಶಿ ಹಾದಿಗಲ್ಲು  ಲಕ್ಷ್ಮೀನಾರಾಯಣರು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಎಸ್. ವಿ.ಭಟ್, ಮುರಲಿ ಕಡೆಕಾರ್ ನಾರಾಯಣ ಎಂ. ಹೆಗಡೆ ಹಾಗೂ ಭಾಗವತರಾದ ಕೆ.ಜೆ. ಗಣೇಶ್‌ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ನರಸಿಂಹ ತುಂಗರ ನಿರ್ದೇಶನದಲ್ಲಿ ಅಂಬಲಪಾಡಿ ಲಕ್ಷ್ಮೀಜನಾರ್ದನ ಯಕ್ಷಗಾನ ಮಂಡಳಿಯ ಬಾಲಕಲಾವಿದರಿಂದ ‘ಮಾಯಾಪುರಿ ಮಹಾತ್ಮೆ’ ಯಕ್ಷಗಾನ ಪ್ರಸ್ತುತಗೊಂಡಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ – ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಠಾರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಯಕ್ಷಗಾನ

ಕರಾವಳಿಯ ಗಂಡು ಮೆಟ್ಟಿನಕಲೆ ಎಂದೇ ಪ್ರಸಿದ್ಧವಾದ ಯಕ್ಷಗಾನ ಇಂದು ಯಾವುದೇ ವಯೋಮಾನದವರು ಕಲಿಯುವ ಕಲೆ. ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಆಧ್ಯತೆ ಕೊಡುತ್ತಾ ಬಂದಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಯಕ್ಷಪ್ರದೀಪ” ಎಂಬ ತಂಡವಿದ್ದು,  ಯುಕೆಜಿಯಿಂದ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಸುಮಾರು 70ಕ್ಕೂ ಅಧಿಕ ವಿದ್ಯಾರ್ಥಿಗಳು ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ.

ಕಲಿತ ವಿದ್ಯೆಗೆ ಸೂಕ್ತ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿ, ಕಟ್ಟೆಪೂಜೆ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಶಾಲಾ ಆವರಣದಲ್ಲಿ  ಯಕ್ಷಗಾನ ರಂಗಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ ದೀಪ ಬೆಳಗಿಸಿ ಚಾಲನೆ ನೀಡಿದರು. 

ಯಕ್ಷಗುರು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಇವರ ನಿರ್ದೇಶನದಲ್ಲಿ ಹಾಗೂ ಶಾಲಾ ಸಂಸ್ಕೃತ ಅಧ್ಯಾಪಕ ಶ್ರೀ ವೆಂಕಟೇಶ್ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ 64 ಪುಟಾಣಿಗಳು ಕಾಲಿಗೆ ಗೆಜ್ಜೆ ಕಟ್ಟಿ ಕುಣಿಯುತ್ತಾ “ರಾಜಾ ದಿಲೀಪ, ಏಕಾದಶೀ ಮಹಾತ್ಮೆ, ರಾಜಾ ವೈಖಾನಸ” ಎಂಬ ಪುಣ್ಯ ಕಥಾಭಾಗಗಳ ಯಕ್ಷಗಾನ ಪ್ರದರ್ಶನ ನಡೆಯಿತು.

ಯಕ್ಷಗಾನದ ಬಳಿಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಂದ ಸುಮಾರು ಎರಡೂವರೆ ಗಂಟೆಗಳ ಭಜನಾ ಕಾರ್ಯಕ್ರಮ ನೆರವೇರಿತು.

ದೇವರ ಕಟ್ಟೆ ಪೂಜೆಯ ಸಂದರ್ಭದಲ್ಲಿ ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಹಾಗೂ ಕೋಶಾಧಿಕಾರಿ ಶ್ರೀ ಅಚ್ಯುತ ನಾಯಕ್, ಶಾಲಾ ಆಡಳಿತ ಮಂಡಳಿ ಸಂಚಾಲಕ ಶ್ರೀ ರವಿನಾರಾಯಣ.ಎಂ ಮತ್ತು ಆಡಳಿತ ಮಂಡಳಿಯ ಸದಸ್ಯರು, ಶಾಲಾ ಪೋಷಕ ವೃಂದ, ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಇಂದು ಪುತ್ತೂರಿನಲ್ಲಿ ಪಾವಂಜೆ ಮೇಳದವರಿಂದ ಆಟ – ಶ್ರೀ ದೇವಿ ಮಹಾತ್ಮೆ

ಇಂದು ( ದಿನಾಂಕ 10-04-2023) ಪುತ್ತೂರಿನಲ್ಲಿ ಪಾವಂಜೆ ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರಾ ಸವಾರಿಯ ಪ್ರಯುಕ್ತ ಪುತ್ತೂರು ಮಂಜಲ್ಪಡ್ಪು ಎಂಬಲ್ಲಿ ಕೊಡಿಪ್ಪಾಡಿ ದೇವಸ್ಥಾನದ ದ್ವಾರದ ಸಮೀಪ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸಂಜೆ 6. 30 ಘಂಟೆಗೆ ಶ್ರೀ ದೇವಿ ಮಹಾತ್ಮೆ ಪ್ರಸಂಗದ ಪ್ರದರ್ಶನ ಆರಂಭವಾಗಲಿದೆ.

ಕಲಾಭಿಮಾನಿಗಳೆಲ್ಲರನ್ನೂ ಆಯೋಜಕರು ಆಯೋಜಕರು ಆದರದಿಂದ ಆಮಂತ್ರಿಸಿದ್ದಾರೆ. ಕಾರ್ಯಕ್ರಮದ ವಿವರಗಳಿಗೆ ಕರಪತ್ರ ನೋಡಿ.

ಬೆಂಗಳೂರಿನಲ್ಲಿ 35 ವರ್ಷದ ಮಹಿಳೆಯ ಕೊಲೆ

ಬೆಂಗಳೂರು: ರಾಯಚೂರು ಮೂಲದ ಅಂಬಿಕಾ (35) ಕೆಆರ್ ಪುರಂನ ಟಿಸಿ ಪಾಳ್ಯದಲ್ಲಿರುವ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೃತರು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದು ಮನೆಯಲ್ಲಿ ಒಂಟಿಯಾಗಿ ವಾಸವಿದ್ದು, ಇಬ್ಬರು ಮಕ್ಕಳು ಹಾಸ್ಟೆಲ್‌ನಲ್ಲಿದ್ದರು.

“ಹತ್ಯೆ ಮಾಡಿದ ನಂತರ ದುಷ್ಕರ್ಮಿಗಳು ಹೊರಗಿನಿಂದ ಬಾಗಿಲು ಹಾಕಿದ್ದರು. 2-3 ದಿನಗಳ ಹಿಂದೆ ಕೊಲೆ ನಡೆದಿದ್ದು, ಅನೇಕ ಇರಿತದ ಗಾಯಗಳು ಪತ್ತೆಯಾಗಿವೆ.

ಮೇಲ್ನೋಟಕ್ಕೆ ಸಂತ್ರಸ್ತೆಗೆ ತಿಳಿದಿರುವ ಯಾರೋ ಕೊಲೆಯ ಹಿಂದೆ ಇದ್ದಾರೆ. ಆರೋಪಿಯನ್ನು ಬಂಧಿಸಿದ ನಂತರವಷ್ಟೇ ಕೊಲೆಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಆಕೆಯ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿ ಒಳ ನುಗ್ಗಿ ಕೊಳೆತ ಸ್ಥಿತಿಯಲ್ಲಿದ್ದುದನ್ನು ಪತ್ತೆ ಹಚ್ಚಿದ್ದಾರೆ

ಮಾನಿಷಾದ – ಇಂದು ಯಕ್ಷಗಾನ ಬಯಲಾಟ

ಇಂದು ದಿನಾಂಕ 10.04.2023ನೇ ಸೋಮವಾರ ಪುತ್ತೂರು ತಾಲೂಕಿನ ಕುಂಬ್ರ ಶ್ರೀರಾಮ ಭಜನಾ ಮಂದಿರದ ಬಳಿ ಕಟೀಲು ನಾಲ್ಕನೇ ಮೇಳದವರಿಂದ ಯಕ್ಷಗಾನ ಸೇವಾ ಬಯಲಾಟ ನಡೆಯಲಿದೆ.

ಇಂದಿನ ಪ್ರಸಂಗ ಮಾನಿಷಾದ. ( ಬೊಟ್ಟಿಕೆರೆ ಶ್ರೀ ಪುರುಷೋತ್ತಮ ಪೂಂಜ ವಿರಚಿತ )

ಕಲಾಭಿಮಾನಿಗಳೆಲ್ಲರಿಗೂ ಆಯೋಜಕರು ಆದರದ ಸ್ವಾಗತವನ್ನು ಕೋರಿದ್ದಾರೆ.

ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಗಳಿಗೆ ಬೆಂಬಲ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ

ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಯಲ್ಲಿ ಧರ್ಮದ ಪಥದಲ್ಲಿ  ನಡೆಯಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಿರಿಯರ ಸೇವಾ ಪ್ರತಿಷ್ಠಾನ ಈಗಾಗಲೇ ಕೈಗೊಂಡಿರುವ ಕಾರ್ಯಕ್ರಮಗಳು ಸಾಮಾಜಿಕ ಪರಿವರ್ತನೆಗೆ ಕೊಡುಗೆಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ಕಾಸರಗೋಡು ಜಿಲ್ಲಾ ಹಿರಿಯರ ಸಮಾವೇಶವನ್ನು ಏರ್ಪಡಿಸಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಪ್ರಯತ್ನಿಸುವುದಾಗಿ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ತಿಳಿಸಿದರು.

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ(ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಎಡನೀರು ಪ್ರೌಢಶಾಲಾ ಸಭಾಂಗಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಯಾವುದೇ ಉತ್ತಮ ವಿಚಾರ ಮೂಡುವುದು ಒಬ್ಬನ ಮನಸ್ಸಿನಲ್ಲಿ. ಸಜ್ಜನರ ಸಂಘಟನೆಯ ಕೆಲಸವನ್ನು ಹಿರಿಯರ ಸೇವಾ ಪ್ರತಿಷ್ಠಾನ ಮಾಡುತ್ತಿದ್ದು ಶಂಕರಾಚಾರ್ಯ ರಾಮಾನುಜಚಾರ್ಯ ವಿವೇಕಾನಂದ, ಭಗತ್ ಸಿಂಗ್ ಮೊದಲಾದವರು ಅತ್ಯಂತ ಕಿರಿವಯಸ್ಸಿನಲ್ಲಿ ಅಪೂರ್ವ ಸಾಧನೆ ಮಾಡಿದವರಾಗಿದ್ದು ಅವರ ಕಾರ್ಯಗಳಿಂದ ನಾವು ಪ್ರೇರಣೆಯನ್ನು ಪಡೆಯಬೇಕೆಂದು ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ. ಬಾಲಕೃಷ್ಣ ಭಟ್ ಸುರತ್ಕಲ್ ತಿಳಿಸಿದರು .

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಗೌರವಾಧ್ಯಕ್ಷ  ಪ್ರೊ.ಎ.ವಿ ನಾರಾಯಣ ಮಾತನಾಡಿ ಹಿರಿಯರ ಸಂಘಟನೆಯು ಭಾರತೀಯ ಸಂಸ್ಕೃತಿ ಮತ್ತು ಕೌಟುಂಬಿಕ ಮೌಲ್ಯಗಳ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದರು.

ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳಾದ ಬಾಲಕೃಷ್ಣ ಶೆಟ್ಟಿ, ಮಂಗಳೂರು ,ಭರತ್ ಕೆ ಮಂಗಳೂರು, ಶಿವಕುಮಾರ್, ಕೃಷ್ಣಶರ್ಮ ಅನಾರು, ಲೋಕೇಶ್ ಹೆಗ್ಡೆ ಪುತ್ತೂರು, ಚಂದ್ರಶೇಖರ ಆಳ್ವ ಪಡುಮಲೆ ಪ್ರಗತಿಯ ಮಾಹಿತಿಯನ್ನು ನೀಡಿದರು. 

ಯುವ ಜನತೆಗೆ ಮಾರ್ಗದರ್ಶನ ನೀಡುವ  ಸಂಸ್ಕಾರ ಶಿಬಿರಗಳನ್ನು ನಡೆಸಲು ಉದ್ದೇಶಿಸಲಾಗಿದೆಯೆಂದು ಪ್ರತಿಷ್ಠಾನದ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು. 

ಜಿಲ್ಲಾ ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ನಿ ಯವರಿಗೆ ಮಂಗಳಾದೇವಿ ಘಟಕದ ಉಪಾಧ್ಯಕ್ಷ ಮತ್ತು ಭಜನಕಾರರಾದ ಭರತ್. ಕೆ ಅವರು ಹಸ್ತಾಕ್ಷರದಿಂದ ಬರೆದ 4000 ಕ್ಕಿಂತಲೂ ಹೆಚ್ಚು ಭಜನೆಗಳ ಸಂಗ್ರಹ ಪುಸ್ತಕವನ್ನು  ಶ್ರಿ ಸ್ವಾಮೀಜಿಯವರ ಮೂಲಕ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಗಮಕ ಕಾರ್ಯಕ್ರಮವನ್ನು ನಡೆಸಿಕೊಟ್ಟ ಪ್ರೊ. ಮಧೂರು ಮೋಹನ ಕಲ್ಲೂರಾಯ, ಡಾ. ವಾರಿಜಾ ನೀರ್ಬೈಲು ಮತ್ತು ಪುತ್ತೂರು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಆಯ್ಕೆಯಾದ ಲೋಕೇಶ್ ಹೆಗ್ಡೆಯವರನ್ನು ಸ್ವಾಮೀಜಿಯವರು ಗೌರವಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು  ನಾರಾಯಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ  ಪ್ರತಿಷ್ಠಾನದ ಉದ್ದೇಶಗಳನ್ನು ಸಾಧಿಸಲು ಪದಾಧಿಕಾರಿಗಳು ಬದ್ಧತೆಯಿಂದ  ಶ್ರಮಿಸಬೇಕೆಂದು ತಿಳಿಸಿದರು.

ಪ್ರೊ .ವೇದವ್ಯಾಸ ರಾಮಕುಂಜ  ಪ್ರಾರ್ಥಿಸಿದರು. ಪ್ರತಿಷ್ಠಾನದ ಸಹ ಸಂಚಾಲಕ  ಭಾಸ್ಕರ್ ಬಾರ್ಯ ಸ್ವಾಗತಿಸಿ ಕಲಾವಿದ ಗುಂಡ್ಯಡ್ಕ ಈಶ್ವರ ಭಟ್ ವಂದಿಸಿದರು. ವೆಂಕಟ್ ಭಟ್ ಎಡನೀರು ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು . ಡಾ. ಬಿ.ಎನ್. ಮಹಾಲಿಂಗ ಭಟ್ ಮತ್ತು ದಿವಾಕರ ಆಚಾರ್ಯ  ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

‘ಸೀತಾಪಹಾರ – ವಾಲಿಮೋಕ್ಷ’ ತಾಳಮದ್ದಳೆ

ದಿನಾಂಕ 08-04-2023ನೇ ಶನಿವಾರದಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ತಿಂಗಳ ತಾಳಮದ್ದಳೆ ‘ಸೀತಾಪಹಾರ – ವಾಲಿಮೋಕ್ಷ’  ರಾಮಣ್ಣ ಮಾಸ್ತರ್ ದೇಲಂಪಾಡಿ ಮತ್ತು ಮನೆಯವರಿಂದ ಸೇವಾರೂಪವಾಗಿ ಪ್ರಸ್ತುತಗೊಂಡಿತು.

ಶ್ರೀ ಗೋಪಾಲಕೃಷ್ಣ ದೇವರ ಪೂಜಾರ್ಚನೆಯೊಂದಿಗೆ ಆರಂಭಗೊಂಡ ಈ ಕಲಾಕಾರ್ಯಕ್ರಮವು ಸಂಘದ ಕಾರ್ಯದರ್ಶಿ ಹಿರಿಯ ಭಾಗವತ ಗುರು ವಿಶ್ವವಿನೋದ ಬನಾರಿಯವರ ನಿರ್ದೇಶನದಲ್ಲಿ ಮುಂದುವರೆಯಿತು.

ಭಾಗವತರಾಗಿ ಮೋಹನ ಮೆಣಸಿನಕಾನ ಮತ್ತು ಕುಮಾರಿ ರಚನ ಚಿದ್ಗಲ್ ತಮ್ಮ ಅಪೂರ್ವ ಕಂಠಸಿರಿಯಿಂದ ಹಾಡಿ ಜನಮೆಚ್ಚುಗೆ ಗಳಿಸಿದರು. ಚೆಂಡೆ ಮದ್ದಳೆ ವಾದನದಲ್ಲಿ ಅಪ್ಪಯ್ಯ ಮಣಿಯಾಣಿ ಮಂಡೆಕ್ಕೋಲು, ವಿಷ್ಣುಶರಣ ಬನಾರಿ, ಶ್ರೀಹರಿ ಆಲಂಕಾರು, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ ಭಾಗವಹಿಸಿದ್ದರು.

ಪಾತ್ರಧಾರಿಗಳಾಗಿ ಡಾ| ರಮಾನಂದ ಬನಾರಿ ಮಂಜೇಶ್ವರ, ವೆಂಕಟರಾಮ ಭಟ್ಟ ಸುಳ್ಯ, ಬೆಳ್ಳಿಪ್ಪಾಡಿ ಸದಾಶಿವ ರೈ, ಯಂ.ರಮಾನಂದ ರೈ ದೇಲಂಪಾಡಿ, ರಾಮನಾಯ್ಕ ದೇಲಂಪಾಡಿ, ನಾರಾಯಣ ದೇಲಂಪಾಡಿ, ಪದ್ಮನಾಭ ಗೋಳಿತ್ತಡ್ಕ ಮತ್ತು ಡಿ. ರಾಮಣ್ಣ ಮಾಸ್ತರ್  ತಮ್ಮ ವಾಕ್ಚಾತುರ್ಯದಿಂದ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದ ಮೊದಲಿಗೆ ಲತಾ ಆಚಾರ್ಯ ಬನಾರಿ ಪಾತ್ರ ಪರಿಚಯ ಮಾಡಿಕೊಟ್ಟರು. ನಂದಕಿಶೋರ್ ಬನಾರಿ ಸ್ವಾಗತಿಸಿ ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಧನ್ಯವಾದ ಸಮರ್ಪಿಸಿದರು.

ಖಾತೆದಾರರ 21 ಲಕ್ಷ ರೂ.ಗಳನ್ನು ಲಪಟಾಯಿಸಿದ ಮಹಿಳಾ ಪೋಸ್ಟ್ ಮಾಸ್ಟರ್ ಬಂಧನ, ದುಂದುವೆಚ್ಚಕ್ಕೆ ಹಣ ಬಳಕೆ

ಖಾತೆದಾರರ 21 ಲಕ್ಷ ರೂ.ಗಳನ್ನು ಲಪಟಾಯಿಸಿದ ಮಹಿಳಾ ಪೋಸ್ಟ್ ಮಾಸ್ಟರ್ ಓರ್ವಳನ್ನು ಬಂಧಿಸಲಾಗಿದೆ.

ವಂಚಕಳು ತನ್ನ ಸ್ವಂತ ಕೈಬರಹದಲ್ಲಿ ಹೂಡಿಕೆದಾರರಿಗೆ ನಕಲಿ ಖಾತೆ ಸಂಖ್ಯೆಗಳನ್ನು ಬರೆದು ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ ಎಂದು ಖಾತೆದಾರರನ್ನು ದಾರಿ ತಪ್ಪಿಸುತ್ತಿದ್ದಳು ಎಂದು ತಿಳಿದುಬಂದಿದೆ.

ಆಲಪ್ಪುಳ: ಅಂಚೆ ಕಚೇರಿ ಖಾತೆಗೆ ಹಣ ಜಮಾ ಮಾಡದೆ 21 ಲಕ್ಷ ರೂಪಾಯಿ ವಂಚಿಸಿದ ಮಹಿಳೆ ಪೋಸ್ಟ್ ಮಾಸ್ಟರ್ ಬಂಧನ: ಮರಾರಿಕುಲಂ ಪೊಲೀಸರು ಅಮಿತಾ ನಾಥ್ (29) ಎಂಬಾಕೆಯನ್ನು ಮರಾರಿಕುಳಂ ಉತ್ತರ ಅಂಚೆ ಕಚೇರಿಯ ಬ್ರಾಂಚ್ ಪೋಸ್ಟ್ ಮಾಸ್ಟರ್ 15ನೇ ವಾರ್ಡ್ ಪಂಪುಂತಾರಾದಲ್ಲಿರುವ ಅವಳ ಮನೆಯಲ್ಲಿ ಬಂಧಿಸಿದ್ದಾರೆ.

ಒಂದು ಮತ್ತು ಐದು ವರ್ಷಗಳ ಅವಧಿಯ ವಿವಿಧ ಹೂಡಿಕೆ ಯೋಜನೆಗಳಲ್ಲಿ ಪಾವತಿಸಿದ ಮೊತ್ತದಲ್ಲಿ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.

ಆಕೆಯು ತನ್ನ ಸ್ವಂತ ಕೈಬರಹದಲ್ಲಿ ಹೂಡಿಕೆದಾರರಿಗೆ ನಕಲಿ ಖಾತೆ ಸಂಖ್ಯೆಗಳನ್ನು ಬರೆದು ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಿ ಗ್ರಾಹಕರನ್ನು ದಾರಿ ತಪ್ಪಿಸುತ್ತಿದ್ದಳು.

ಅಮಿತಾ ನಾಥ್ ಅವರ ಮಾಸಿಕ ವೇತನ 20,000 ರೂ. ಆಗಿತ್ತು. ಆದರೂ ಲಪಟಾಯಿಸಿದ ಹಣವನ್ನು ತನ್ನ ದುಂದುವೆಚ್ಚಕ್ಕೆ ಬಳಕೆ ಮಾಡುತ್ತಿದ್ದಳು.

ಎಂ.ಎಸ್. ಆರ್. ಎಸ್ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ವಾರ್ಷಿಕೋತ್ಸವ – ಸಾಂಸ್ಕ್ರತಿಕ ಕಾರ್ಯಕ್ರಮ

 ಬ್ಯಾಂಕಿಂಗ್ ಕ್ಷೇತ್ರದ ಧುರೀಣ ಕೀರ್ತಿಶೇಷ ಮೂಲ್ಕಿ ಸುಂದರ್ ರಾಮ್ ಶೆಟ್ಟಿಯವರು ವಿಜಯ ಬ್ಯಾಂಕಿನ ಆಡಳಿತ ನಿರ್ದೇಶಕರಾಗಿದ್ದ ಕಾಲಘಟ್ಟದಲ್ಲಿ ತುಳುನಾಡಿನ ವಿದ್ಯಾವಂತರನ್ನು ಕರೆ ಕರೆದು ಮನೆಗೊಬ್ಬರಂತೆ ಕೆಲಸ ನೀಡಿದವರು ಎಂದು ತುಂಗಾ ಸಮೂಹ ಹೋಟೆಲುಗಳ ಆಡಳಿತ ನಿರ್ದೇಶಕ ಶ್ರೀ ಸುಧಾಕರ್ ಹೆಗ್ಡೆಯವರು ನುಡಿದರು. ಅವರು ಎಪ್ರಿಲ್ 2ರಂದು ಮಲಾಡ್ ಪಶ್ಚಿಮದ ಹೋಟೆಲ್ ಸಾಯಿ ಪ್ಯಾಲೇಸ್ ಗ್ರ್ಯಾಂಡ್ ಇಲ್ಲಿ ನಡೆದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಮುಂದುವರಿದು ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ವ್ಯಾಸಂಗಮಾಡಿದವರು ಇಂದು ದೇಶ ವಿದೇಶಗಳಲ್ಲಿ ದೊಡ್ಡ ದೊಡ್ಡ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಹೆತ್ತು ಹೊತ್ತು ಸಾಕಿದ ತಂದೆ ತಾಯಿಗಳನ್ನು ಹಾಗೂ ನಮಗೆ ವಿದ್ಯೆ ನೀಡಿದ ಸಂಸ್ಥೆಗಳನ್ನು ಎಂದಿಗೂ ನಾವು ಮರೆಯಬಾರದು. ಉದಯ್ ಸುಂದರ್ ಶೆಟ್ಟಿಯವರ ದಕ್ಷ ಅಧ್ಯಕ್ಷತೆಯಲ್ಲಿ ಈ ಹಿರಿಯ ವಿದ್ಯಾರ್ಥಿಗಳ ಸಂಘವು ಬೆಳೆದು ಬಂದ ರೀತಿ ಮತ್ತು ತಾವು ಕಲಿತ ಕಾಲೇಜಿನ ಬಲವರ್ಧನೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರು. 

          ಸಂಘದ ಸಲಹೆಗಾರ ನಡಿಬೆಟ್ಟು ಶ್ರೀ ನಿತ್ಯಾನಂದ ಹೆಗ್ಡೆಯವರು  ಮಾತನಾಡಿ, ಸಂಘ ಸಂಸ್ಥೆಗಳ ಹುರುಪು ಉಲ್ಲಾಸ ಐದಾರು ವರ್ಷಗಳಲ್ಲಿ ಇಳಿಮುಖವಾಗುವುದನ್ನು ಕಾಣುತ್ತೇವೆ. ಆದರೆ ಈ ಹಳೆ ವಿದ್ಯಾರ್ಥಿ ಸಂಘದ ಉತ್ಸಾಹ ಕುಂದದೆ ಚಿಗುರುತ್ತಿರುವುದು ಮತ್ತು ಹದಿಮೂರು ವರ್ಷಗಳಲ್ಲಿ ಏರಿದ ಎತ್ತರ ಸಂತಸ ತಂದಿದೆ ಎಂದರು. ಸಂಘದ ಪೋಷಕರಾರದ ಪೆನಿನ್ಸುಲಾ ಸಮೂಹ ಹೋಟೆಲುಗಳ ಆಡಳಿತ ನಿರ್ದೇಶಕ ಶ್ರೀ ಸತೀಶ್ ಶೆಟ್ಟಿಯವರು, ಇಂದಿನ ಮಕ್ಕಳಿಗೆ ನಮ್ಮ ಊರಿನ ಶ್ರೀಮಂತ ಸಂಸ್ಕೃತಿಯನ್ನು ತೋರಿಸುವ, ತಿಳಿಸುವ ಅಗತ್ಯವಿದೆ ಎಂದರು. 

           ಮಾರ್ಗದರ್ಶಕ, ಎಂ. ಎಸ್. ಆರ್. ಎಸ್. ಕಾಲೇಜಿನ ಮಾಜಿ ಪ್ರಾಧ್ಯಾಪಕ, ಪ್ರಸ್ತುತ ಬಂಟರ ಸಂಘ ಮುಂಬಯಿ ಪ್ರಾಯೋಜಿತ ಎಸ್. ಎಂ. ಶೆಟ್ಟಿ ಕಾಲೇಜ್ ಪೊವೈ ಇಲ್ಲಿಯ ಪ್ರಾಂಶುಪಾಲರಾದ ಡಾ. ಶ್ರೀಧರ್ ಶೆಟ್ಟಿಯವರು ಮಾತನಾಡಿ, ಕೀರ್ತಿಶೇಷರಾದ  ಮುದ್ದು ಶೆಟ್ಟಿ, ಸುಂದರ್ ರಾಮ್ ಶೆಟ್ಟಿ, ಸತೀಶ್ಚಂದ್ರ ಹೆಗ್ಡೆಯವರಂಥ ಧೀಮಂತ ವ್ಯಕ್ತಿಗಳು ಸಮರ್ಪಣಾ ಭಾವದೊಂದಿಗೆ ಶಿರ್ವದಂಥ ಗ್ರಾಮೀಣ ಪ್ರದೇಶದಲ್ಲಿ ಕಟ್ಟಿ ಬೆಳೆಸಿದ ವಿದ್ಯಾದೇಗುಲದಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ.

ಹಳೆ ವಿದ್ಯಾರ್ಥಿಗಳಿಂದ ಪ್ರಸ್ತುತ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಬಿಸಿಯೂಟದ ವ್ಯವಸ್ಥೆ ವಿನೂತನವಾದುದು. ಅದನ್ನು ಉಳಿಸಿ ಬೆಳೆಸುವ ತೀವ್ರ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ನನ್ನನ್ನೂ ಸೇರಿ ಎಲ್ಲರೂ ಉದಾರತೆಯಿಂದ ಆರ್ಥಿಕವಾಗಿ ಸ್ಪಂದಿಸಬೇಕೆಂದು ಹಳೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

          ಅಧ್ಯಕ್ಷ, ಉದಯ್ ಸುಂದರ್ ಶೆಟ್ಟಿ ಮಾತನಾಡಿ,  ಸಮಾಜದ ಶ್ರೇಷ್ಠ ವ್ಯಕ್ತಿಗಳೊಂದಿಗಿನ ಒಡನಾಟವು ನಮ್ಮ ವ್ಯಕ್ತಿತ್ವದಲ್ಲಿ ಅಮೂಲಗ್ರಹ ಬದಲಾವಣೆಗಳನ್ನು ತರಬಲ್ಲುದು. ನಮ್ಮ ಜೀವನದಲ್ಲಿ ಅನುಭವಿ ಹಾಗೂ ಮಾಗಿದ ವ್ಯಕ್ತಿಗಳಿಂದ ಕಲಿಯುವ ಜೀವನ ಮೌಲ್ಯಗಳನ್ನು ಯಾವ ವಿಶ್ವ ವಿದ್ಯಾಲಯಗಳು ಕಲಿಸಲಾರವು. ಸಂಘವು 2016ರಿಂದ ಪ್ರಸ್ತುತ ವಿದ್ಯಾರ್ಥಿಗಳಿಗೆ ಪ್ರಾಯೋಜಿಸುತ್ತಿರುವ ಬಿಸಿಯೂಟದ ಪ್ರಯೋಜನವನ್ನು 250 ವಿದ್ಯಾರ್ಥಿಗಳು ಪಡೆಯುತ್ತಿರುವುದು ಸಂತಸದ ಸಂಗತಿ. ಪದಾಧಿಕಾರಿಗಳ ಸಾಂಘಿಕ ಪ್ರಯತ್ನ ಹಾಗೂ ಉದಾರತೆಯ ಫಲವಾಗಿ ಸಂಘವು 13 ವರ್ಷಗಳಲ್ಲಿ ಈ ಎತ್ತರಕ್ಕೆ ಏರಲು ಸಾಧ್ಯವಾಯಿತು. ಕೋವಿಡ್ ಸಂಕಷ್ಟದಲ್ಲಿ ನಾವೆಲ್ಲ ಪರಸ್ಷರ ಸಂಪರ್ಕದಲ್ಲಿದ್ದು ಸಹಕರಿಸುತ್ತಿದ್ದೆವು ಎಂದು ತಿಳಿಸಿದರು.

         ಈ ಸಂದರ್ಭದಲ್ಲಿ ಶ್ರೀ ಸುಧಾಕರ್ ಹೆಗ್ಡೆ ಹಾಗೂ  ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ದಂಪತಿಗಳನ್ನು  ಸನ್ಮಾನಿಸಲಾಯಿತು. ಶ್ರೀಮತಿ ಜ್ಯೋತಿ ಶೆಟ್ಟಿ ಸೂಡ ಸನ್ಮಾನ ಪತ್ರ ವಾಚಿಸಿದರು. ಸಂಘದ ಉಪಾಧ್ಯಕ್ಷ ಶ್ರೀ ಅಶೋಕ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಮೊದಲಿಗೆ ಶ್ರೀಮತಿ ಲಕ್ಷ್ಮೀ ಸತೀಶ್ ಶೆಟ್ಟಿಯವರ ಪ್ರಾರ್ಥನಾ ಗೀತೆಯೊಂದಿಗೆ ನೆರೆದ ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷ ಪಲಿಮಾರು ವಸಂತ್ ಶೆಟ್ಟಿಯವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಸಿ.ಎ. ರವಿರಾಜ್ ಶೆಟ್ಟಿಯವರು 2020 ರಿಂದ 2023ರ ಈ ವರೆಗಿನ ಸಂಘದ ಖರ್ಚು ವೆಚ್ಚಗಳ ಯಾದಿಯನ್ನು ವಾಚಿಸಿದರು.

ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಎರಡು ವರ್ಷಗಳಲ್ಲಿ ಸಂಘವು ನಿರ್ವಹಿಸಿದ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದರು. ಸಂಘದ ಸದಸ್ಯ ಹರೀಶ್ ಶೆಟ್ಟಿ ಪಂಜಿಮಾರು ಅವರ ಪ್ರತಿಭಾವಂತ ಮಗಳು ಡಾ. ಹರ್ಷಿತಾ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಅಭ್ಯಾಸದ ಕುರಿತಾಗಿ ಸಲಹೆಯನ್ನೂ ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.

ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶಬುನ ಸತೀಶ್ ಶೆಟ್ಟಿ ಹಾಗೂ ಜಗದೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಜಾತ ಶೆಟ್ಟಿಯವರು ವಂದಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷರುಗಳಾದ ಅಶೋಕ್ ಶೆಟ್ಟಿ, ಪಲಿಮಾರು ವಸಂತ್ ಶೆಟ್ಟಿ, ಖಾಂದೇಶ್ ಭಾಸ್ಕರ್ ಶೆಟ್ಟಿ, ಮೋಹನ್ ಶೆಟ್ಟಿ ಕಾಪು ಹಾಗೂ ಸಮನ್ವಯಕ ವಾಲ್ಟರ್ ಮಥಾಯಸ್ ಉಪಸ್ಥಿತರಿದ್ದರು.

         ಸಭಾ ಕಾರ್ಯಕ್ರಮದ ಪೂರ್ವದಲ್ಲಿ ನಡೆದ ಸಂಗೀತಗೋಷ್ಠಿಯಲ್ಲಿ  ಸುರೇಶ್ ಶೆಟ್ಟಿ ಶಿಬರೂರು ಮತ್ತು ಲಕ್ಷ್ಮೀ ಸತೀಶ್ ಶೆಟ್ಟಿಯವರು ದೇವರನಾಮಗಳನ್ನು ಹಾಡಿದರು. ಸದಸ್ಯರ ಮತ್ತು ಅವರ ಮಕ್ಕಳ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಸುರೇಶ್ ಶೆಟ್ಟಿಯವರು ನಡೆಸಿಕೊಟ್ಟರು. ಸಾಯಿ ಪ್ಯಾಲೇಸ್ ಹೋಟೆಲಿನ  ಆದರಾತಿಥ್ಯದ ಪ್ರೀತಿ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವರದಿ: ಉದಯ ಬಿ. ಶೆಟ್ಟಿ, ಪಂಜಿಮಾರು